ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಅವರಿಗೆ ನೀಡಿ, ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ.
ಬಿಕೆ ಹರಿ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಹೈಕಮಾಂಡ್ ಇದೀಗ ಈ ನಿರ್ಧಾರ ಕೈಗೊಂಡಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಘೋಷಣೆ ಆಗಲಿದೆ ಎಂದು ಮೂಲಗಳು ಹೇಳಿವೆ.
ಡಿಕೆ ಶಿವಕುಮಾರ್ ಸಂಪುಟದಲ್ಲಿ ಬಿಕೆ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡ್ತಾರೆ ಎಂಬ ನಿರೀಕ್ಷೆ ಇತ್ತು. ಕೆಪಿಸಿಸಿಗೆ ಸತೀಶ್ ಜಾರಕಿಹೊಳಿ ಅವರನ್ನು ನೇಮಕ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದರೆ ಸತೀಶ್ ಜಾರಕಿಹೊಳಿ ಆಯ್ಕೆಗೆ ಒಂದು ಬಣದ ವಿರೋಧ ಇತ್ತು. ಹೀಗಾಗಿ ಬಿಕೆ ಹರಿ ಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” : ಹೈಕೋರ್ಟ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ಭರವಸೆ
ಸದ್ಯ ಅವರು ಎಂಎಲ್ ಸಿ ಆಗಿದ್ದಾರೆ. ಎಂಎಲ್ ಸಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆ. ಬಿಕೆ ಹರಿಪ್ರಸಾದ್ ಅವರು ಪಕ್ಷ ಸಂಘಟನೆಯಲ್ಲಿ ಅನುಭವ ಹೊಂದಿದ್ದಾರೆ. ಹೀಗಾಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಅಲ್ಲದೆ ಹಿಂದುಳಿದ ವರ್ಗಕ್ಕೆ ಸೂಕ್ತ ಸ್ಥಾನ ಮಾನ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.
ಕಾಂಗ್ರೆಸ್ ವೀಕ್ ಮಾಡುವ ಷಡ್ಯಂತ್ರ
ಇನ್ನು ಇದೇ ವಿಚಾರವಾಗಿ ಸತೀಶ್ ಜಾರಕಿಹೊಳಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಬಳಿ ಚರ್ಚೆ ಮಾಡಿದ್ದೇನೆ. ಮಂತ್ರಿಸ್ಥಾನ ನೀಡೋದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು. ಹೈಕಮಾಂಡ್ ನಿಂದ ನನಗೆ ಇನ್ನೂ ಕರೆ ಬಂದಿಲ್ಲ. ಪರಮೇಶ್ವರ್ ಒಬ್ಬರಿಗೆ ಡಿಸಿಎಂ ಸ್ಥಾನ ಅಂತಾ ಮಾಧ್ಯಮಗಳಲ್ಲಿ ನೋಡಿದ್ದೇನೆ. ಹೆಚ್ಚುವರಿ ಡಿಸಿಎಂಗಳ ಬಗ್ಗೆ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡಬೇಕು ಎಂದರು.
ನನ್ನ ವಿರುದ್ದ ಷಡ್ಯಂತ್ರ ಮಾಡೋರು ಮಾಡಲಿ. ಇಂತಹ ನೂರು ಷಡ್ಯಂತ್ರ ಬೇಕಾದ್ರೂ ಮಾಡಲಿ. ಇದು ನನ್ನ ವೀಕ್ ಮಾಡಲು ಅಲ್ಲ, ಕಾಂಗ್ರೆಸ್ ವೀಕ್ ಮಾಡುವ ಷಡ್ಯಂತ್ರ ಇದಾಗಿದೆ ಎಂದರು.
ಇದನ್ನೂ ನೋಡಿ: ಪಿಣರಾಯಿ ವಿಜಯನ್ ಮೇಲಿನ ಇ.ಡಿ. ದಾಳಿ: ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ Janashakthi Media
