ನವದೆಹಲಿ: ನೀರಿನ ಪಾಲು ಹಂಚಿಕೆ ಸೂತ್ರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ, ಗೋದಾವರಿ–ಕಾವೇರಿ ನದಿಗಳ ಜೋಡಣೆಯಲ್ಲಿ ಹೆಚ್ಚುವರಿ 5 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದರಷ್ಟೇ ಕರಡು ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದು ಸ್ಪಷ್ಟಪಡಿಸಿದೆ.
ನದಿಗಳ ಜೋಡಣೆ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿ ನಡೆದ ವಿಶೇಷ ಸಭೆಯಲ್ಲಿ ಭಾಗವಹಿಸಿದ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ನಿಲುವನ್ನು ತಿಳಿಸಿದರು.
ಇದನ್ನೂ ಓದಿ : ಕಾರಿಡಾರ್ಗಾಗಿ ಭೂಮಿ ಕಳೆದುಕೊಂಡವರಿಗೆ ಹೆಚ್ಚುವರಿ ಪರಿಹಾರ: ಎಂ.ಆರ್.ರವಿ
ಗೋದಾವರಿ ನದಿಯ ಉಪನದಿ ಇಂದ್ರಾವಳಿಯಲ್ಲಿ ಬಳಕೆಯಾಗದ 147.93 ಟಿಎಂಸಿ ಅಡಿ ನೀರನ್ನು ನದಿ ತಿರುವು ಯೋಜನೆಗೆ ಬಳಸಿಕೊಳ್ಳಲಾಗುತ್ತದೆ. ಗೋದಾವರಿ–ಕಾವೇರಿ ನದಿಗಳ ಜೋಡಣೆ ಯೋಜನೆಯಲ್ಲಿ ಗೋದಾವರಿ–ಕೃಷ್ಣಾ (ನಾಗಾರ್ಜುನಸಾಗರ), ಕೃಷ್ಣಾ–ಪೆನ್ನಾರ್ (ಸೋಮಶಿಲಾ) ಹಾಗೂ ಪೆನ್ನಾರ್–ಕಾವೇರಿ ನದಿಗಳ ಜೋಡಣೆ ಮಾಡಲಾಗುತ್ತದೆ. ಬೇಡ್ತಿ–ವರದಾ ನದಿ ಜೋಡಣೆಯಿಂದ 18 ಟಿಎಂಸಿ ಅಡಿ ನೀರು ದೊರಕಲಿದೆ ಎಂದು ಜಲಶಕ್ತಿ ಸಚಿವಾಲಯವು ಸಭೆಗೆ ತಿಳಿಸಿತು.
ಹೆಚ್ಚುವರಿ 147.93 ಟಿಎಂಸಿ ಅಡಿ ನೀರಿನಲ್ಲಿ ಕನಿಷ್ಠ 40 ಟಿಎಂಸಿ ಅಡಿಯನ್ನಾದರೂ ಒದಗಿಸಬೇಕು ಎಂದು ಶಿವಕುಮಾರ್ ಅವರು ಕೇಂದ್ರ ಸಚಿವರ ಗಮನಕ್ಕೆ ತಂದರು. ಉತ್ತರ ಕರ್ನಾಟಕದ ಸಾಕಷ್ಟು ಪ್ರದೇಶ ನೀರಾವರಿಯಿಂದ ವಂಚಿತವಾಗಿದೆ. ಈ ಪ್ರದೇಶಗಳಿಗೆ ನೀರುಣಿಸಲು ನದಿ ಜೋಡಣೆಯ ಸಂದರ್ಭದಲ್ಲಿ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡಬೇಕು. ನೀರಿನ ಪಾಲನ್ನು ನ್ಯಾಯಬದ್ಧವಾಗಿ ಹಂಚಿಕೆ ಮಾಡಿದರಷ್ಟೇ ಕರಡು ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧ ಎಂದು ಅವರು ಪುನರುಚ್ಚರಿಸಿದರು.
ಇದನ್ನೂ ನೋಡಿ : ಪರ್ಯಾಯ ರಾಜಕಾರಣದ ಕಹಳೆ ಮೊಳಗಿಸಿದ ಸಾವಿರಾರು ಜನ Janashakthi Media
