ನವದೆಹಲಿ: ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸರ ಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸುವರು ಎಂಬ ನಿರೀಕ್ಷೆಯನ್ನು ಕಾಕ್ರೋಚ್ ಜನತಾ ಪಾರ್ಟಿಯ ಮುಖ್ಯಸ್ಥ ಅಭಿಜೀತ್ ದೀಪ್ಕೆ ವ್ಯಕ್ತಪಡಿಸಿದ್ದಾರೆ. ಹಲ್ಲೆ
ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ದೀಪ್ಕೆ, “ಎಲ್ಲಾ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿರುವ ವಿಡಿಯೊವನ್ನು ನಾವು ನೋಡಿದ್ದೇವೆ. ಅದೇ ರೀತಿ ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸರು ಕೈಗೊಂಡ ಕ್ರಮದ ಬಗ್ಗೆ ಕೂಡ ಅವರು ಕ್ಷಮೆ ಕೋರುತ್ತಾರೆ ಎಂಬ ಭರವಸೆ ಇದೆ” ಎಂದು ತಿಳಿಸಿದ್ದಾರೆ.
ಪ್ರತಿಭಟನೆ ವೇಳೆ ಪೊಲೀಸರು ಅತಿಯಾಗಿ ಬಲಪ್ರಯೋಗ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ. “ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ, ಕೆಲವರ ಬಟ್ಟೆಗಳನ್ನು ಹರಿಯಲಾಗಿದೆ. ಮಹಿಳಾ ಪ್ರತಿಭಟನಾಕಾರರ ಮೇಲೂ ಹಿಂಸಾತ್ಮಕವಾಗಿ ವರ್ತಿಸಲಾಗಿದೆ” ಎಂದು ದೀಪ್ಕೆ ಆರೋಪಿಸಿದ್ದಾರೆ.
ಇದನ್ನೂ ಓದಿ: ಕುಲ್ಗಾಂನಲ್ಲಿ ಗುಂಡಿನ ದಾಳಿ: ಯುಪಿ, ಛತ್ತೀಸ್ಗಢದ ಇಬ್ಬರು ಕಾರ್ಮಿಕರ ಹತ್ಯೆ
ಅಲ್ಲದೆ, “ಒಬ್ಬ 12 ವರ್ಷದ ವಿದ್ಯಾರ್ಥಿಗೆ ತಲೆಯ ಮೇಲೆ ಹೊಡೆದಿರುವುದು, ಮಹಿಳೆಯರ ಮೇಲೆ ಅವಮಾನಕಾರಿ ರೀತಿಯಲ್ಲಿ ದಾಳಿ ನಡೆದಿರುವುದು ಗಂಭೀರ ಸಂಗತಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ತಮ್ಮ ವಿಡಿಯೊ ಸಂದೇಶದಲ್ಲಿ ಪೀಡಿತ ಮಹಿಳೆಯರ ಕ್ಷಮೆ ಯಾಚಿಸುವರೆಂದು ನಾನು ನಿರೀಕ್ಷಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ತನ್ನನ್ನು ಹಾಗೂ ತನ್ನ ದಿವಂಗತ ತಾಯಿಯನ್ನು ನಿಂದಿಸಿದ ವಿದ್ಯಾರ್ಥಿಗಳನ್ನು ಕ್ಷಮಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಸಂದೇಶದಲ್ಲಿ ಹೇಳಿದ್ದರು. “ಇಂತಹ ಸಂದರ್ಭಗಳಲ್ಲಿ ಕಾನೂನು ಕ್ರಮವೇ ಪರಿಹಾರವಲ್ಲ. ದಾರಿ ತಪ್ಪಿದ ಯುವಕರಿಗೆ ಮಾರ್ಗದರ್ಶನ ನೀಡಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದರು.
ಪ್ರಧಾನಿ ನೀಡಿದ ಈ ಹೇಳಿಕೆಯ ಬೆನ್ನಲ್ಲೇ, ಪ್ರತಿಭಟನೆಯ ವೇಳೆ ನಡೆದ ಘಟನೆಗಳ ಬಗ್ಗೆ ಅಭಿಜೀತ್ ದೀಪ್ಕೆ ಈ ಪ್ರತಿಕ್ರಿಯೆ ನೀಡಿರುವುದು ಗಮನಾರ್ಹವಾಗಿದೆ.
ಇದನ್ನೂ ನೋಡಿ: NEET ಹೋರಾಟದ ಒಳನೋಟ | ದಮನದ ಪ್ರತಿಯೊಂದು ಹೆಜ್ಜೆಗೂ ವಿದ್ಯಾರ್ಥಿಗಳ ಪ್ರತಿರೋಧ | ಗುರುರಾಜ ದೇಸಾಯಿ Janashakthi
