ಬೆಂಗಳೂರು: ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಜುಲೈ 28ರಿಂದ ಎರಡು ದಿನಗಳ ಕಾಲ ಮಧ್ಯಪ್ರದೇಶ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ಸಚಿವ ಸಂಪುಟದ 20 ಖಾಲಿ ಸ್ಥಾನಗಳನ್ನು ಭರ್ತಿಗೆ ಕಾಂಗ್ರೆಸ್ ಹೈಕಮಾಂಡ್ಗೆ ಇನ್ನಷ್ಟು ಸಮಯ ಲಭ್ಯವಾಗಿದೆ. ಮಂಗಳವಾರ ರಾತ್ರಿ 8 ಗಂಟೆಗೆ ರಾಜ್ಯ ನಾಯಕರು ಕೇಂದ್ರ ನಾಯಕತ್ವದೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಅಂತಿಮ ಪಟ್ಟಿ ತೀರ್ಮಾನವಾದರೂ, ರಾಜ್ಯಪಾಲರ ಗೈರುಹಾಜರಿಯಿಂದ ಪ್ರಮಾಣವಚನ ಕಾರ್ಯಕ್ರಮ ವಿಳಂಬವಾಗುವ ಸಾಧ್ಯತೆ ಇದೆ. ಅದುವರೆಗೆ ಸಚಿವ ಸ್ಥಾನಕ್ಕೆ ಆಯ್ಕೆಯಾಗಿರುವ ಶಾಸಕರ ಹೆಸರುಗಳನ್ನು ಗೋಪ್ಯವಾಗಿಯೇ ಇಡಲಾಗುವುದು ಎಂದು ಮೂಲಗಳು ಹೇಳಿವೆ.
ಇದೇ ವೇಳೆ ಸೋಮವಾರ ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದವು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಸಚಿವ ಸ್ಥಾನಾಕಾಂಕ್ಷಿಗಳು ದೆಹಲಿಯಲ್ಲಿ ನೆಲೆಸಿದ್ದು, ಅಂತಿಮ ಪಟ್ಟಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಹೋರಾಟಕ್ಕೆ ಐತಿಹಾಸಿಕ ಗೆಲುವು: ಎಂ.ಎ. ಬೇಬಿ
ಸುಮಾರು 60ಕ್ಕೂ ಹೆಚ್ಚು ಶಾಸಕರು ಮತ್ತು ಅವರ ಬೆಂಬಲಿಗರು ದೆಹಲಿಯಲ್ಲಿ ತಂಗಿದ್ದು, ಹಿರಿಯ ಶಾಸಕರ ಜೊತೆಗೆ ವಿಧಾನ ಪರಿಷತ್ ಸದಸ್ಯರೂ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. “ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಈ ವಾರದೊಳಗೆ ಪೂರ್ಣಗೊಳ್ಳಲಿದೆ. ನೀವು (ಮಾಧ್ಯಮ) ಅದರಲ್ಲಿ ಅತುರ ತೋರಿಸುತ್ತಿದ್ದೀರಿ,” ಎಂದು ಶಿವಕುಮಾರ್ ವರದಿಗಾರರಿಗೆ ತಿಳಿಸಿದ್ದಾರೆ.
ರಾಜ್ಯಪಾಲರು ಪ್ರಮಾಣವಚನದ ದಿನಾಂಕ ನಿಗದಿ ಮಾಡಲು ಲಭ್ಯವಿಲ್ಲದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕರು ತ್ವರಿತ ನಿರ್ಧಾರಕ್ಕೆ ಮುಂದಾಗುತ್ತಿರುವಂತೆ ಕಾಣುತ್ತಿಲ್ಲ.
ಇದರ ನಡುವೆ ಶಿವಕುಮಾರ್ ಬರ ಪರಿಸ್ಥಿತಿ ಸೇರಿದಂತೆ ರಾಜ್ಯದ ಸಮಸ್ಯೆಗಳ ಬಗ್ಗೆ ಎಲ್ಲ ಪಕ್ಷಗಳ ಸಂಸದರು ಭಾಗವಹಿಸುವ ಸಭೆಗೆ ಗಮನ ಹರಿಸಿದ್ದರೆ, ಸಿದ್ದರಾಮಯ್ಯ ಕರ್ನಾಟಕ ಭವನದಲ್ಲಿ ಶಾಸಕರೊಂದಿಗೆ ಚರ್ಚೆ ನಡೆಸಿದರು.
ಮೂಲಗಳ ಪ್ರಕಾರ, ಬಿ.ಕೆ. ಹರಿಪ್ರಸಾದ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಘಟನೆ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರು ಬುಧವಾರ ರಾತ್ರಿ ರಾಜ್ಯ ನಾಯಕರೊಂದಿಗೆ ಮಾತುಕತೆ ನಡೆಸಿ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.
ಇದರ ನಡುವೆ ಸಿದ್ದರಾಮಯ್ಯ ತಮ್ಮ ಪುತ್ರ ರಾಕೇಶ್ ಅವರ ಪುಣ್ಯತಿಥಿಯಲ್ಲಿ ಭಾಗವಹಿಸಲು ಮೈಸೂರುಗೆ ವಿಶೇಷ ವಿಮಾನದಲ್ಲಿ ತೆರಳಿ, ನಂತರ ಮತ್ತೆ ದೆಹಲಿಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿವಿಧ ಕಾರಣಗಳಿಂದ ಸಚಿವ ಸಂಪುಟ ವಿಸ್ತರಣೆ ನಿರಂತರವಾಗಿ ಮುಂದೂಡಲ್ಪಡುತ್ತಿದ್ದು, ಇತ್ತೀಚೆಗೆ ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳು ನಡೆದಿರುವುದು ಮತ್ತೊಂದು ಕಾರಣವಾಗಿದೆ.
ಇದನ್ನೂ ನೋಡಿ: ಶೇ.33% ಮಹಿಳಾ ಮೀಸಲಾತಿ ತಕ್ಷಣ ಜಾರಿ ಮಾಡಿ! ಬೆಂಗಳೂರಿನಲ್ಲಿ ಮಹಿಳಾ ಸಂಘಟನೆಗಳ ಪ್ರತಿಭಟನೆ Janashakthi Media
