ಲೇಖಕ, ಚಿಂತಕ ಪ್ರೊ.ಬಿ.ಗಂಗಾಧರ ಮೂರ್ತಿ ನಿಧನ

ಬೆಂಗಳೂರು : ಲೇಖಕ, ವಿಚಾರವಾದಿ, ಬಂಡಾಯ ಹಾಗೂ ದಲಿತ ಚಳವಳಿಯ ಮುಂಚೂಣಿ ನಾಯಕ ಪ್ರೊ.ಬಿ.ಗಂಗಾಧರ ಮೂರ್ತಿ(77)ಅವರು ತೀವ್ರ ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಗಂಗಾಧರ ಮೂರ್ತಿಯವರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರು, ಒಡನಾಡಿಗಳು ಹಾಗೂ ಶಿಷ್ಯ ಬಳಗವನ್ನು ಅಗಲಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಆಂಗ್ಲ ಪ್ರೊಫೆಸರ್ ಆಗಿ ನಿವೃತ್ತರಾಗಿದ್ದರು.

ಗಂಗಾಧರ ಮೂರ್ತಿಯವರು, ಕಳೆದ ನಾಲ್ಕು ದಶಕಗಳಿಂದ ಬಂಡಾಯ ಸಾಹಿತ್ಯ, ದಲಿತ ಚಳವಳಿ, ಜನವಿಜ್ಞಾನ ಚಳವಳಿ, ವಿಚಾರವಾದಿ ಚಳವಳಿಯಂಥ ನಾಡಿನ ಬಹುತೇಕ ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು. ಸಂಸ್ಕೃತಿ ಚಿಂತಕರಾಗಿ, ಬರಹಗಾರರಾಗಿ, ಅನುವಾದಕರಾಗಿ ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಭಾರತ ಜ್ಞಾನ ವಿಜ್ಞಾನ ಸಮಿತಿಯ ಟೀಚರ್ ಮಾಸಪತ್ರಿಕೆಗೆ ದಶಕಕ್ಕೂ ಹೆಚ್ಚು ಕಾಲದಿಂದ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರೊ.ಬಿ.ಗಂಗಾಧರ ಮೂರ್ತಿಯವರ ಮಹತ್ವದ ಕೆಲಸವೆಂದರೆ,ವಿದುರಾಶ್ವತ್ಥದ ಸ್ವಾತಂತ್ರ್ಯ ಸ್ಮಾರಕವನ್ನು ರೂಪಿಸಿದ್ದು. 1938ರ ಧ್ವಜ ಸತ್ಯಾಗ್ರಹದ ಹತ್ಯಾಕಾಂಡದ ನಂತರ ಕರ್ನಾಟಕದ ಜಲಿಯನ್ ವಾಲಾಬಾಗ್ ಎಂದು ಕರೆಯಲ್ಪಡುವ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯ ಸ್ಮಾರಕ ಸಂಕೀರ್ಣವನ್ನು ಅಪಾರ ಶ್ರಮ ಹಾಗೂ ಬದ್ಧತೆಯಿಂದ ವಿಶಿಷ್ಟವಾಗಿ ರೂಪಿಸಿ, ವಿನ್ಯಾಸಗೊಳಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ಚಿತ್ರಪಟ ಗ್ಯಾಲರಿ ಮತ್ತು ಥೀಮ್ ಗ್ರಂಥಾಲಯ ರೂಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದ ಹಲವು ಮುಖಗಳನ್ನು ಅನಾವರಣಗೊಳಿಸುವ ಆ ಸ್ಮಾರಕ ದೇಶದಲ್ಲೇ ಅಪರೂಪದ ಸ್ಮಾರಕವಾಗಿ ಖ್ಯಾತಿ ಪಡೆದಿದೆ. ಗೌರಿಬಿದನೂರಿನ ಹೊಸ ತಹಶೀಲ್ದಾರ್ ಕಚೇರಿಯ ಪಕ್ಕದಲ್ಲಿ ಅಂಬೇಡ್ಕರ್ ನೆನಪಿನಲ್ಲಿ ‘ಸಮಾನತಾ ಸೌಧ’ವನ್ನು ರೂಪಿಸಿದ್ದು ಅವರ ಮತ್ತೊಂದು ಅವಿಸ್ಮರಣೀಯ ಕೆಲಸವಾಗಿದೆ.

ಲೇಖಕರಾಗಿಯೂ ಗಂಗಾಧರಮೂರ್ತಿಯವರು ಮಹತ್ವದ ಕೆಲಸ ಮಾಡಿದ್ದಾರೆ. ಹೂ ಅರಳುವಂಥ ಮಣ್ಣು (ಕವನ ಸಂಕಲನ), ನಾಗಸಂದ್ರ ಭೂ ಆಕ್ರಮಣ ಚಳವಳಿ, ಭಾರತದ ಬೌದ್ಧಿಕ ದಾರಿದ್ರ್ಯ(ಅನುವಾದ), ಭಾರತೀಯ ಸಮಾಜದ ಜಾತಿ ಲಕ್ಷಣ (ಅನುವಾದ), ಅಂಬೇಡ್ಕರ್ ಮತ್ತು ಮುಸ್ಲಿಮರು (ಅನುವಾದ), ವಸಾಹತುಪೂರ್ವ ಕಾಲದ ಜಾತಿಹೋರಾಟಗಳು, ಹಿಂದುತ್ವ ಮತ್ತು ದಲಿತರು, ಸೂಫಿ ಕಥಾಲೋಕ, ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರಧಾನೇತರ ಹೋರಾಟಗಳು ಮುಂತಾದ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಸಂಖ್ಯಾತ ಶಿಷ್ಯರನ್ನು ಅಗಲಿದ್ದಾರೆ.

 

 

Donate Janashakthi Media

Leave a Reply

Your email address will not be published. Required fields are marked *