ಜಾರ್ಖಂಡ್ : ಜಾರ್ಖಂಡ್ನ ಸಿಮ್ಡೆಗಾ ಜಿಲ್ಲೆಯ ಬಾನೋ ಬ್ಲಾಕ್ ವ್ಯಾಪ್ತಿಯ ಹಲ್ದಿಬೇರಾ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 21 ವಿದ್ಯಾರ್ಥಿಗಳು ಜೀವಭಯದ ನಡುವೆ ಶಿಕ್ಷಣ ಪಡೆಯುತ್ತಿದ್ದಾರೆ. ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿರುವ ಕಾರಣ ಗ್ರಾಮಸ್ಥರು ತಾತ್ಕಾಲಿಕವಾಗಿ ನಿರ್ಮಿಸಿರುವ ಗುಡಿಸಲಿನಲ್ಲೇ ತರಗತಿಗಳು ನಡೆಯುತ್ತಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರಸ್ ವರದಿ ಮಾಡಿದೆ. ಮೇಲ್ಛಾವಣಿ
ಗ್ರಾಮಸ್ಥರ ಪ್ರಕಾರ, ಶಾಲೆಯ ಮೇಲ್ಛಾವಣಿಯ ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿದ್ದು, ಗೋಡೆಗಳಲ್ಲಿ ದೊಡ್ಡ ಬಿರುಕುಗಳು ಮೂಡಿವೆ. ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಕಾರಣ ಯಾವುದೇ ಕ್ಷಣದಲ್ಲಿ ಕಟ್ಟಡ ಕುಸಿಯುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹೊಸ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಿಕ್ಷಣ ಇಲಾಖೆಗೆ ಹಲವು ಬಾರಿ ಲಿಖಿತ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಗ್ರಾಮಸ್ಥರು ಶ್ರಮದಾನದ ಮೂಲಕ ಮರದ ಕೊಂಬೆಗಳು, ಎಲೆಗಳು, ಹುಲ್ಲು ಹಾಗೂ ತಾರ್ಪಾಲಿನ್ ಬಳಸಿ ತಾತ್ಕಾಲಿಕ ಶೆಡ್ ನಿರ್ಮಿಸಿದ್ದಾರೆ. ಈಗ ವಿದ್ಯಾರ್ಥಿಗಳು ಇದೇ ಆಶ್ರಯದಲ್ಲಿ ಪಾಠ ಕಲಿಯುತ್ತಿದ್ದಾರೆ.
ಇದನ್ನೂ ಓದಿ : SIR ಕರ್ನಾಟಕ: ನಾಲ್ಕೇ ದಿನಗಳಲ್ಲಿ 2.01 ಕೋಟಿ ಮತದಾರರ ಎಣಿಕೆ ನಮೂನೆ ವಿತರಣೆ; 12.07 ಲಕ್ಷ ನಮೂನೆಗಳ ಡಿಜಿಟಲೀಕರಣ
“ಶಾಲೆಯ ಕಟ್ಟಡ ಯಾವಾಗ ಬೇಕಾದರೂ ಕುಸಿಯಬಹುದು. ಅಪಘಾತ ಸಂಭವಿಸಿದರೆ ಅದರ ಹೊಣೆ ಯಾರು ಹೊರುತ್ತಾರೆ?” ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ತಕ್ಷಣ ಹೊಸ ಕಟ್ಟಡ ನಿರ್ಮಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ದೀಪಕ್ ರಾಮ್, ಶಾಲೆಯ ದುಸ್ಥಿತಿಯನ್ನು ಖಚಿತಪಡಿಸಿದ್ದು, ಹೊಸ ಕಟ್ಟಡ ನಿರ್ಮಾಣವಾಗುವವರೆಗೆ ತರಗತಿಗಳನ್ನು ಶಾಲೆಯ ಅಡುಗೆಮನೆ ಕಟ್ಟಡಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಹೊಸ ಶಾಲಾ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿ ಇಲಾಖೆಗೆ ಶೀಘ್ರದಲ್ಲೇ ಕಳುಹಿಸಲಾಗುವುದು ಎಂದಿದ್ದಾರೆ.
ಇದನ್ನೂ ನೋಡಿ : ಆರ್ಎಸ್ಎಸ್ ನೋಂದಣಿ ಸುತ್ತಮುತ್ತ: ಎದ್ದಿರುವ ಪ್ರಶ್ನೆಗಳೇನು?
