ರಸ್ತೆಗಳಲ್ಲಿ ಗುಂಡಿ ಉಳಿದರೆ ಆಯುಕ್ತರು, ಎಂಜಿನಿಯರ್‌ಗಳ ಮೇಲೆ ಕ್ರಮ: ಸೆಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ರಸ್ತೆಗಳಲ್ಲಿ ಗುಂಡಿ ಉಳಿದರೆ, ತ್ಯಾಜ್ಯ ವಿಲೇವಾರಿ ಆಗದಿದ್ದರೆ ಸಂಬಂಧಪಟ್ಟ ನಗರ ಪಾಲಿಕೆಗಳ ಆಯುಕ್ತರು ಹಾಗೂ ಎಂಜಿನಿಯರ್‌ಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ರಸ್ತೆಗಳ ಪರಿಸ್ಥಿತಿ ಅರಿಯಲು ಸೆಪ್ಟೆಂಬರ್‌ 27ರಂದು ನಗರ ಹಲವು ಪ್ರದೇಶಗಳಲ್ಲಿ ಸುತ್ತಾಟ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

“ನಗರದಲ್ಲಿ ಯೋಗ್ಯ ರಸ್ತೆಗಳನ್ನು ನಿರ್ಮಿಸಲು 30 ದಿನಗಳ ಗಡುವು ನೀಡಲಾಗಿದೆ. ಆ ವೇಳೆಗೆ ಎಲ್ಲಿಯೂ ಗುಂಡಿ ಇರಬಾರದು. ಗುಣಮಟ್ಟದ ಕಾಮಗಾರಿ ನಡೆಸಿ ಗುಂಡಿಗಳನ್ನು ಮುಚ್ಚಬೇಕು. ಇಲ್ಲದಿದ್ದರೆ, ಕಠಿಣ ಕ್ರಮವಾಗುತ್ತದೆ” ಎಂದು ಹೇಳಿದರು.

“ರಸ್ತೆಗಳ ಕೆವೆಡೆಗಳಲ್ಲಿ ತ್ಯಾಜ್ಯವನ್ನು ನಿರ್ವಹಿಸದೇ ಹಾಗೇ ಬಿಡಲಾಗಿದೆ. ತ್ಯಾಜ್ಯವನ್ನು ತ್ವರಿತವಾಗಿ ತೆಗೆಯಬೇಕೆಂದು ಸೂಚನೆ ನೀಡಲಾಗಿದೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಔಷಧಗಳ ಮೇಲೆ 100% ತೆರಿಗೆ: ಪ್ರಧಾನಿ ನರೇಂದ್ರ ಮೋದಿ ನೇರ ಕಾರಣ – ಎಂ. ಬಿ ಪಾಟೀಲ್ ಆಕ್ರೋಶ

“ಮಳೆಗಾಲದಲ್ಲಿ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ಇವುಗಳನ್ನು ದುರಸ್ತಿಗೊಳಿಸಿ, ರಸ್ತೆಗಳನ್ನು ಸಂಚಾರ ಯೋಗ್ಯವಾಗಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ” ಎಂದರು.

“ಕರ್ತವ್ಯದಲ್ಲಿ ನಿರ್ಲಕ್ಷ್ಯದ ಕಾರಣ ಹೆಣ್ಣೂರು ಬಾಗಲೂರು ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಅವರನ್ನು ಅಮಾನತುಗೊಳಿಸಲಾಗಿದೆ. ಗುಂಡಿ ಮುಚ್ಚಲು ಕೇವಲ ಜಲ್ಲಿ ಹಾಕಿ ಟಾರ್ ಹಾಕದೇ ಹಾಗೇ ಬಿಟ್ಟಿದ್ದರಿಂದ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

