ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿ – ಮಲೆನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಮೂರು ದಿನ 60 ಕಿಮೀ ವೇಗದ ಬಿರುಗಾಳಿ ಸಹಿತ ಅತಿಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಘಟ್ಟ ರಸ್ತೆಗಳಲ್ಲಿ ಜುಲೈ 11ರವರೆಗೆ ಭೂಕುಸಿತ ಸಂಭವಿಸುವ ಆತಂಕವಿದ್ದು, ತುರ್ತು ಕೆಲಸಗಳಿಲ್ಲದಿದ್ದರೆ ಸಾರ್ವಜನಿಕರು ಪ್ರಯಾಣವನ್ನು ಮುಂದೂಡುವಂತೆ ಇಲಾಖೆ ಸಲಹೆ ನೀಡಿದೆ. ಕರಾವಳಿ 

ಮುಂದಿನ 24ರಿಂದ 48 ಗಂಟೆಗಳವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಟ್ಟ ಮೋಡ ಕವಿದ ವಾತಾವರಣವಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ತಗ್ಗು ಪ್ರದೇಶ ಹಾಗೂ ಸಮುದ್ರ ತೀರ ಭಾಗದ ನಿವಾಸಿಗಳಿಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಗಾಜಾ ಯುದ್ಧಕ್ಕೆ 1000 ದಿನ: ಧ್ವಂಸ, ಸಾವು ಮತ್ತು ಮಾನವೀಯ ದುರಂತ ಮುಂದುವರಿಕೆ

ಬೆಳಗಾವಿ ಘಟ್ಟ ಪ್ರದೇಶ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಲಿದೆ.

ಗಂಟೆಗೆ 50–60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ವಾಹನ ನಿಲ್ಲಿಸದಂತೆ ಸೂಚಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಭಾರಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಮುಂದುವರಿಸಲಾಗಿದೆ.

ನದಿಗಳು ಮತ್ತು ಹಳ್ಳಗಳು ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಸಾರ್ವಜನಿಕರು ನದಿ ತೀರಕ್ಕೆ ತೆರಳಬಾರದು ಎಂದು ಎಚ್ಚರಿಸಲಾಗಿದೆ. ತಗ್ಗು ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯಾದ್ಯಂತ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಸಜ್ಜಾಗಿದ್ದು, ಕಂಟ್ರೋಲ್ ರೂಮ್‌ಗಳನ್ನು ತೆರೆಯಲಾಗಿದೆ. ಬಿರುಗಾಳಿ ಮತ್ತು ಸಿಡಿಲಿನ ಹಿನ್ನೆಲೆಯಲ್ಲಿ ರೈತರು ಜಾನುವಾರುಗಳನ್ನು ಮರಗಳು ಅಥವಾ ವಿದ್ಯುತ್ ಕಂಬಗಳ ಕೆಳಗೆ ಕಟ್ಟಬಾರದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ: ಎಸ್‌ಐಆರ್ ವಿರುದ್ಧ ರಾಜ್ಯವ್ಯಾಪಿ ಕಾವಲು ಸಮಿತಿ | ಮತದಾರರ ಹಕ್ಕು ರಕ್ಷಣೆಗೆ ಹೋರಾಟJanashakthi Media

Donate Janashakthi Media

Leave a Reply

Your email address will not be published. Required fields are marked *