ಬಂಗಾಳ, ಒಡಿಶಾದಲ್ಲಿ ಭಾರಿ ಮಳೆ: ಕೆಂಪು ಎಚ್ಚರಿಕೆ; 18ಕ್ಕೂ ಹೆಚ್ಚು ರಾಜ್ಯಗಳಲ್ಲಿ ಹವಾಮಾನ ಮುನ್ನೆಚ್ಚರಿಕೆ

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದೇಶದ ಪೂರ್ವ, ಉತ್ತರ ಮತ್ತು ಮಧ್ಯ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾದ ಹಲವು ಭಾಗಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕೆಂಪು ಎಚ್ಚರಿಕೆ ನೀಡಿದ್ದು, 18ಕ್ಕೂ ಹೆಚ್ಚು ರಾಜ್ಯಗಳಲ್ಲಿ ವಿವಿಧ ಹಂತದ ಹವಾಮಾನ ಮುನ್ನೆಚ್ಚರಿಕೆ ಜಾರಿಯಲ್ಲಿದೆ. ಬಂಗಾಳ

ಬಂಗಾಳ ಕೊಲ್ಲಿಯ ವಾಯವ್ಯ ಭಾಗದಲ್ಲಿ ರೂಪುಗೊಂಡಿದ್ದ ಕಡಿಮೆ ಒತ್ತಡದ ಪ್ರದೇಶ ಸೋಮವಾರ ಬೆಳಗ್ಗೆ 5.30ರ ವೇಳೆಗೆ ವಾಯುಭಾರ ಕುಸಿತವಾಗಿ ತೀವ್ರಗೊಂಡಿದೆ. ಇದು ಮುಂದಿನ 24 ಗಂಟೆಗಳಲ್ಲಿ ವಾಯವ್ಯ ದಿಕ್ಕಿನಲ್ಲಿ ಚಲಿಸುವ ನಿರೀಕ್ಷೆಯಿದ್ದು, ಗಂಗಾ ಬಯಲು ಪ್ರದೇಶದ ಪಶ್ಚಿಮ ಬಂಗಾಳದ ಮೂಲಕ ಜಾರ್ಖಂಡ್‌ ಕಡೆಗೆ ಸಾಗುವ ಸಾಧ್ಯತೆಯಿದೆ. ಇದರಿಂದ ಪೂರ್ವ ಭಾರತದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳ ಮತ್ತು ಒಡಿಶಾದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯವರೆಗೆ ಬೀಳುವ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ 204.5 ಮಿಲಿಮೀಟರ್‌ಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ.

ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಸ್ಥಳೀಯ ಪ್ರವಾಹ ಉಂಟಾಗುವುದು ಹಾಗೂ ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚಣೆ ಉಂಟಾಗುವ ಅಪಾಯವಿದೆ. ವಾಯುಭಾರ ಕುಸಿತ ಒಳನಾಡಿನತ್ತ ಚಲಿಸುತ್ತಿರುವುದರಿಂದ ಜಾರ್ಖಂಡ್‌ನಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಅರುಣಾಚಲ ಪ್ರದೇಶ, ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ, ಜಾರ್ಖಂಡ್‌ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಪ್ರದೇಶಗಳಲ್ಲಿ 115.6ರಿಂದ 204.4 ಮಿಲಿಮೀಟರ್‌ವರೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಎನ್‌ಸಿಆರ್‌ ಪ್ರದೇಶಕ್ಕೂ ಹಳದಿ ಎಚ್ಚರಿಕೆ ನೀಡಲಾಗಿದೆ. ಸೋಮವಾರ ಆಕಾಶ ಮೋಡ ಕವಿದಿರಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ ಸುಮಾರು 35 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿ ಇರಬಹುದು.

ಭಾರಿ ಮಳೆಯಿಂದ ದೆಹಲಿಯ ಹಲವು ಪ್ರದೇಶಗಳಲ್ಲಿ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ಸರ್ಕಾರವನ್ನು ಪ್ರಶ್ನಿಸುವವರೇ ಗುರಿ: ‘ದಿಮಾಗೀ ನಕ್ಸಲ್’ ಪದದ ವಿರುದ್ಧ ಪ್ರತಿಪಕ್ಷಗಳ ಆಕ್ರೋಶ

ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರದಲ್ಲೂ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರಾಖಂಡದ ಹಲವು ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ಜಾರಿಯಲ್ಲಿದ್ದು, ಭಾರಿ ಮಳೆಯ ಜತೆಗೆ ಗುಡುಗು, ಸಿಡಿಲು ಮತ್ತು ಗಂಟೆಗೆ ಸುಮಾರು 60 ಕಿಲೋಮೀಟರ್‌ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಇದರಿಂದ ಭೂಕುಸಿತ, ರಸ್ತೆ ಸಂಪರ್ಕ ಕಡಿತ ಹಾಗೂ ನದಿಗಳು ಮತ್ತು ಹಳ್ಳಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಅಪಾಯವಿದೆ. ಹಿಮಾಚಲ ಪ್ರದೇಶದ ಹಲವು ಜಿಲ್ಲೆಗಳಿಗೂ ಇದೇ ರೀತಿಯ ಮುನ್ನೆಚ್ಚರಿಕೆ ನೀಡಲಾಗಿದೆ.

ಬಿಹಾರ, ಪಂಜಾಬ್‌, ಹರಿಯಾಣ, ಚಂಡೀಗಢ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ 64.5ರಿಂದ 115.5 ಮಿಲಿಮೀಟರ್‌ವರೆಗೆ ಮಳೆಯಾಗುವ ಸಾಧ್ಯತೆಯಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಹೊಲಗಳಲ್ಲಿ ನೀರು ನಿಲ್ಲದಂತೆ ಸೂಕ್ತ ಒಳಚರಂಡಿ ವ್ಯವಸ್ಥೆ ಮಾಡಿಕೊಳ್ಳುವಂತೆ ರೈತರಿಗೆ ಸೂಚಿಸಲಾಗಿದೆ. ಈಗಾಗಲೇ ಸಾಕಷ್ಟು ತೇವಾಂಶವಿರುವ ಪ್ರದೇಶಗಳಲ್ಲಿ ಹೆಚ್ಚುವರಿ ನೀರಾವರಿ ಮಾಡದಂತೆ ಹಾಗೂ ಮಳೆಯ ಸಂದರ್ಭದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಸಿಂಪಡಣೆ ಮುಂದೂಡುವಂತೆ ಸಲಹೆ ನೀಡಲಾಗಿದೆ.

ಕೊಯ್ಲು ಮಾಡಿದ ಬೆಳೆ, ಮೇವು ಮತ್ತು ಧಾನ್ಯಗಳನ್ನು ಸುರಕ್ಷಿತ ಹಾಗೂ ಒಣ ಸ್ಥಳದಲ್ಲಿ ಸಂಗ್ರಹಿಸುವಂತೆ ಸೂಚಿಸಲಾಗಿದೆ. ಜನರು ಪ್ರವಾಹಪೀಡಿತ ರಸ್ತೆ, ನದಿ ಮತ್ತು ಹಳ್ಳಗಳ ಬಳಿ ತೆರಳದಂತೆ ಹಾಗೂ ಗುಡುಗು-ಸಿಡಿಲಿನ ಸಂದರ್ಭದಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳ ಕೆಳಗೆ ನಿಲ್ಲದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ವಾಯುಭಾರ ಕುಸಿತ ಒಳನಾಡಿನತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲೂ ಪೂರ್ವ, ಉತ್ತರ ಮತ್ತು ಮಧ್ಯ ಭಾರತದಲ್ಲಿ ಮಳೆಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ನೋಡಿ : ಸ್ವಾತಂತ್ರ್ಯಕ್ಕೆ 79 ವರ್ಷ — ದುಡಿಯುವ ಜನರಿಗೆ ಸಿಕ್ಕಿತೇ ಸ್ವಾತಂತ್ರ್ಯ? Janashakthi Media

Donate Janashakthi Media

Leave a Reply

Your email address will not be published. Required fields are marked *