ಯಾದಗಿರಿ: ರಾಜ್ಯದಲ್ಲಿ ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಳೆದ ಮೂರು ವರ್ಷದಲ್ಲಿ 13 ಸಾವಿರ ಕೋಟಿ ಅನುದಾನ ನೀಡಿದೆ. ಅಲ್ಲದೆ, ಮತ್ತೆ 5,000 ಕೋಟಿ ಅನುದಾನ ನೀಡಲು ಸೂಚನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವಂತಹ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಜೂನ್ 14 ಶನಿವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5300 ಕೋಟಿ ಮೊತ್ತ ಖರ್ಚಾಗಿದ್ದು ಕಾಮಗಾರಿ ಜನರಿಗೆ ತಲುಪಿದೆ. KKRDB ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲೇ ಇದೆ ಎಂದರು.
ಇದನ್ನೂ ಓದಿ: ಮರು ಜಾತಿಗಣತಿ: ಎಚ್.ವಿಶ್ವನಾಥ್ ಕಿಡಿ
42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು 847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ ಎಂದರು. ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ ಎಂದರು.
ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ. ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ 371 ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು. ಈ ಭಾಗದಲ್ಲಿ 371 ಜೆ ವಿಧಿ ಜಾರಿಯಾಗಲು ಧರ್ಮಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ನೋಡಿ: ಜಾತಿ ಗಣತಿ ವಿರೋಧಿಸಿದ ಮೋದಿಯವರ ಯು ಟರ್ನ್… ಸಮರ್ಥಿಸಿದ ಸಿದ್ದರಾಮಯ್ಯನವರು ಕವಲು ದಾರಿಯಲ್ಲಿ….