ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸರನ್ ಕಣಿವೆಯಲ್ಲಿ ಮಂಗಳವಾರ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ಧ ಜನತೆ ಪ್ರತಿರೋಧಿಸಲು ಕರೆ ನೀಡುತ್ತದೆ ಎಂದು ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ. ಪಹಲ್ಗಾಮ್
ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಕೇಂದ್ರ ಸರಕಾರ ಖಾತ್ರಿಪಡಿಸಬೇಕು. ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಇದನ್ನೂ ಓದಿ: ಪಹಲ್ಗಾಂ ದಾಳಿ ಪರಿಣಾಮ: ಮುಂಬೈ–ದೆಹಲಿಯಲ್ಲಿ ಎಚ್ಚರಿಕೆ, ಜಮ್ಮುವಿನಲ್ಲಿ ಬುಧವಾರ ಬಂದ್ ಘೋಷಣೆ
ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಫ್ಐ ಸಂತಾಪಗಳನ್ನು ಸಲ್ಲಿಸುತ್ತದೆ. ರಾಷ್ಟ್ರದ ಭದ್ರತೆ ಅತ್ಯಂತ ಪ್ರಮುಖವಾಗಿದೆ. ಕೇಂದ್ರ ಸರಕಾರ ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆ ಎಂದು ಹೇಳುತ್ತಲೇಯಿದೆಯಾದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಿವೆ. ಆದ್ದರಿಂದ ಕೇಂದ್ರ ಸರಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಹೇಳಿದರು.
ಇದನ್ನೂ ನೋಡಿ: ವಚನಾನುಭವ – 27| ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ | ಅಕ್ಕ ಮಹಾದೇವಿ ವಚನ Janashakthi Media