ಬೆಂಗಳೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಜುಲೈ 18ರ ಬೆಳಗಿನ ಜಾವ ಬಲವಂತವಾಗಿ ಕರೆದೊಯ್ದಿರುವ ಕ್ರಮವನ್ನು ಖಂಡಿಸಿ ಸಿಪಿಐ(ಎಂ) ರಾಜ್ಯ ಸಮಿತಿಯು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.
ನಗರದ ಮಹಾಲಕ್ಷ್ಮಿ ಲೇಔಟ್ನ ಇ.ಎಂ.ಎಸ್. ಭವನದ ಎದುರು ನಡೆದ ಪ್ರತಿಭಟನೆಯಲ್ಲಿ, ಈ ಕ್ರಮವನ್ನು “ಪ್ರಜಾಪ್ರಭುತ್ವ ವಿರೋಧಿ” ಎಂದು ಸಿಪಿಐ(ಎಂ) ನಾಯಕರು ತೀವ್ರವಾಗಿ ಟೀಕಿಸಿದರು. ದೇಶದಾದ್ಯಂತ ಈ ಘಟನೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಾಗ, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಿ ಮಾತುಕತೆ ನಡೆಸುವ ಬದಲು ಹೋರಾಟಗಾರರ ಮೇಲೆಯೇ ದಮನಕಾರಿ ಕ್ರಮ ಕೈಗೊಳ್ಳುತ್ತಿರುವುದು ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಧೋರಣೆಯನ್ನು ಬಯಲಿಗೆಳೆಯುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸೋನಂ
ಇದನ್ನೂ ಓದಿ: “ವಾಂಗ್ಚುಕ್ ಬಲವಂತದ ಸ್ಥಳಾಂತರ-ಸರ್ವಾಧಿಕಾರಶಾಹಿಯ ಪ್ರದರ್ಶನ”-ಬೃಂದಾ ಕಾರಟ್
ನೀಟ್ ಪರೀಕ್ಷೆಯಲ್ಲಿನ ಅವ್ಯವಸ್ಥೆಗಳಿಗೆ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ(ಎಂ) ಪೊಲಿಟ್ಬ್ಯುರೊ ಸದಸ್ಯ ವಿ. ಶ್ರೀಕೃಷ್ಣ, ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟ್, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯು. ಬಸವರಾಜ್, ಎಂ.ಪಿ. ಮುನಿವೆಂಕಟಪ್ಪ, ಚಂದ್ರಪ್ಪ ಹೊಸ್ಕೆರಾ, ರಾಜ್ಯ ಸಮಿತಿ ಸದಸ್ಯ ಪುಟ್ಟ ಮಾದು, ಯಶವಂತ್ ಹಾಗೂ ರೈತ–ಕೃಷಿ ಕೂಲಿಕಾರರ ಸಂಘಟನೆಗಳ ಮುಖಂಡರಾದ ಜಿ.ಎನ್. ನಾಗರಾಜ್, ಪ್ರಭಾ ಬೆಳವಂಗಲ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.
ಇದನ್ನೂ ನೋಡಿ: ಉಸಿರಾಡುವ ಗಾಳಿಯೇ ವಿಷ! ಆಯುಷ್ಯ ಕಸಿಯುತ್ತಿರುವ ‘ಸೈಲೆಂಟ್ ಕಿಲ್ಲರ್’ | ಗುರುರಾಜ ದೇಸಾಯಿ Janashakthi Media
