ತುಮಕೂರು: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ಹೊಸದಾಗಿ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮವನ್ನು ರಾಜ್ಯದಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತುಮಕೂರು
ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು. ತುಮಕೂರು
ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ತುಮಕೂರು
ಇದನ್ನೂ ಓದಿ: ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಂದ ಪ್ರತಿಭಟನೆ
ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯವಾಗುತ್ತಿದೆ ಎಂದರು. ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆಯಲ್ಲದೆ ಈಗಿರುವ ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಆಸಕ್ತಿ ತೋರುತ್ತಿದ್ದಾರೆ ಎಂದರು.
ಪ್ರಸಕ್ತ ವರ್ಷದಲ್ಲಿ ಪದವಿಪೂರ್ವ ಕಾಲೇಜುಗಳನ್ನೂ ಸಹ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಪದವಿಪೂರ್ವ ಕಾಲೇಜುಗಳಿಗೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುವುದೆಂದರು.
ಜಿಲ್ಲೆಯಲ್ಲಿ ಶತಮಾನ ಕಂಡ ಶಾಲೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುವುದು. ವಿಶೇಷ ಅನುದಾನದಡಿ ಶತಮಾನ ಕಂಡ ಶಾಲೆಗಳು ಮುಂದಿನ ಪೀಳಿಗೆಗೆ ಮಾದರಿಯಾಗುವಂತೆ ಉಳಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಲವಾರು ದಾನಿಗಳು ಆರ್ಥಿಕ ನೆರವು ನೀಡಲು ಮುಂದೆ ಬರುತ್ತಿದ್ದಾರೆ. ಶಾಲಾ ಪೀಠೋಪಕರಣ, ಲೇಖನ ಸಾಮಗ್ರಿ, ಸ್ಮಾರ್ಟ್ ತರಗತಿ ನಿರ್ಮಾಣಕ್ಕೆ ಸಹಾಯಹಸ್ತ ನೀಡುತ್ತಿದ್ದಾರೆ. ಅಲ್ಲದೆ ಈ ಕಾರ್ಯಕ್ರಮಕ್ಕೆ ಸಿಎಸ್ಆರ್ ನಿಧಿಯಿಂದ 1591 ಕೋಟಿ ರೂ.ಗಳನ್ನು ಸದ್ವಿನಿಯೋಗಿಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳೂ ಸಹ ತಾವು ಓದಿದ ಶಾಲೆಗಳ ಅಭಿವೃದ್ಧಿಗಾಗಿ ಕೊಡುಗೆಯನ್ನು ನೀಡಲು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಇಂಗ್ಲೀಷ್ ಮಾಧ್ಯಮದ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ದ್ವಿಭಾಷಾ ಶಾಲೆಗಳನ್ನು ತೆರೆಯಲಾಗುವುದು. ಈಗಿರುವ ಕನ್ನಡ ಮಾಧ್ಯಮದ ಶಾಲೆಗಳು ದ್ವಿಭಾಷಾ ಶಾಲೆಗಳನ್ನಾಗಿ ಮಾರ್ಪಡಿಸಲಾಗುವುದು ಎಂದು ಹೇಳಿದರು.
ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ನಕಲನ್ನು ತಡೆಗಟ್ಟಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ವೆಬ್ಕಾಸ್ಟಿಂಗ್ ಪದ್ಧತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸಿದರೆ ಅವರ ಮುಂದಿನ ಭವಿಷ್ಯ ಉತ್ತಮವಾಗಲಿದೆ ಎಂಬ ಉದ್ದೇಶದಿಂದ ಈ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ.
ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿಕೊಳ್ಳಲು ಶಾಲೆಗಳು ಪರೀಕ್ಷಾ ನಕಲಿಗೆ ಅವಕಾಶ ಮಾಡಿಕೊಡಬಾರದು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವೆಬ್ಕಾಸ್ಟಿಂಗ್ ಪದ್ಧತಿಯಿಂದ ಮಕ್ಕಳಲ್ಲಿಯೂ ಕಲಿಕಾ ಸಾಮರ್ಥ್ಯ ಹೆಚ್ಚಾಗಿದೆಯಲ್ಲದೆ, ಪೋಷಕರಿಗೂ ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಮೂಡಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕ ಸುರೇಶ್ ಗೌಡ, ಡಿಡಿಪಿಐಗಳಾದ ಮನಮೋಹನ ಹಾಗೂ ಗಿರಿಜಾ, ಡಯಟ್ ಪ್ರಾಂಶುಪಾಲ ಮಂಜುನಾಥ, ಡಿಡಿಪಿಯು ಬಾಲಗುರುಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಇದನ್ನೂ ನೋಡಿ: ಬಹುರೂಪಿ| ಬರುತಿಹೆವು ನಾವು ಬರುತಿಹೆವು Janashakthi Media