ಬೆಂಗಳೂರು: ಧರ್ಮದ ಹೆಸರಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ಗೆ ಅವಕಾಶ ನೀಡಲಾಗದು ಎಂದು ನವೆಂಬರ್ 20ರಂದು ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ನ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಖಡಕ್ ಎಚ್ಚರಿಕೆ ನೀಡಿದೆ. ದೇವರ
ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಹಾಗೂ ಗ್ರಾಮದ ರಸ್ತೆಯ ಸರಕಾರಿ ಜಾಗದಲ್ಲಿ ನಿರ್ಮಿಸಿರುವ ಮಳಿಗೆಗಳ ತೆರವಿಗೆ ತಹಸೀಲ್ದಾರ್ ಜಾರಿಗೊಳಿಸಿರುವ ನೋಟಿಸ್ ಪ್ರಶ್ನಿಸಿ ಗ್ರಾಮದ ವಿರಾಟ್ ಹಿಂದೂ ಸೇವಾ ಚಾರಿಟಬಲ್ ಟ್ರಸ್ಟ್ ಹಾಗೂ ಜಾಮೀಯಾ ಮಸ್ಜಿದ್ ಸಮಿತಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಈ ರೀತಿ ಮೌಖಿಕವಾಗಿ ಹೇಳಿದೆ.
ಅರ್ಜಿದಾರರು ಮಳಿಗೆಗಳನ್ನು ಕಟ್ಟಿರುವ ಜಾಗ ಸರಕಾರಿ ಜಮೀನು ಎಂಬುದನ್ನು ತಿಳಿದ ನ್ಯಾಯಾಲಯ, ”ಸರಕಾರಿ ಜಾಗದಲ್ಲಿ ಧಾರ್ಮಿಕ ಸಂಸ್ಥೆಗಳ ಕೆಲಸ ಏನಿದೆ? ಮಳಿಗೆಗಳನ್ನು ಕಟ್ಟಿ ಅವುಗಳನ್ನು ಬಾಡಿಗೆಗೆ ಕೊಟ್ಟು ಬಾಡಿಗೆ ವಸೂಲಿ ಮಾಡುತ್ತಿರುವುದು ಯಾವ ಆಧಾರದಲ್ಲಿ ಮತ್ತು ಯಾವ ಉದ್ದೇಶಕ್ಕೆ? ಇದು ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ಅಲ್ಲದೆ ಮತ್ತೇನಲ್ಲ. ಇದಕ್ಕೆ ಅವಕಾಶ ನೀಡಲಾಗದು,” ಎಂದು ಮೌಖಿಕವಾಗಿ ಹೇಳಿತು.
ಇದನ್ನೂ ಓದಿ: ಯಲಬುರ್ಗಾ |ಎಲ್ಲಾ ಹಳ್ಳಿಗಳಿಗೆ ಸಮರ್ಪಕವಾಗಿ ಬಸ್ ಬಿಡಲು ಆಗ್ರಹಿಸಿ ಎಸ್.ಎಫ್.ಐ ಪ್ರತಿಭಟನೆ
ಅಲ್ಲದೆ, ಅರ್ಜಿದಾರರು ಚಾರಿಟಬಲ್ ಟ್ರಸ್ಟ್ ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದಾಗ, ಮಳಿಗೆ ಕಟ್ಟಿ ಬಾಡಿಗೆ ವಸೂಲಿ ಮಾಡುವುದು ಏಕೆ? ಎರಡೂ ಧರ್ಮದವರು ಅರ್ಜಿ ಸಲ್ಲಿಸಿದ್ದಾರೆ. ‘ರಾಮ್-ರಹೀಮ್’ ಸೇರಿ ಬಂದಿರುವುದೇ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ,” ಎಂದು ನ್ಯಾಯಪೀಠ ಕಟುವಾಗಿ ಹೇಳಿತು.
”ಜಾಗ ಮಂಜೂರು ಪ್ರಸ್ತಾವನೆಯು ಜಿಲ್ಲಾಧಿಕಾರಿ ಮುಂದಿದ್ದರೆ, ಅವರ ಬಳಿ ಹೋಗಿ. ಜಾಗ ಮಂಜೂರು ಮಾಡುವುದು ಅವರಿಗೆ ಬಿಟ್ಟಿದ್ದು. ಸದ್ಯಕ್ಕಂತೂ ಜಾಗ ಸರಕಾರಕ್ಕೆ ಸೇರಿದ್ದಾಗಿದೆ. ಸರಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು,” ಎಂದು ನ್ಯಾಯಪೀಠ ಸ್ಪಷ್ಟವಾಗಿ ಹೇಳಿತು.
“ಸರಕಾರಿ ಜಾಗವನ್ನು ಖಾಸಗಿಯವರು ಬಳಕೆ ಮಾಡುತ್ತಿದ್ದರೂ ಇಷ್ಟರವವರೆಗೆ ಸುಮ್ಮನೆ ಇದ್ದದ್ದು ಏಕೆ,” ಎಂದು ನ್ಯಾಯಪೀಠ ಇದೇ ವೇಳೆ ಸರಕಾರಿ ವಕೀಲರನ್ನು ಪ್ರಶ್ನಿಸಿತು. ಅರ್ಜಿ ಸಂಬಂಧ ರಾಜ್ಯ ಸರಕಾರ, ಕೋಲಾರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಸೀಲ್ದಾರ್ಗೆ ನೋಟಿಸ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.
ಇದನ್ನೂ ನೋಡಿ: ಬಿಹಾರಕ್ಕೆ ಮತ್ತೆ ನಿತೀಶ್ ಕುಮಾರ್! 50:50 ಲೆಕ್ಕಾಚಾರದಲ್ಲಿ ಬಿಜೆಪಿ!!? Janashakthi Media #BiharResults
