ಬ್ಯಾಂಕ್‌ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು: ನಿರ್ಮಲಾ ಸೀತಾರಾಮನ್‌

ಮುಂಬೈ: ‘ಬ್ಯಾಂಕ್‌ಗಳು ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳಬೇಕು ಮತ್ತು ಅವರ ಸ್ಥಳೀಯ ಭಾಷಾ ಜ್ಞಾನದ ಆಧಾರದಲ್ಲೇ ಅವರ ವೃತ್ತಿಪರತೆ ಅಳೆಯಬೇಕು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಈ ಸಂಬಂಧ ನೇಮಕಾತಿ ಹಾಗೂ ಮಾನವ ಸಂಪನ್ಮೂಲ ನೀತಿಗಳಲ್ಲಿ ಬದಲಾವಣೆಗೂ ಅವರು ಸೂಚಿಸಿದ್ದಾರೆ.

12ನೇ ಎಸ್‌ಬಿಐ ಬ್ಯಾಂಕಿಂಗ್ ಮತ್ತು ಅರ್ಥಶಾಸ್ತ್ರ ಸಮಾವೇಶ

12ನೇ ಎಸ್‌ಬಿಐ ಬ್ಯಾಂಕಿಂಗ್ ಮತ್ತು ಅರ್ಥಶಾಸ್ತ್ರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್‌, ‘ಪ್ರತಿಯೊಂದು ಶಾಖೆಯಲ್ಲಿ ನೇಮಿಸಲಾಗುವ ಎಲ್ಲಾ ಸಿಬ್ಬಂದಿಗೆ ಅಲ್ಲಿನ ಜನ ಮತ್ತು ಅವರಾಡುವ ಭಾಷೆಯನ್ನು ಅರ್ಥೈಸಿಕೊಳ್ಳುವ ಸಾಮರ್ಥ್ಯ ಇರಬೇಕು.

ಇದನ್ನೂ ಓದಿ: ಬೆಂಗಳೂರು | ಕಸ ವಿದ್ಯುತ್ ಉತ್ಪಾದಿಸುವ ಭೂಭರ್ತಿ ಘಟಕ ಪೂರ್ಣ

ಬ್ಯಾಂಕಿನ ಹಿರಿಯ ಅಧಿಕಾರಿಗಳಿಗೆ ಸ್ಥಳೀಯ ಭಾಷೆ ಬರದಿದ್ದರೂ, ಶಾಖೆಯ ಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿರುವವರು ಆ ರಾಜ್ಯದ ಭಾಷೆಯನ್ನು ಅರಿತಿರುವುದು ಕಡ್ಡಾಯ. ಇದೇ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು’ ಎಂದರು.

ಸ್ಥಳೀಯ ಗ್ರಾಹಕರ ಮಹತ್ವ ಮತ್ತು ಅವರೊಂದಿಗೆ ಸಂಪರ್ಕದಲ್ಲಿರುವುದರ ಅಗತ್ಯ

ಸ್ಥಳೀಯ ಗ್ರಾಹಕರ ಮಹತ್ವ ಮತ್ತು ಅವರೊಂದಿಗೆ ಸಂಪರ್ಕದಲ್ಲಿರುವುದರ ಅಗತ್ಯತೆಯನ್ನೂ ಸಚಿವೆ ವಿವರಿಸಿದರು. ‘ಬ್ಯಾಂಕಿನ ಬೆಳವಣಿಗೆಗಾಗಿ ಸ್ಥಳೀಯ ಗ್ರಾಹಕರೊಂದಿಗೆ ಸಂಪರ್ಕದಲ್ಲಿರುವುದು ಅಗತ್ಯ. ಮೊದಲೆಲ್ಲಾ ಅಧಿಕಾರಿಗಳಿಗೆ ಗ್ರಾಹಕರು ಮತ್ತು ಅವರ ಸಾಲ ಪಡೆದ ಅರ್ಹತೆಗಳ ಅರಿವಿರುತ್ತಿತ್ತು. ಆದರಿಂದು ಶಾಖೆಗಳಿಗೆ ತಮ್ಮ ಗ್ರಾಹಕರ ಪರಿಚಯವೇ ಇಲ್ಲದಂತಾಗಿದೆ. ತಂತ್ರಜ್ಞಾನ ಅಗತ್ಯವಾಗಿದ್ದರೂ, ಎಲ್ಲಾ ಕೆಲಸಗಳಿಗೆ ಅವನ್ನೇ ಅವಲಂಬಿಸುವುದು ಸಲ್ಲದು. ಕೆಲ ಸಂದರ್ಭಗಳಲ್ಲಿ ಸಿಬ್ಬಂದಿ ಖುದ್ದಾಗಿ ಜನರೊಂದಿಗೆ ಮಾತನಾಡುವುದು ಅಗತ್ಯ. ಇದಕ್ಕೆ ಭಾಷೆ ಮುಖ್ಯ. ಹಿಂದಿ, ಇಂಗ್ಲಿಷ್‌ಗಳನ್ನು ಬಲ್ಲವರಾಗಿದ್ದರೂ, ಮಾತೃಭಾಷೆಯಲ್ಲಿ ಮಾತನಾಡಿದಾಗ ಗ್ರಾಹಕರಿಗೆ ಅತ್ಯಾನಂದವಾಗುತ್ತದೆ’ ಎಂದು ಅವರು ಹೇಳಿದರು.

