ದೆಹಲಿ ಪ್ರತಿಭಟನೆ ಅರ್ಜಿ: ‘ನಮ್ಮ ಸಮಯ ವ್ಯರ್ಥ ಮಾಡಬೇಡಿ’ – ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ

ನವದೆಹಲಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ತೆಗೆದುಕೊಳ್ಳುವಂತೆ ಮಾಡಿದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಈ ಅರ್ಜಿಗೆ ತಕ್ಷಣದ ವಿಚಾರಣೆ ಅಗತ್ಯವಿಲ್ಲ ಎಂದು ತಿಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನಾ ಸ್ಥಳದಲ್ಲಿ ನಡೆದ ಪೊಲೀಸ್ ಕ್ರಮದ ವಿಡಿಯೊಗಳು ತಮ್ಮ ಬಳಿ ಇವೆ. ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಬಲಪ್ರಯೋಗ ನಡೆದಿರುವುದರಿಂದ ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, “ಪ್ರತಿಭಟನೆಯ ವಿಡಿಯೊಗಳನ್ನು ನೋಡಲು ನ್ಯಾಯಾಲಯಕ್ಕೆ ಸಮಯವಿಲ್ಲ. ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಹೇಳಿ ತುರ್ತು ಪಟ್ಟಿಗೆ ಸೇರಿಸಲು ನಿರಾಕರಿಸಿದರು.

ಅರ್ಜಿಯಲ್ಲಿ, ದೆಹಲಿ ಪೊಲೀಸರ ಕ್ರಮದ ಕುರಿತು ಸ್ವತಂತ್ರ ತನಿಖೆ ನಡೆಸಬೇಕು, ಗಾಯಗೊಂಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ನೆರವು ಒದಗಿಸಬೇಕು ಹಾಗೂ ಪ್ರತಿಭಟನಾಕಾರರ ಮೂಲಭೂತ ಹಕ್ಕುಗಳನ್ನು ರಕ್ಷಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿತ್ತು. ಆದರೆ ಸುಪ್ರೀಂಕೋರ್ಟ್ ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶ ನೀಡಲಿಲ್ಲ.

ಇದರ ನಡುವೆ, ಇದೇ ಘಟನೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ, ಪೊಲೀಸ್ ಬಲಪ್ರಯೋಗದ ಆರೋಪಗಳ ಕುರಿತು ಉತ್ತರ ಕೇಳಿದೆ.

ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದ ಕ್ರಮ ಹಾಗೂ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ “ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂಬ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿವಿಧ ನಾಗರಿಕ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಆರೋಪಗಳಂತಹ ಗಂಭೀರ ವಿಷಯವನ್ನು ಈ ರೀತಿಯಾಗಿ ಪರಿಗಣಿಸಿರುವುದನ್ನು ಹಲವರು ಪ್ರಶ್ನಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *