ಬೆಂಗಳೂರು : ರಾಜ್ಯದಲ್ಲಿ ಕಳೆದ 5 ವರ್ಷದಿಂದ ಸರಿಯಾದ ನೇಮಕಾತಿಗಳು ನಡೆಯದ ಕಾರಣ ಸಾವಿರಾರು ವಿದ್ಯಾರ್ಥಿಗಳ ಜೀವನ ಅತಂತ್ರ ಸ್ಥಿತಿಯಲ್ಲಿದೆ. ಈಗಾಗಲೇ ರಾಜ್ಯದ ಪೊಲೀಸ್ ಪೇದೆಯ ಸಾವಿರಾರು ಹುದ್ದೆಗಳು ಖಾಲಿ ಇವೆ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಉದ್ಯೋಗಗಳು ಸಿಗದೇ ರಾಜ್ಯದಲ್ಲಿ ನಿರುದ್ಯೋಗಿಗಳ ಪ್ರಮಾಣ ಹೆಚ್ಚಾಗುತ್ತಿದೆ. ಸರ್ಕಾರ ಸರಿಯಾದ ಸಮಯಕ್ಕೆ ನೇಮಕಾತಿ ಮಾಡದ ಕಾರಣ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿದ್ದರು ಸರ್ಕಾರ ನೇಮಕಾತಿ ಮಾಡಿಕೊಂಡಿಲ್ಲ. ಇದರಿಂದ ಪೊಲೀಸ್ ಪೇದೆಗೆ ನಿಗದಿ ಮಾಡಿರುವ ವಯಸ್ಸು ಮುಗಿದ ಕಾರಣ ಪರೀಕ್ಷೆಗೆ ತಯಾರಾಗುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಜೀವನ ಅತಂತ್ರ ಸ್ಥಿತಿಯಲ್ಲಿ ಸಿಲುಕಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ಆತಂಕ ವ್ಯಕ್ತಪಡಿಸಿದೆ.ಬೆಂಗಳೂರು
ಈ ಸಂಬಂಧ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಎಸ್ಎಫ್ಐ ನಿಯೋಗ, ಗೊಂದಲ ನಿವಾರಣೆಗೆ ಆಗ್ರಹಿಸಿದೆ.
ರಾಜ್ಯದಲ್ಲಿ ಪ್ರಸ್ತುತ ಕನಿಷ್ಠ ವಯೋಮಿತಿ 19 ಇದ್ದು ಸಾಮಾನ್ಯ ವರ್ಗದ ಗರಿಷ್ಠ ವಯೋಮಿತಿ 25 ವರ್ಷವಿದ್ದು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ/ಪಂಗಡ ಸಮುದಾಯದವರಿಗೆ 27 ವರ್ಷವಿದೆ. ಅದೇ ತಮಿಳುನಾಡು, ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿ ಇನ್ನಿತರ ರಾಜ್ಯಗಳಲ್ಲಿ ವಯೋಮಿತಿ ಕನಿಷ್ಠ 18 ವರ್ಷಕ್ಕೆ ಸೀಮಿತ ಮಾಡಲಾಗಿದೆ ಎಂದು ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಿಜಯ್ ತಿಳಿಸಿದ್ದಾರೆ. ಬೆಂಗಳೂರು
ಇದನ್ನೂ ಓದಿ : ಕಾರ್ಮಿಕರ ಕಾರ್ಡ್ಗಳ ದುರ್ಬಳಕೆ, ಹುಬ್ಬಳ್ಳಿಯಲ್ಲಿ 2023ರಿಂದ ಈವರೆಗೆ ಒಟ್ಟು 10,200 ಕಾರ್ಡ್ ರದ್ದು
ಪೊಲೀಸ್ ಪೇದೆ ಹುದ್ದೆಗೆ ಸಂಬಂಧಿಸಿದ ವಯೋಮಿತಿಯನ್ನು 18 ವರ್ಷಕ್ಕೆ ಇಳಿಸುವುದು ಹಾಗೂ ಸಾಮಾನ್ಯ ವರ್ಗದವರ ಗರಿಷ್ಠ ವಯೋಮಿತಿಯನ್ನು 25ರಿಂದ 30 ವರ್ಷಕ್ಕೆ ಹಾಗೂ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ/ಪಂಗಡ ಸಮುದಾಯದವರ ಗರಿಷ್ಠ ವಯೋಮಿತಿಯನ್ನು 27ರಿಂದ 33 ವರ್ಷಕ್ಕೆ ಹೆಚ್ಚಿಸುವುದು ಹಲವು ವರ್ಷಗಳ ಆಗ್ರಹವಾಗಿದೆ ಎಂದಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ಈ ಹಿಂದೆ ನೀಡಿದ ಮಾಹಿತಿಯಂತೆ ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ 8 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿಯಾಗಿವೆ. ಈ ಹಿಂದೆ 2022 ರಲ್ಲಿ ಮಾನ್ಯ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದು ಪೊಲೀಸ್ ನೇಮಕಾತಿಯ ವಯೋಮಿತಿ ಹೆಚ್ಚಳ ಮಾಡುವಂತೆ ಪತ್ರ ಬರೆದಿದ್ದರು. ಈಗ ಮಾನ್ಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವ ಕಾರಣ ಪೊಲೀಸ್ ಪೇದೆ ಮತ್ತು ಪೊಲೀಸ್ ಇಲಾಖೆಯ ನೇಮಕಾತಿ ವಯೋಮಿತಿ ಹೆಚ್ಚಳ ಮಾಡಬೇಕು ಎಂದು ರಾಜ್ಯ ಉಪಾಧ್ಯಕ್ಷ ಗಣೇಶ್ ರಾಠೋಡ್ ಆಗ್ರಹಿಸಿದ್ದಾರೆ.
ಹಲವು ಒತ್ತಾಯಗಳೊಂದಿಗೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ನೇಮಕಾತಿ ಮಾಡಿಕೊಳ್ಳಬೇಕು, ಪೊಲೀಸ್ ಪೇದೆ ನೇಮಕಾತಿಯ ವಯೋಮಿತಿಯನ್ನು ಕನಿಷ್ಠ ವಯೋಮಿತಿಯನ್ನು 19 ರಿಂದ 18 ವರ್ಷಕ್ಕೆ ಹಾಗೂ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 28 ಮತ್ತು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ/ಪಂಗಡ ಸಮುದಾಯದವರಿಗೆ 32 ವರ್ಷಕ್ಕೆ ನಿಗದಿ ಮಾಡಬೇಕು, ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್), ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ), ನಾಗರಿಕ (ಸಿವಿಲ್) ವಿಭಾಗದ ಪೇದೆ ಹುದ್ದೆಗಳ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳ ಮಾಡಬೇಕು, ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ಎಸ್ಎಫ್ಐ ಆಗ್ರಹಿಸಿದೆ.
ಇದನ್ನೂ ನೋಡಿ : ನಾಲ್ಕು ದಶಕಗಳಿಂದ ಧರ್ಮಸ್ಥಳದಲ್ಲಿ ಕೊಲೆ, ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿವೆ – ಡಾ. ಕೆ.ಪ್ರಕಾಶ್ Janashakthi
