ಹುಬ್ಬಳ್ಳಿ | ಪ್ರೀತಿಸಿ ಅಂತರ್ಜಾತಿ ವಿವಾಹವಾದ ಗರ್ಭಿಣಿ ಮಗಳನ್ನೇ ಕೋಂದ ತಂದೆ!

ಹುಬ್ಬಳ್ಳಿ:  ಪ್ರೀತಿಸಿ, ಅಂತರ್ಜಾತಿ ಯುವಕನನ್ನು ವಿವಾಹವಾಗಿದ್ದ ಮಗಳನ್ನು ತಂದೆಯೇ ಭೀಕರವಾಗಿ ಹಲ್ಲೆಗೈದು ಕೊಲೆ ಮಾಡಿರುವ ಮರ್ಯಾದಾ ಪ್ರಕರಣ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಯುವತಿಯ ತಂದೆ ವೀರನಗೌಡ ಪಾಟೀಲ ಹಾಗೂ ಆತನ ಸಂಬಂಧಿಕರು ಕೊಲೆ ಮಾಡಿರುವ ಆರೋಪಿಗಳು. ಏಳು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯ ಪಾಟೀಲ (19) ಕೊಲೆಗೀಡಾದ ಗರ್ಭಿಣಿ. ಮಾರಕಾಸ್ತ್ರಗಳಿಂದ ಭೀಕರ ದಾಳಿ ಮಾಡಿದ್ದರಿಂದ ಗಂಭೀರ ಗಾಯಗೊಂಡಿದ್ದ ಮಾನ್ಯ ಕೊನೆಯುಸಿರೆಳೆದಿದ್ದಾಳೆ. ಮಾನವ ಕುಲವೇ ತಲೆತಗ್ಗಿಸುವಂತಹ ಅಮಾನುಷ ಕೃತ್ಯಕ್ಕೆ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ : ಬೆಂಗಳೂರು | ಸಾಹಿತ್ಯದಲ್ಲಿ ವಿಮರ್ಶೆಗೆ ಅವಕಾಶಗಳು ಕಡಿಮೆಯಾಗುತ್ತಿವೆ – ರಾಜೇಂದ್ರ ಚೆನ್ನಿ

ಈ ಮದುವೆಗೆ ಮೇಲ್ವರ್ಗಕ್ಕೆ ಸೇರಿದ ಯುವತಿಯ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಾನ್ಯ ಪಾಟೀಲ ಇನಾಂವೀರಾಪುರ ಗ್ರಾಮದ ದಲಿತ ಸಮುದಾಯದ ಯುವಕ ವಿವೇಕಾನಂದ ದೊಡ್ಡಮನಿ ಎಂಬಾತನನ್ನು ಪ್ರೀತಿಸಿದ್ದಳು. ಆದರೆ, ಪೊಲೀಸರ ಸಮ್ಮುಖದಲ್ಲಿ ನಡೆದ ರಾಜಿ ಪಂಚಾಯಿತಿಯ ಬಳಿಕ ಏಳು ತಿಂಗಳ ಹಿಂದೆ ಇಬ್ಬರೂ ವಿವಾಹವಾಗಿದ್ದರು. ಬಳಿಕ ಪ್ರಾಣ ಭಯದಿಂದ ಹಾವೇರಿ ಜಿಲ್ಲೆಯಲ್ಲಿ ನೆಲೆಸಿದ್ದ ದಂಪತಿ, ಡಿಸೆಂಬರ್​​ 8ರಂದು ಊರಿಗೆ ಮರಳಿದ್ದರು. ಆದರೆ, ವೈರತ್ವದ ಕಿಚ್ಚು ಹಚ್ಚಿಕೊಂಡಿದ್ದ ಯುವತಿಯ ತಂದೆ ವೀರನಗೌಡ ಪಾಟೀಲ ಹಾಗೂ ಆತನ ಸಂಬಂಧಿಕರು, ಭಾನುವಾರ ಸಂಜೆ ದಂಪತಿಯ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಭೀಕರ ದಾಳಿ ನಡೆಸಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗರ್ಭಿಣಿ ಮಾನ್ಯ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಾಳಿ ಸಂದರ್ಭದಲ್ಲಿ ಮಾನ್ಯಳನ್ನು ರಕ್ಷಿಸಲು ಬಂದ ವಿವೇಕಾನಂದ ಹಾಗೂ ಆತನ ಪೋಷಕರ ಮೇಲೂ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಇತರ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣದಲ್ಲಿ ಯುವತಿಯ ತಂದೆ ವೀರನಗೌಡ ಪಾಟೀಲ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವೇಕಾನಂದ ಮಾವ ಬಸವರಾಜ್ ಮಾತನಾಡಿ, ಇವರಿಬ್ಬರೂ ಕಾಲೇಜಿನಲ್ಲಿದ್ದಾಗ ಪ್ರೀತಿ ಮಾಡುತ್ತಿದ್ದರು.‌ ಈ ವಿಷಯ ನಮ್ಮ ಮಾವನವರಿಗೆ ಗೊತ್ತಾಗಿ, ನಮ್ಮ‌ ಜಾತಿ ಬೇರೆ, ಅವರ ಜಾತಿ ಬೇರೆ, ಇದನ್ನು ಇಲ್ಲಿಗೆ ಬಿಡಿ ಅಂತ ಬುದ್ಧಿವಾದ ಹೇಳಿದ್ದರು. ಆದರೆ ಹುಡುಗಿಯೇ ನೀನು ನನ್ನನ್ನು ಮದುವೆ ಆಗದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಂತ ಯುವಕನಿಗೆ ಹೇಳಿದ್ದಳು. ಹೀಗಾಗಿ ಇಬ್ಬರೂ ಮದುವೆಯಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದರು. ನಿನ್ನೆ ಮನೆಗೆ ಬಂದ ಹುಡುಗಿಯ ತಂದೆ ಹಾಗೂ ಸಂಬಂಧಿಗಳು ಸಿಸಿಟಿವಿ ಒಡೆದುಹಾಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಇದೊಂದು ಮರ್ಯಾದಾ ಹತ್ಯೆ, ಕೆಳಜಾತಿಯವರು ಮೇಲ್ಜಾತಿಯವರನ್ನು ಪ್ರೀತಿಸಬಾರದಾ? ಈ‌ ಕೃತ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದರು.
https://www.youtube.com/watch?v=POtEHXHD26c&t=286s
Donate Janashakthi Media

Leave a Reply

Your email address will not be published. Required fields are marked *