ಸರ್ಕಾರ ಖಾದಿ-ಗ್ರಾಮೋದ್ಯೋಗ ಉತ್ತೇಜನಕ್ಕೆ ಆದ್ಯತೆ ನೀಡಲಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರವು ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿದರು.

ʻಗಾಂಧೀಜಿ ಒಬ್ಬ ವ್ಯಕ್ತಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲ, ನೈತಿಕ ಭಾರತವನ್ನು ಕಟ್ಟುವ ಶಕ್ತಿʼ ಎಂದು ಮುಖ್ಯಮಂತ್ರಿ ಹೇಳಿದರು.

ನಾವು ಇಂದು ದೇಶಕ್ಕಾಗಿ ದುಡಿಯುವ ಮೂಲಕ ವಿಶ್ವದಲ್ಲಿ ಅಗ್ರ ಸ್ಥಾನ ಪಡೆಯಲು ಶ್ರಮಿಸಬೇಕು. ಇಂದಿನ ಸಮಾಜದಲ್ಲಿ ನಾವು ನಾಗರಿಕ ಜವಾಬ್ದಾರಿಯ ಕೊರತೆಯನ್ನು ಕಾಣುತ್ತೇವೆ. ಕರ್ತವ್ಯ ಪ್ರಜ್ಞೆ ಮೂಡಿಸಿಕೊಂಡು ಕೆಲಸ ಮಾಡಿದರೆ ಯಾವ ಸವಾಲೂ ದೊಡ್ಡದಲ್ಲ ಎಂದು ಹೇಳಿದರು.

ಜನರಿಂದ ಉತ್ಪಾದನಾ ಚಟುವಟಿಕೆಗಳು ನಡೆಯಬೇಕು ಎಂದು ಗಾಂಧೀಜಿ ಬಯಸಿದ್ದರು. ದುಡಿಮೆಯಲ್ಲಿ ಆರ್ಥಿಕತೆ ಇದೆ. ದುಡ್ಡಿನಲ್ಲಿ ಅಲ್ಲ ಎಂದ ಮುಖ್ಯಮಂತ್ರಿಗಳು, ಅದಕ್ಕಾಗಿಯೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ನುಡಿದರು. ಕಾಯಕ ಪೂಜೆಗಿಂತಲೂ ಮಿಗಿಲಾದದ್ದು. ಸ್ವರ್ಗ ಸಮಾನ ಎಂದು ಮುಖ್ಯಮಂತ್ರಿಗಳು ನುಡಿದರು.

ಗಾಂಧೀಜಿ ಹೋರಾಟಕ್ಕೆ ತಾತ್ವಿಕ, ಸೈದ್ಧಾಂತಿಕ ಹಾಗೂ ವೈಜ್ಞಾನಿಕ ಹಿನ್ನಲೆಯಿದೆ. ಪ್ರತಿಯೊಬ್ಬರೂ ಬದ್ಧತೆಯೊಂದಿಗೆ ಕೆಲಸ ಮಾಡಿದಾಗ ಸಾರ್ಥಕತೆ ಮೂಡುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಪ್ರಗತಿಯಲ್ಲಿದೆ. ದಾವಣಗೆರೆಯ ಗಾಂಧೀ ಭವನ ಇತ್ತೀಚೆಗೆ ಉದ್ಘಾಟನೆಯಾಗಿದ್ದು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಉದ್ಘಾಟನೆಗೆ ಸಜ್ಜುಗೊಂಡಿವೆ. ಉಳಿದ ಜಿಲ್ಲೆಗಳ ಗಾಂಧಿ ಭವನಗಳೂ ಶೀಘ್ರವೇ ಸಿದ್ಧವಾಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು ತುಮಕೂರಿನ ಸಿದ್ದಗಂಗಾ ಮಠದ ಪರವಾಗಿ ಡಾ. ಶಿವಪ್ಪ ಹಾಗೂ ಮೀರಾತಾಯಿ ಕೊಪ್ಪಿಕರ್ ಪರವಾಗಿ ಮುಧೋಳ ಶಾಸಕರೂ ಆಗಿರುವ ಸಚಿವ ಗೋವಿಂದ ಕಾರಜೋಳ ಅವರು ಪ್ರಶಸ್ತಿ ಸ್ವೀಕರಿಸಿದರು.

ಮಾಜಿ ಸಚಿವ ಹೆಚ್.ಕೆ. ಪಾಟೀಲ, ನ್ಯಾ. ಅಶೋಕ ಬಿ. ಹಿಂಚಗೇರಿ ಮಾತನಾಡಿದರು. ಸಚಿವರಾದ ಗೋವಿಂದ ಎಂ. ಕಾರಜೋಳ, ಹಾಲಪ್ಪ ಆಚಾರ್, ಸಂಸದರಾದ ಶಿವಕುಮಾರ್ ಉದಾಸಿ, ಡಾ. ಎಲ್. ಹನುಮಂತಯ್ಯ ಮತ್ತು ಇತರರು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *