ಪತ್ರಕರ್ತರಿಗೆ ಲಂಚ; ಸಿಎಂ, ಮಾಧ್ಯಮ ಸಂಯೋಜಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಕೇಳಿಬಂದಿರುವ ಗಂಭೀರ ಆರೋಪದ ಕುರಿತು ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಭ್ರಷ್ಟಾಚಾರದ ವಿರುದ್ದ ಕಾನೂನಾತ್ಮಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಎಂಬುವರ ವಿರುದ್ಧ ಲೋಕಾಯುಕ್ತ ಮತ್ತು ಲೋಕಾಯುಕ್ತ ಪೊಲೀಸ್‌ ವಿಭಾಗದ ಎಡಿಜಿಪಿ ಅವರಿಗೆ ದೂರು ನೀಡಿದೆ.

ಡೆಕ್ಕನ್‌ ಹೆರಾಲ್ಡ್‌ ಮತ್ತು ಪ್ರಜಾವಾಣಿಯ ಪ್ರಧಾನ/ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್‌ ಬಾಕ್ಸ್‌ನೊಂದಿಗೆ 1 ಲಕ್ಷ ರು. ನಗದನ್ನಿರಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಎಂಬುವರು ನಗದು ನೀಡಿದ್ದಾರೆ ಎಂದು ದೂರಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಮುಖ್ಯಮಂತ್ರಿ ಮತ್ತು ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮದ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದೆ.

ಗುತ್ತಿಗೆದಾರರಿಂದ 40 ಪರ್ಸೆಂಟೇಜ್‌ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿಯ ಅಬ್ಬರ ಮುಂದುವರೆದಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಲಕ್ಷಗಟ್ಟಲೇ ಲಂಚ ನೀಡಲಾಗಿದೆ ಎಂಬ ಆರೋಪವು ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಜನತಾ ಮಾಧ್ಯಮಗಳಾದ ಪೀಪಲ್ಸ್‌ ಮೀಡಿಯಾ, ನಾನು ಗೌರಿ, ಜನಶಕ್ತಿ ಮೀಡಿಯಾ, ದಿಫೈಲ್‌ ಗಳು “ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚವನ್ನು ಮುಖ್ಯಮಂತ್ರಿ ಕಚೇರಿಯಿಂದ ನೀಡಲಾಗಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಿದ್ದವು.  ಇದರ ಬೆನ್ನಲ್ಲೇ ಜನಾಧಿಕಾರ ಸಂಘರ್ಷ ಪರಿಷತ್‌ ಕೂಡ ಲೋಕಾಯುಕ್ತರು ಮತ್ತು ಎಡಿಜಿಪಿ ಅವರಿಗೆ ಸಲ್ಲಿಸಿರುವ ದೂರು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ : ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚ?

ದೂರಿನಲ್ಲೇನಿದೆ? :   ರಾಜ್ಯದ ಹಲವಾರು ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರದಿಗಾರರಿಗೆ ಮುಖ್ಯಮಂತ್ರಿ ಕಚೇರಿಯು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ಅವರ ಮೂಲಕ ನಗದು ಹಣವನ್ನು ನೀಡಲಾಗಿದೆ. ವಿಶ್ವಸನೀಯ ಮೂಲಗಳ ಪ್ರಕಾರ ಡೆಕ್ಕನ್‌ ಹೆರಾಲ್ಡ್‌ನ ಮುಖ್ಯ ವರದಿಗಾರ ಭರತ್‌ ಜೋಷಿ ಅವರಿಗೆ ತಲುಪಿಸಿದ್ದ ಸ್ವೀಟ್‌ ಬಾಕ್ಸ್‌ನಲ್ಲಿಯೇ 1 ಲಕ್ಷ ರು. ನಗದನ್ನು ತಲುಪಿಸಲಾಗಿತ್ತು. ಇದು ಅವರ ಗಮನಕ್ಕೆ ಬಂದ ನಂತರ ಡೆಕ್ಕನ್‌ ಹೆರಾಲ್ಡ್‌ನ ಸಂಪಾದಕರು ಮತ್ತು ಸಿಇಒ ಅವರ ಗಮನಕ್ಕೆ ತಂದು ಅವರ ಸೂಚನೆಯಂತೆ ಹಣವನ್ನು ಹಿಂದಿರುಗಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.   ಅಲ್ಲದೇ ‘ಪ್ರಜಾವಾಣಿಯ ಮುಖ್ಯ ವರದಿಗಾರ ವೈ ಜಿ ಜಗದೀಶ್‌ ಎಂಬುವರಿಗೂ ಹಣ ತಲುಪಿಸಲಾಗಿತ್ತು. ಈ ಬಗ್ಗೆ ಖುದ್ದು ವೈ ಜಿ ಜಗದೀಶ್‌ ಅವರೇ ಮಾಧ್ಯಮದ ವಾಟ್ಸಾಪ್‌ ಗ್ರೂಪ್‌ನಲ್ಲಿ  ಹೇಳಿರುವ ಪ್ರಕಾರ ಮುಖ್ಯಮಂತ್ರಿ ಕಚೇರಿಯಿಂದ ಹಣ ಬಂದಿದೆ. ಇವರೂ ಸಹ ಸಂಸ್ಥೆಯ ಸಿಇಒ ಮತ್ತು ಸಂಪಾದಕರ ಗಮನಕ್ಕೆ ತಂದು ಹಣವನ್ನು ಹಿಂದಿರುಗಿಸಲಾಗಿದೆ. ಅಲ್ಲದೇ ವೈ ಜಿ ಜಗದೀಶ್‌ ಅವರೇ ಹೇಳಿಕೊಂಡಿರುವಂತೆ ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸಂಸ್ಥೆಯಿಂದ ಖಂಡನಾ ಪತ್ರವನ್ನು ಬರೆಯಲಾಗಿದೆ. ಮತ್ತು ಇದಕ್ಕೆ ಮುಖ್ಯಮಂತ್ರಿ ಅವರು ಕ್ಷಮೆಯನ್ನೂ ಯಾಚಿಸಿದ್ದಾರೆ,’ ಎಂದು ದೂರಿನಲ್ಲಿ ಆದರ್ಶ ಐಯ್ಯರ್‌ ಅವರು ದೂರಿನಲ್ಲಿ ವಿವರಿಸಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪ, ಕೆಟ್ಟ ಆಡಳಿತದ ಕುರಿತು ಪತ್ರಿಕೆಯಲ್ಲಿ ಪ್ರಕಟಿಸದಂತೆ ಹಣ ನೀಡಲಾಗಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಾಗಿದೆ. ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಂಚ ನೀಡಿರುವುದು ಅನೈತಿಕವಾದದ್ದಾಗಿದೆ. ಅಲ್ಲದೇ ಮಾಧ್ಯಮ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಸರ್ಕಾರದ ಪರವಾಗಿ ಇರುವಂತೆ ನೋಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ ವಿವರಿಸಿದೆ.   ‘ಸರ್ಕಾರದ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಹಲವಾರು ದೂರುಗಳನ್ನು ನೀಡಿದ್ದರೂ ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಿರಲಿಲ್ಲ ಮತ್ತು ಪ್ರಶ್ನಿಸುತ್ತಿರಲಿಲ್ಲ. ಮಾಧ್ಯಮಗಳನ್ನು ಸರ್ಕಾರವು ಕೊಳ್ಳುತ್ತಿರುವ ಬಗ್ಗೆ ಬಹುತೇಕ ಜನರಿಗೆ ಅನುಮಾನವಿದೆ. ಈ ಪ್ರಕರಣವು ಆ ಅನುಮಾನವನ್ನು ಸಾಬೀತುಗೊಳಿಸಿದೆ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತು ಸಂವಿಧಾನವನ್ನು ಬುಡಮೇಲು ಮಾಡಲು ಬಿಜೆಪಿಯು ಹುನ್ನಾರ ನಡೆಸುತ್ತಿರುವ ಹಲವಾರು ಪ್ರಯತ್ನಗಳಲ್ಲಿ ಇದು ಕೂಡ ಒಂದಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದು ತಕ್ಷಣವೇ ಲೋಕಾಯುಕ್ತರು ಈ ದೂರನ್ನಾಧರಿಸಿ ತನಿಖೆ ನಡೆಸಿ ಆಪಾದಿತ ಮುಖ್ಯಮಂತ್ರಿ ಮತ್ತು ಅವರ ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮ ಅನ್ವಯ ಕ್ರಮ ಕೈಗೊಳ್ಳಬೇಕು,’ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ಒತ್ತಾಯಿಸಿದೆ.

 

Donate Janashakthi Media

Leave a Reply

Your email address will not be published. Required fields are marked *