‘ಗ್ರಾಹಕರ ಮಾಹಿತಿಗಾಗಿ ಬ್ಯಾಂಕುಗಳೀಗ ಬಾಹ್ಯ ಕ್ರೆಡಿಟ್ ಮಾಹಿತಿ ಕಂಪನಿಗಳನ್ನು ಅವಲಂಬಿಸಿವೆ. ಇದರಿಂದಾಗಿ ಸಾಲಗಳು ತಿರಸ್ಕೃತಗೊಳ್ಳುವ ಸಾಧ್ಯತೆಯಿದೆ’ ಎಂದೂ ಎಚ್ಚರಿಸಿದ ಸೀತಾರಾಮನ್‌, ಹಳೆಯ ಬ್ಯಾಂಕುಗಳು ರಾಷ್ಟ್ರೀಕೃತಗೊಳ್ಳುವ ಮುನ್ನ ಗ್ರಾಹಕ ಸಂಪರ್ಕಕ್ಕಾಗಿ ಅನುಸರಿಸಿದ ಕ್ರಮಗಳನ್ನು ವಿವರಿಸಿದರು.

– ಕನ್ನಡಿಗರು ಬ್ಯಾಂಕುಗಳಿಗೆ ಹೋದಾಗ ಹಿಂದಿಯಲ್ಲಿ ಉತ್ತರಿಸುತ್ತಿದ್ದ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದವು

– ಕನ್ನಡ ಗ್ರಾಹಕರು ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ಮಾಡಿದ್ದು ವರದಿಯಾಗಿದ್ದವು

– ಸ್ಥಳೀಯ ಭಾಷೆ ಬಾರದವರನ್ನು ಬ್ಯಾಂಕುಗಳಿಗೆ ನೇಮಿಸುತ್ತಿರುವ ಬಗ್ಗೆ ದ.ಭಾರತದ ಹಲವೆಡೆ ಆಕ್ರೋಶ ವ್ಯಕ್ತವಾಗಿತ್ತು

– ಇದೀಗ ಬ್ಯಾಂಕಿಂಗ್‌ ಸಮಾವೇಶದಲ್ಲಿ ಬ್ಯಾಂಕುಗಳಿಗೆ ಈ ಬಗ್ಗೆ ಕಿವಿ ಹಿಂಡಿ ಹೇಳಿದ ಕೇಂದ್ರ ಸಚಿವೆ ನಿರ್ಮಲಾ

– ಬ್ಯಾಂಕಿನ ಉನ್ನತಾಧಿಕಾರಿಗಳಿಗೆ ಸ್ಥಳೀಯ ಭಾಷೆ ಗೊತ್ತಿರದಿದ್ದರೂ ಪರವಾಗಿಲ್ಲ, ಶಾಖೆಗಳಲ್ಲಿರುವವರಿಗೆ ತಿಳಿದಿರಬೇಕು

– ಸ್ಥಳೀಯ ಭಾಷೆ ಆಡುವವರನ್ನು ಬ್ಯಾಂಕ್‌ ಶಾಖೆಗಳ ಹುದ್ದೆಗೆ ನಿಯೋಜಿಸುವಂತೆ ಹೇಳಿದ ಹಣಕಾಸು ಮಂತ್ರಿ

ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | ಎಸ್ಐಟಿ ಪೊಲೀಸರು ದೌರ್ಜನ್ಯ ಮಾಡುವಂತಿಲ್ಲ- ಹೈಕೋರ್ಟ್ ಆದೇಶ Janashakthi Media

Donate Janashakthi Media

Leave a Reply

Your email address will not be published. Required fields are marked *