ಬೆಂಗಳೂರು: ನವೆಂಬರ್ 3ರಂದು ರಾಜ್ಯ ಸರ್ಕಾರವು, ಈ ತಿಂಗಳಾಂತ್ಯಕ್ಕೆ ಅವಧಿ ಮುಕ್ತಾಯವಾಗಲಿರುವ ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲು ಐದು ತಿಂಗಳು ಸಮಯಾವಕಾಶದ ಅಗತ್ಯವಿದೆ ಎಂದು ಹೈಕೋರ್ಟ್ಗೆ ತಿಳಿಸಿದೆ.
ಹಾಗಾಗಿ, ಸರಕಾರದ ಈ ಹೇಳಿಕೆ ಗಮನಿಸಿದರೆ ಅವಧಿ ಕೊನೆಗೊಳ್ಳಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಕನಿಷ್ಠ ಇನ್ನೂ ಆರು ತಿಂಗಳು ಚುನಾವಣೆ ನಡೆಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಅವಧಿ ಮುಗಿದ ಬಳಿಕ ಸ್ಥಳೀಯ ಸಂಸ್ಥೆಗಳ ಚುಕ್ಕಾಣಿ ಆಡಳಿತಾಧಿಕಾರಿಗಳಿಗೆ ವರ್ಗಾವಣೆಗೊಳ್ಳಲಿದೆ.
ಎರಡನೇ ಅವಧಿಗೆ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ 16 ತಿಂಗಳ ಕಾಲ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರವಧಿಗೆ ಪರಿಗಣಿಸಬಾರದು ಹಾಗೂ ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡುವ ಕ್ರಮಕ್ಕೆ ಮುಂದಾಗದಂತೆ ನಿರ್ದೇಶನ ನೀಡಬೇಕೆಂದು ಕೋರಿ 65ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗಳ ಕುರಿತು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆಯನ್ನು ನಡೆಸಿತು.
ಇದನ್ನೂ ಓದಿ: ಗ್ರಾಮಗಳಿಗೆ ಪ್ರವೇಶ ನಿರಾಕರಿಸುವ ಫಲಕ ಹಾಕುವುದು ಸಂವಿಧಾನಬಾಹಿರವಲ್ಲ: ಹೈಕೋರ್ಟ್
ಸರಕಾರದ ಪರ ವಾದಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ‘‘ಅವಧಿ ಮುಗಿಯಲಿರುವ ಸುಮಾರು 188 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ವಾರು ಮೀಸಲು ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲು ಕನಿಷ್ಠ 150 ದಿನ ಬೇಕು,” ಎಂದು ಲಿಖಿತ ಹೇಳಿಕೆ ಸಲ್ಲಿಸಿದರು.
“ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲು ಜತೆಗೆ ಕೆಲವು ಸ್ಥಳೀಯ ಸಂಸ್ಥೆಗಳ ವಾರ್ಡ್ಗಳನ್ನು ಪುನರ್ ವಿಂಗಡಣೆ ಮಾಡಬೇಕಿದೆ. ಮೊದಲು ಕರಡು ಹೊರಡಿಸಿ, ಆಕ್ಷೇಪಣೆ ಆಹ್ವಾನಿಸಿ ಅವುಗಳನ್ನು ಇತ್ಯರ್ಥಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕಾಗುತ್ತದೆ. ಆದ್ದರಿಂದ 150 ದಿನಗಳು ಬೇಕಾಗುತ್ತದೆ. ಮೀಸಲು ಅಂತಿಮ ಅಧಿಸೂಚನೆ ಬಳಿಕ ಪಟ್ಟಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಬಳಿಕ ಆಯೋಗ ಮುಂದಿನ ಪ್ರಕ್ರಿಯೆ ಆರಂಭಿಸಬಹುದು,’’ ಎಂದು ವಿವರಿಸಿದರು.
ನಾಳೆ ಸಭೆ ನಡೆಸಲು ಆಯೋಗ, ಸರಕಾರಕ್ಕೆ ಸೂಚನೆ
ನಗರ ಸ್ಥಳೀಯ ಸಂಸ್ಥೆಗಳಿಗೆ ಯಾವಾಗ ಚುನಾವಣೆಯನ್ನು ನಡೆಸುತ್ತೀರಿ? ಅದಕ್ಕೂ ಮೊದಲು ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ನಿರ್ದಿಷ್ಟವಾಗಿ ಕಾಲಮಿತಿಯಲ್ಲಿ ಮುಗಿಯಲಿದೆ. ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಚುನಾವಣಾ ಆಯೋಗ ಮತದಾರರ ಪಟ್ಟಿ ತಯಾರಿಸುವ ಕಾರ್ಯ ನಡೆಸಬಹುದೇ ಎಂಬ ಬಗ್ಗೆ ಚರ್ಚಿಸಲು ರಾಜ್ಯ ಸರಕಾರ ಮತ್ತು ಚುನಾವಣಾ ಆಯೋಗ ಬುಧವಾರ (ನವೆಂಬರ್ 5) ಚುನಾವಣಾ ಆಯೋಗದ ಕಚೇರಿಯಲ್ಲಿ ಸಭೆ ನಡೆಸಿ ಅದರ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿ ನ್ಯಾಯಪೀಠ ವಿಚಾರಣೆಯನ್ನು ನವೆಂವರ್ 11ಕ್ಕೆ ಮುಂದೂಡಿತು.
ಜಿಬಿಎ ಚುನಾವಣೆಗೆ ಸುಪ್ರೀಂ ಕೋರ್ಟ್ ಗಡುವು
‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆ ನಡೆಸಲು ಅಗತ್ಯವಾಗಿರುವ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್ ನವೆಂಬರ್ 15ರವರೆಗೆ ಗಡುವು ವಿಸ್ತರಿಸಿದೆ. ಇದೇ ವೇಳೆ, ವಾರ್ಡ್ ಮೀಸಲು ಪ್ರಕಟಣೆ ಸೇರಿದಂತೆ ಬಾಕಿ ಕೆಲಸಗಳನ್ನು ಮುಗಿಸಲು ಡಿಸೆಂಬರ್ 15ರವರೆಗೆ ಅಂತಿಮ ಗಡುವನ್ನು ನೀಡಿದೆ.
2020ರಿಂದಲೂ ಬಾಕಿ ಇರುವ ಬಿಬಿಎಂಪಿ ಚುನಾವಣೆಗಳನ್ನು 2025ರ ನವೆಂಬರ್ 1ರೊಳಗೆ ನಡೆಸುವುದಾಗಿ ಈ ಮುನ್ನ ಸರಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.
‘ಜಿಬಿಎ’ ಚುನಾವಣೆ ಸಂಬಂಧ ಕಾಂಗ್ರೆಸ್ ಮುಖಂಡ ಎಂ ಶಿವರಾಜು ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರ್ಯಕಾಂತ್ , ಉಜ್ಜಲ್ ಭುಯಾನ್ ಮತ್ತು ಜೋಯ್ಮಲ್ಯ ಬಾಗ್ಚಿ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.
ಇದನ್ನೂ ನೋಡಿ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸಿದ್ದು ಯಾಕೆ? ಬಲಾಢ್ಯ ಜಾತಿಗಳು ವಿರೋಧಿಸಿದ್ದು ಯಾಕೆ? ರಾಜೇಂದ್ರ ಚೆನ್ನಿ ವಿಶ್ಲೇಷಣೆ
