ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ ಮೊರೆ: ಮನು ಸಿಂಘ್ವಿ ವಾದ

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರ್ನಾಟಕ ಹೈಕೋರ್ಟ್ ಗೆ ಮೊರೆ ಹೋಗಿದ್ದು, ಕಾನೂನು ಸಮರಕ್ಕೆ ನಾಂದಿ ಹಾಡಿದ್ದಾರೆ.

ಸೋಮವಾರ ಬೆಳಿಗ್ಗೆ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಾ ಕುಮಾರ್ ಸಿದ್ದರಾಮಯ್ಯ ಪರ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಪ್ರಕರಣದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಮನು ಸಿಂಘ್ವಿ ಹೈಕೋರ್ಟ್ ನಲ್ಲಿ ವಾದ ಮಂಡಿಸಿದರು. ಸಚಿವ ಸಂಪುಟದ ಸಲಹೆ ಮೀರಿ ರಾಜ್ಯಪಾಲರು ತೀರ್ಮಾನ ಕೈಗೊಳ್ಳುವಂತಿಲ್ಲ. ಅಲ್ಲದೇ ಯಾವುದೇ ತನಿಖೆಯೂ ನಡೆದಿಲ್ಲ. ಅಥವಾ ಪ್ರಾಥಮಿಕ ತನಿಖಾ ವರದಿಯಲ್ಲೂ ದೃಢವಾಗಿಲ್ಲ. ಹಾಗಿದ್ದೂ ರಾಜ್ಯಪಾಲರ ನಿರ್ಣಯ ರಾಜಕೀಯ ದುರುದ್ದೇಶ ಮತ್ತು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ಹೊಂದಿರುವುದು ಸ್ಪಷ್ಟವಾಗುತ್ತದೆ. ಆದ್ದರಿಂದ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.

ಮೂವರು ನೀಡಿದ ಖಾಸಗಿ ದೂರಿನ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವುದೇ ತನಿಖೆಯ ವರದಿ ಇಲ್ಲದೇ ಕೇವಲ ದೂರು ಆಧರಿಸಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಸ್ವತಃ ವಕೀಲರು ಆಗಿರುವ ಸಿದ್ದರಾಮಯ್ಯ ರಾಜ್ಯಪಾಲರ ನಡೆ ರಾಜಕೀಯವಾಗಿದ್ದು, ಬಹುಮತದ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ಆಗಿದ್ದು, ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದರು.

ಕಾನೂನು ತಜ್ಞರ ಜೊತೆ ಹಲವಾರು ಸುತ್ತಿನ ಮಾತುಕತೆ ನಂತರ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ಮೊರೆ ಹೋಗುವ ಮೂಲಕ ರಾಜ್ಯಪಾಲರ ವಿರುದ್ಧ ಕಾನೂನು ಸಮರ ಆರಂಭಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *