ನಾಸಿಕ್: ಶಿಕ್ಷಣ ಎಂಬುದು ಕೆಲವರಿಗೆ ಮಾತ್ರ ಸಿಗುವ ಸೌಲಭ್ಯವಲ್ಲ, ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಮಹಾರಾಷ್ಟ್ರದ ನಾಸಿಕ್ಗೆ ಬುಧವಾರ ಭೇಟಿ ನೀಡಿದ್ದ ಅವರು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಆದಿವಾಸಿ ವಿದ್ಯಾರ್ಥಿಗಳ ನಿಯೋಗವನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದರು.
ನಾಸಿಕ್ನ ಆಶ್ರಮ ಶಾಲೆಗಳಲ್ಲಿನ ಪರಿಸ್ಥಿತಿ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ರಾಹುಲ್ ಗಾಂಧಿ ಅವರ ಗಮನಕ್ಕೆ ತಂದರು. ವಿದ್ಯಾರ್ಥಿಗಳ ಅಹವಾಲುಗಳನ್ನು ಆಲಿಸಿದ ಬಳಿಕ, ಪ್ರತಿಯೊಬ್ಬ ವಿದ್ಯಾರ್ಥಿಗೂ ಗೌರವಯುತ, ಸುರಕ್ಷಿತ ಹಾಗೂ ಕಲಿಕೆಗೆ ಅನುಕೂಲಕರ ವಾತಾವರಣ ದೊರೆಯಬೇಕು ಎಂದು ಅವರು ಪ್ರತಿಪಾದಿಸಿದರು.
ಇದನ್ನೂ ಓದಿ : ಕೆಪಿಎಸ್ಸಿ ನೇಮಕಾತಿ ಅಕ್ರಮ ತನಿಖೆಗೆ ಆಗ್ರಹಿಸಿ ಎಸ್ಎಫ್ಐ ಪ್ರತಿಭಟನೆ
ವ್ಯವಸ್ಥೆಯ ಅಂಚಿನಲ್ಲಿರುವ ಹಾಗೂ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳು ನಿರ್ಲಕ್ಷ್ಯಕ್ಕೆ ಒಳಗಾಗಬಾರದು. ಅಂತಹ ವಿದ್ಯಾರ್ಥಿಗಳಿಗೆ ವ್ಯವಸ್ಥೆಯ ಅಗತ್ಯ ಬೆಂಬಲ ಮತ್ತು ಸಾಧ್ಯವಿರುವ ಎಲ್ಲ ನೆರವು ದೊರೆಯಬೇಕು ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.
ನಂತರ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಶಿಕ್ಷಣ ಸೌಲಭ್ಯವಲ್ಲ; ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು’ ಎಂದು ಹೇಳಿದ್ದಾರೆ.
ನಾಸಿಕ್ ಪ್ರವಾಸದ ಸಂದರ್ಭದಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ನ ಜಿಲ್ಲಾ ಮಟ್ಟದ ಮುಖಂಡರೊಂದಿಗೂ ರಾಹುಲ್ ಗಾಂಧಿ ಸಭೆ ನಡೆಸಿದರು. ಪಕ್ಷದ ಸಿದ್ಧಾಂತಕ್ಕೆ ಬದ್ಧವಾಗಿ ಕೆಲಸ ಮಾಡುವಂತೆ ಹಾಗೂ ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವಂತೆ ಮುಖಂಡರಿಗೆ ಸೂಚಿಸಿದರು.
ಇದನ್ನೂ ನೋಡಿ : ‘ನಾವು ಕಳ್ಳರಲ್ಲ… ಈ ದೇಶದ ನಾಗರಿಕರು; ನಮ್ಮ ಮತದ ಹಕ್ಕು ಕಸಿಯಲು ಬಿಡಲ್ಲ’ Janashakthi Media