“ಹೆಣ್ಣೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ನಿರ್ವಹಣೆಯನ್ನು ಸಂಬಂಧಪಟ್ಟ ಗುತ್ತಿಗೆದಾರರ ಜವಾಬ್ದಾರಿಯಾಗಿರುತ್ತದೆ. 5 ಕಿ.ಮೀನಲ್ಲಿ ಕಾಮಗಾರಿ ನಡೆಯುತ್ತಿದ್ದು, ಪ್ರತಿ ಕಿ.ಮೀಗೆ ₹ 13 ಕೋಟಿ ವೆಚ್ಚ ಮಾಡಲಾಗುತ್ತಿದೆ. ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿದೆ. ರಸ್ತೆಗಳಲ್ಲಿ ಯಾವುದೇ ಗುಂಡಿಗಳಿಲ್ಲದಂತೆ ಮುಚ್ಚಬೇಕೆಂದು ಸೂಚನೆ ನೀಡಲಾಗಿದೆ” ಎಂದರು.

“ರಸ್ತೆ ಗುಂಡಿಗಳಿರುವುದು ನಿಜ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರಸ್ತೆ ಗುಂಡಿಗಳ ದುರಸ್ತಿ ನಡೆದಿದ್ದರೆ, ರಸ್ತೆಗಳು ಇಂತಹ ಪರಿಸ್ಥಿತಿಗೆ ತಲುಪುತ್ತಿರಲಿಲ್ಲ. ಹಾಗೆಂದು ಅವರ ಮೇಲೆ ಆರೋಪ ಹೊರಿಸುವುದಿಲ್ಲ. ನಾವು ಆಡಳಿತ ನಡೆಸುತ್ತಿದ್ದು, ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳುತ್ತೇವೆ. ಮಳೆಗಾಲ ಮುಗಿಯುವುದರೊಳಗೆ ರಸ್ತೆ ಗುಂಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

* ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ಬಳಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿ ರಸ್ತೆಯಲ್ಲಿ ನೀರು ನಿಲ್ಲದೆ ಸರಾಗವಾಗಿ ಹರಿಯುಂತೆ ಮಾಡಿ

* ವಿಂಡ್ಸರ್‌ ಮ್ಯಾನರ್ ವೃತ್ತದಲ್ಲಿನ ರಸ್ತೆ ಕಾರ್ಯವನ್ನು ರಾತ್ರಿಯಲ್ಲಿ ಮುಗಿಸಬೇಕು

* ವರ್ತುಲ ರಸ್ತೆಯ ಬದಿಯಲ್ಲಿ ಕಟ್ಟಡ ತ್ಯಾಜ್ಯ ಸುರಿದವರನ್ನು ಪತ್ತೆ ಹಚ್ಚಿ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಿ

* ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು

* ಮೆಟ್ರೊ ಕಾಮಗಾರಿ ನಡೆಯುವ ಸಂದರ್ಭಗಳಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಲಕ್ಷ್ಯ ಮಾಡಬಾರದು. ರಸ್ತೆ ಬದಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಬೇಕು

* ಹಾಳಾಗಿರುವ ವೈಟ್ ಟಾಪಿಂಗ್ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಬೇಕು ಸರ್ವೀಸ್ ರಸ್ತೆಗಳ ನಿರ್ವಹಣೆ ಮಾಡಬೇಕು

* ಹೆಣ್ಣೂರು ಮೇಲ್ಸೇತುವೆ ಕೆಳಗೆ ಕಟ್ಟಡ ತ್ಯಾಜ್ಯ ಸುರಿದಿದ್ದು ಅದರಲ್ಲಿ ಆಳೆತ್ತರದ ಗಿಡಗಳು ಬೆಳೆದಿವೆ. 24 ಗಂಟೆಯಲ್ಲಿ ತ್ಯಾಜ್ಯ ತೆರವುಗೊಳಿಸಿ ಸ್ವಚ್ಛಗೊಳಿಸಬೇಕು

* ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್‌ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕು. ವೈಟ್‌ ಟಾಪಿಂಗ್‌ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಅದರ ಸಂಪೂರ್ಣ ನಿರ್ವಹಣೆ ಗುತ್ತಿಗೆದಾರರದ್ದೇ ಹೆಚ್ಚಿನ ಹಣ ನೀಡುವುದಿಲ್ಲ

* ವೈಟ್ ಟಾಪಿಂಗ್ ಮುಗಿಯಲು ಎರಡು ಮೂರು ವರ್ಷವಾದರೂ ಆ ಅವಧಿಯಲ್ಲಿ ಗುತ್ತಿಗೆದಾರರೇ ರಸ್ತೆ ನಿರ್ವಹಣೆ ಮಾಡಬೇಕು

* ರಸ್ತೆ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳ ವಿರುದ್ದ ಕ್ರಮ ಕೈಗೊಳ್ಳಬೇಕು

ಸಿಎಂ ನಗರ ಸುತ್ತಾಟ

* ಪಣತ್ತೂರು ಕ್ರಾಸ್ ಬಳಿ ರಸ್ತೆಯುದ್ದಕ್ಕೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಗಮನಿಸಿದ ಮುಖ್ಯಮಂತ್ರಿಯವರು ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಕ್ರಮ ಕೈಗೊಳ್ಳಬೇಕು. ಮಾರ್ಷಲ್‌ಗಳನ್ನು ಕರ್ತವ್ಯಕ್ಕೆ ನಿಯೋಜಿಸಿ ತ್ಯಾಜ್ಯ ಸುರಿಯುತ್ತಿರುವವರವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಜಿಬಿಎ ಮುಖ್ಯ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

* ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ರಸ್ತೆಗಳನ್ನು ನಿರ್ವಹಣೆ ಮಾಡದ ಗುತ್ತಿಗೆದಾರರು ಹಾಗೂ ಎಂಜಿನಿಯರ್‌ಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.

* ಹೆಣ್ಣೂರು ‌ಮೇಲ್ಸೇತುವೆ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿರುವುದನ್ನು ಕಂಡು ಸಿಟ್ಟಾದ ಸಿದ್ದರಾಮಯ್ಯ ‘ಇದು ತುಂಬಾ ಹಳೆ ತ್ಯಾಜ್ಯ.. ಇಷ್ಟು ವರ್ಷ ಎಷ್ಟು ಅಧಿಕಾರಿಗಳು ಇಲ್ಲಿ ಓಡಾಡಿರುತ್ತೀರಿ? ಯಾರ ಕಣ್ಣಿಗೇ ಬಿದ್ದಿಲ್ವಾ?  24 ಗಂಟೆಗಳೊಗೆ ತ್ಯಾಜ್ಯ ತೆರವುಗೊಳಿಸಬೇಕು’ ಎಂದು ಕಟ್ಟಪ್ಪಣೆ ಮಾಡಿದರು.

* ವರ್ತುಲ ರಸ್ತೆಯ ಬದಿಯಲ್ಲಿ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿದ್ದರಾಮಯ್ಯ ಕಾರು ನಿಲ್ಲಿಸುವಂತೆ ಸೂಚಿಸಿ ಕೆಳಗಿಳಿದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ‘ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡುತ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ’ ಎಂದು ಜಿಡಿಎ ಬಿಡಿಎ ಮತ್ತು ಸಂಚಾರ ಪೊಲೀಸರನ್ನು ಪ್ರಶ್ನಿಸಿದರು.

ಇದನ್ನೂ ನೋಡಿ: ಧರ್ಮಸ್ಥಳ ವ್ಯಾಪ್ತಿಯಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು: ಸೆಪ್ಟೆಂಬರ್ 25ರಂದು ಬೃಹತ್ ‘ನ್ಯಾಯ ಸಮಾವೇಶ

Donate Janashakthi Media

Leave a Reply

Your email address will not be published. Required fields are marked *