ಬೆಂಗಳೂರು: ಮೇಕೆದಾಟು ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೆಇಆರ್ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಕೆಲಸ ನಿರ್ವಹಿಸಲಿದೆ. ಈ ತಂಡ ಉಪ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಯನ್ನು ಒಳಗೊಂಡಿದ್ದು ರಾಮನಗರದಲ್ಲೇ ಯೋಜನೆಗೆ ಕಚೇರಿ ಸ್ಥಾಪಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬೆಳಗಾವಿ | ದಿನದ 24 ಗಂಟೆಯೂ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಇರಬೇಕು ! – ಸಚಿವ ಗುಂಡೂರಾವ್
18.11.2025ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಒಂದು ಮುಖ್ಯ ಇಂಜಿನಿಯರ್ ಕಚೇರಿ ಹಾಗೂ ಒಂದು ಅಧೀಕ್ಷಕ ಇಂಜಿನಿಯರ್ ಕಚೇರಿ ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಹೊಸದಾಗಿ ಕಚೇರಿ ಸ್ಥಾಪನೆ ಹಾಗೂ ಹುದ್ದೆಗಳ ನೇಮಕಕ್ಕೆ ಆರ್ಥಿಕ ಇಲಾಖೆಯ ಅನುಮತಿ ಅಗತ್ಯವಾಗಿದ್ದು, ಇದಕ್ಕೆ ಬಹಳಷ್ಟು ಸಮಯಾವಕಾಶ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಯೋಜನೆ ಜಾರಿಯ ಜವಾಬ್ದಾರಿಯನ್ನು ಕೆಇಆರ್ಎಸ್ ನಿರ್ದೇಶಕರಿಗೆ ವಹಿಸಿದೆ.
ಎಲ್ಲ ದಾಖಲೆಗಳ ಹಸ್ತಾಂತರಕ್ಕೆ ಸೂಚನೆ: ಮೇಕೆದಾಟು ಯೋಜನೆ ಕಚೇರಿಯ ಕಟ್ಟಡದ ವ್ಯವಸ್ಥೆಗೆ ಕಾವೇರಿ ನೀರಾವರಿ ನಿಗಮ ನಿಯಮಿತ (ಕೆಎನ್ಎನ್ಎಲ್) ಕ್ರಮ ಕೈಗೊಳ್ಳಲಿದೆ. ಈ ತಂಡವು ಕೆಎನ್ಎನ್ಎಲ್ನ ವ್ಯವಸ್ಥಾಪನ ನಿರ್ದೇಶಕರ ಅಧೀನದಲ್ಲಿ ಕಾರ್ಯನಿರ್ವಹಿಸಲಿದ್ದು, ಕಚೇರಿಯ ನಿರ್ವಹಣೆ, ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚವನ್ನು ಕೆಎನ್ಎನ್ಎಲ್ ಅನುದಾನದಿಂದ ಭರಿಸಲಾಗುವುದು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಎಲ್ಲ ಕಡತ, ಪತ್ರ ವ್ಯವಹಾರ ಹಾಗೂ ಇನ್ನಿತರೆ ದಾಖಲೆಗಳನ್ನು ಕೆಇಆರ್ಎಸ್ ನಿರ್ದೇಶಕರಿಗೆ ಹಸ್ತಾಂತರಿಸುವಂತೆ ಕೆಎನ್ಎನ್ಎಲ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ನೋಡಿ : ಧರ್ಮಸ್ಥಳ ಪ್ರಕರಣ | ಕೊಂದವರು ಯಾರು? ಎಂಬುದು ಹೊರಬರಲಿ – ಡಾ. ನಾಗಲಕ್ಷ್ಮೀ ಚೌಧರಿJanashakthi Media
