ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆಗೆ ಕೊನೆಗೂ ಸಮಯ ನಿಗದಿಯಾಗುವ ಸಾಧ್ಯತೆ ದಟ್ಟವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನಾಯಕರ ತಂಡ ಮಂಗಳವಾರ ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಸಿದೆ. ಕರ್ನಾಟಕ
ಸುಮಾರು ಒಂದೂವರೆ ಗಂಟೆ ನಡೆದ ಸಭೆಯಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ಶಾಸಕರ ಹೆಸರುಗಳ ಕುರಿತು ಚರ್ಚೆ ನಡೆದಿದೆ. ಬಹುತೇಕ ಹೆಸರುಗಳು ಅಂತಿಮಗೊಂಡಿದ್ದು, ಇದೀಗ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಒಪ್ಪಿಗೆ ಮಾತ್ರ ಬಾಕಿಯಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅಂತಿಮ ಸುತ್ತಿನ ಮಾತುಕತೆ ಬುಧವಾರ ನಡೆಯುವ ಸಾಧ್ಯತೆ ಇದೆ.
ಸಂಪುಟ ವಿಸ್ತರಣೆಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಗುರುವಾರ ಸಂಜೆ 5 ಗಂಟೆಗೆ ಸಮಯ ನಿಗದಿಪಡಿಸುವ ಕುರಿತು ರಾಜಭವನಕ್ಕೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಬುಧವಾರ ಮಧ್ಯಪ್ರದೇಶದಲ್ಲಿದ್ದು, ಗುರುವಾರ ಮಧ್ಯಾಹ್ನದೊಳಗೆ ಬೆಂಗಳೂರಿಗೆ ವಾಪಸಾಗುವ ನಿರೀಕ್ಷೆಯಿದೆ. ಒಂದು ವೇಳೆ ಗುರುವಾರ ಪ್ರಮಾಣವಚನ ಸಾಧ್ಯವಾಗದಿದ್ದರೆ, ಶುಕ್ರವಾರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕ
ಜಮೀರ್ ಅಹ್ಮದ್ ಖಾನ್ ಹೆಸರು ಚರ್ಚೆಯಲ್ಲಿ
ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸುವ ಬಗ್ಗೆಯೂ ಚರ್ಚೆ ನಡೆದಿದೆ.ಜಮೀರ್ ಅವರನ್ನು ಸೇರಿಸಿಕೊಳ್ಳುವ ಪರವಾಗಿ ಕೆ.ಸಿ. ವೇಣುಗೋಪಾಲ್ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಖಾನ್ ಅವರು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಮಾಧ್ಯಮಗಳ ಎದುರು ಯಾವುದೇ ಷರತ್ತಿಲ್ಲದೆ ಕ್ಷಮೆಯಾಚಿಸಿದ್ದರು ಎನ್ನಲಾಗಿದೆ. ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ಜಮೀರ್ ಹೇಳಿಕೊಂಡಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಜಮೀರ್ ಅವರ ಕೊಡುಗೆಯನ್ನು ವೇಣುಗೋಪಾಲ್ ಪರಿಗಣಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕ
ಇದನ್ನೂ ಓದಿ : ಆಗಸ್ಟ್ 13ರಿಂದ 27ರವರೆಗೆ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ
ಸಿದ್ದರಾಮಯ್ಯ ಬಣದಿಂದ ಹಲವು ಹೆಸರುಗಳು
ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಆಯ್ಕೆಯ ಸಚಿವಾಕಾಂಕ್ಷಿಗಳ ಪರವಾಗಿ ಬಲವಾಗಿ ವಾದಿಸಿದ್ದಾರೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯ ಎಂ.ಆರ್. ಸೀತಾರಾಮ್, ಶಾಸಕರಾದ ಬಸವರಾಜ ರಾಯರೆಡ್ಡಿ, ಎ.ಎಸ್. ಪೊನ್ನಣ್ಣ, ಹಂಪನಗೌಡ ಬಾದರ್ಲಿ, ಬಸವರಾಜ ಶಿವಣ್ಣನವರ್ ಹಾಗೂ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಹಲವು ಹೆಸರುಗಳನ್ನು ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆ.ಸಿ. ವೇಣುಗೋಪಾಲ್ ಅವರು ನಾಯಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ಪ್ರತಿಯೊಬ್ಬರ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಪಡೆದುಕೊಂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ತನ್ನ ಆಂತರಿಕ ಸಮೀಕ್ಷೆಯನ್ನೂ ಪ್ರಮುಖ ಮಾನದಂಡವಾಗಿ ಪರಿಗಣಿಸುವ ಸಾಧ್ಯತೆಯಿದೆ.
2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ತಂತ್ರಗಾರ ಸುನೀಲ್ ಕನಗೋಳು ಮೂಲಕ ನಡೆಸಲಾದ ಆಂತರಿಕ ಸಮೀಕ್ಷೆಯ ಫಲಿತಾಂಶವನ್ನು ಹೈಕಮಾಂಡ್ ಪರಿಶೀಲಿಸಲಿದೆ ಎನ್ನಲಾಗಿದೆ. ತಮ್ಮ ಸಮುದಾಯದ ಮೇಲೆ ಪ್ರಭಾವ ಹೊಂದಿರುವವರು, ತಮ್ಮ ಪ್ರದೇಶದಲ್ಲಿ ರಾಜಕೀಯವಾಗಿ ಪ್ರಭಾವಶಾಲಿಗಳಾಗಿರುವವರು ಹಾಗೂ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸ್ಪೀಕರ್, ಪರಿಷತ್ ಸಭಾಪತಿ ಹುದ್ದೆಗಳಿಗೂ ಹೆಸರು ಅಂತಿಮ?
ಸಂಪುಟ ವಿಸ್ತರಣೆಯ ಜತೆಗೆ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಹುದ್ದೆಗಳಿಗೂ ಹೊಸ ಹೆಸರುಗಳನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸುವ ಸಾಧ್ಯತೆಯಿದೆ. ಮಾಜಿ ಸಚಿವರಾದ ಎಚ್.ಕೆ. ಪಾಟೀಲ್ ಮತ್ತು ಎನ್.ಎಸ್. ಬೋಸರಾಜು ಅವರ ಹೆಸರುಗಳು ಈ ಹುದ್ದೆಗಳಿಗೆ ಕೇಳಿಬರುತ್ತಿವೆ.
ಒಟ್ಟಿನಲ್ಲಿ, ಸಂಪುಟ ವಿಸ್ತರಣೆಯ ಬಹುತೇಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಅಂತಿಮ ಒಪ್ಪಿಗೆಯೇ ಈಗ ಪ್ರಮುಖ ಘಟ್ಟವಾಗಿದೆ. ಬುಧವಾರ ನಡೆಯಲಿರುವ ಮಾತುಕತೆಯ ಬಳಿಕ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿ ಸ್ಪಷ್ಟವಾಗುವ ಸಾಧ್ಯತೆಯಿದ್ದು, ಗುರುವಾರ ಅಥವಾ ಶುಕ್ರವಾರ ಪ್ರಮಾಣವಚನ ನಡೆಯುವ ನಿರೀಕ್ಷೆಯಿದೆ.
ಇದನ್ನೂ ನೋಡಿ : NEET ಹೋರಾಟದ ಒಳನೋಟ | ದಮನದ ಪ್ರತಿಯೊಂದು ಹೆಜ್ಜೆಗೂ ವಿದ್ಯಾರ್ಥಿಗಳ ಪ್ರತಿರೋಧ | ಗುರುರಾಜ ದೇಸಾಯಿ Janashakthi
