ಬೆಂಗಳೂರು: ರಾಜ್ಯದ ಬಾಕಿ ಉಳಿದಿರುವ ಎಲ್ಲ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಈ ವರ್ಷದ ಅಂತ್ಯದೊಳಗೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಸಚಿವ ಈಶ್ವರ್ ಖಂಡ್ರೆ ಜೂನ್ 8ರಂದು ತಿಳಿಸಿದ್ದಾರೆ.
ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪ್ರಾಥಮಿಕ ಸಭೆಯಲ್ಲಿ ಈ ಮಾಹಿತಿ ನೀಡಿದರು.
“ಮುಂದಿನ ಎಂಟು ವಾರಗಳಲ್ಲಿ ಕ್ಷೇತ್ರ ಪುನರ್ವಿಂಗಡನೆ (ಡಿಲಿಮಿಟೇಶನ್) ಮತ್ತು ಮೀಸಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು. ಉಳಿದ ಕಾರ್ಯವನ್ನು ರಾಜ್ಯ ಚುನಾವಣಾ ಆಯೋಗ ನಿರ್ವಹಿಸಲಿದೆ,” ಎಂದು ಖಂಡ್ರೆ ಹೇಳಿದರು.
ಇದನ್ನೂ ಓದಿ: ಮತಪತ್ರ ತಿದ್ದುಪಡಿ ಆರೋಪ: ಹೈಕೋರ್ಟ್ನ ತೀಕ್ಷ್ಣ ಪ್ರಶ್ನೆ
ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು 2021ರಿಂದ ನಡೆಯದೇ ಉಳಿದಿವೆ. ರಾಜ್ಯದಲ್ಲಿರುವ 5,943 ಗ್ರಾಮ ಪಂಚಾಯಿತಿಗಳ ಅವಧಿ ಜನವರಿ ಮತ್ತು ಫೆಬ್ರವರಿಯಲ್ಲಿ ಮುಕ್ತಾಯವಾಗಿದೆ.
ಖಂಡ್ರೆ ಅವರು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನು “ಗ್ರಾಮ ಪಂಚಾಯಿತಿಗಳ ಅತ್ಯಂತ ಪ್ರಮುಖ ಜವಾಬ್ದಾರಿ” ಎಂದು ಅವರು ಹೇಳಿದ್ದಾರೆ. ಕಲುಷಿತ ನೀರು ಸೇವನೆಯಿಂದ ಜನರು ಸಾವನ್ನಪ್ಪಿದ ಘಟನೆಗಳನ್ನೂ ಅವರು ಉಲ್ಲೇಖಿಸಿದರು. ನೀರಿನ ಗುಣಮಟ್ಟವನ್ನು NABL ಮಾನ್ಯತೆ ಪಡೆದ ಪ್ರಯೋಗಾಲಯಗಳಲ್ಲಿ ನಿಯಮಿತವಾಗಿ ಪರೀಕ್ಷಿಸಬೇಕು ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 2 ಲಕ್ಷ ಕಿಮೀ ಗ್ರಾಮೀಣ ರಸ್ತೆಗಳಿದ್ದು, ಅವುಗಳಲ್ಲಿ ಎಷ್ಟು ಮಣ್ಣು ರಸ್ತೆ, ಕಾಂಕ್ರೀಟ್ ರಸ್ತೆ ಮತ್ತು ಡಾಂಬರ್ ರಸ್ತೆಗಳಿವೆ ಎಂಬುದರ ಬಗ್ಗೆ ವರದಿ ಸಲ್ಲಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಬಸ್ ಸಂಪರ್ಕವಿಲ್ಲದ ಗ್ರಾಮಗಳಿಗೆ ಕನಿಷ್ಠ ಒಂದು ಸಂಪರ್ಕ ರಸ್ತೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶಿಸಿದ್ದಾರೆ.
ಇದನ್ನೂ ನೋಡಿ: ಇಬ್ಬರು ಬಾಲಕಿಯರ ಬದುಕು ಉಳಿಸಿದ ಹೋರಾಟ | ದೇವದಾಸಿ ಪದ್ಧತಿಗೆ ತಡೆ Janashakthi Media
