ರಾಜ್ಯದಿಂದ ಲೂಟಿ ಮಾಡಿ ಹಣ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್ ಸರಕಾರವು ಹಣವನ್ನು ಲೂಟಿ ಮಾಡಿ, ಸಿದ್ದರಾಮಯ್ಯನವರು ಮತ್ತು ಡಿ.ಕೆ. ಶಿವಕುಮಾರ್ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಭಾನುವಾರ ಬಿಡದಿಯಲ್ಲಿ ಪಾದಯಾತ್ರೆಗೆ ಚಾಲನೆ ಕೊಟ್ಟು ಅವರು ಮಾತನಾಡಿದರು. ದೀನದಲಿತರು, ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡಬೇಕಾದ ಆಡಳಿತ ಪಕ್ಷದವರು ವಿಪಕ್ಷಕ್ಕೇ ಮರುಪ್ರಶ್ನೆ ಹಾಕುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಮಾನ್ಯ ಮುಖ್ಯಮಂತ್ರಿಯವರೇ, ನೀವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದದ ಅಭಿವೃದ್ಧಿ ಹೆಸರಿನಿಂದ ಅಧಿಕಾರಕ್ಕೆ ಬಂದಿದ್ದೀರಿ. ನಿಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದನ್ನು ಸ್ವತಃ ಮುಖ್ಯಮಂತ್ರಿಗಳಾದ ನೀವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ವಾಲ್ಮೀಕಿ ನಿಗಮದಲ್ಲಿ ಹಗರಣ ಆದುದನ್ನು ಒಪ್ಪಿಕೊಂಡಿದ್ದೀರಲ್ಲವೇ? ನೀವು ನಮಗೆ ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಾಯಿಗೆ ಬಂದAತೆ ಮಾತನಾಡುತ್ತಿದ್ದಾರೆ. ಅಧಿಕಾರದ ದರ್ಪ, ಅಧಿಕಾರದ ಅಹಂನಿAದ ಉಪ ಮುಖ್ಯಮಂತ್ರಿಯವರು ಮಾತನಾಡುತ್ತಿದ್ದಾರೆ. ಅವರು ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಿಡದಿಯಲ್ಲಿರುವ ಟೊಯೊಟಾ ಫ್ಯಾಕ್ಟರಿ ಕೂಡ ಹೊರರಾಜ್ಯಕ್ಕೆ ಹೋಗುವ ಪರಿಸ್ಥಿತಿ ಉದ್ಭವವಾಗಿದೆ. ಹೊಸ ಉದ್ಯಮಗಳು, ಕೈಗಾರಿಕೆಗಳು ನಮ್ಮ ರಾಜ್ಯಕ್ಕೆ ಬರುತ್ತಿಲ್ಲ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿಮ್ಮ ದುರಹಂಕಾರದ ನಡವಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ; ಲೂಟಿ ಮಾಡುತ್ತ ಕುಳಿತಿದ್ದೀರಿ ಎಂದು ಟೀಕಿಸಿದರು.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಸತೀಶ್ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಮಂಜುನಾಥ್, ಶಾಸಕ ಕೃಷ್ಣಪ್ಪ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಗೋಪಾಲಯ್ಯ, ಮುಖಂಡ ಮಹೇಶ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

Donate Janashakthi Media

Leave a Reply

Your email address will not be published. Required fields are marked *