ಬಿಡಿಎ ಬಹುಕೋಟಿ ರೂಪಾಯಿ ಹಗರಣ: ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಮತ್ತೊಂದು ಭಾರೀ ಹಗರಣವೊಂದು ಜರುಗಿದೆ. ಬಿಡಿಎ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನು ಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡುವ ಮೂಲಕ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಮಾಡಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ.

ನಾಗರಾಜ್ ಎಂಬ ವ್ಯಕ್ತಿ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬಿಎಂಟಿಎಫ್ ಅಡಿ ಎಫ್ಐಆರ್ ದಾಖಲಾಗಿದ್ದು, ಸ್ವತಃ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಸೂಚಿಸಿದ್ದಾರೆ ಎನ್ನಲಾಗಿದೆ.

ಈಸ್ಟ್ ಆಫ್ ಎನ್‌ಜಿಇಎಫ್ ಬಡಾವಣೆ ನಿರ್ಮಾಣಕ್ಕಾಗಿ ಈರಣ್ಣ ಎಂಬುವರಿಗೆ ಸೇರಿದ ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್.ಪುರ ಹೋಬಳಿಯ ಬಾಣಸವಾಡಿ ಗ್ರಾಮದ ಸರ್ವೆ ಸಂಖ್ಯೆ 73 ರಲ್ಲಿದ್ದ 4 ಎಕರೆ 13 ಗುಂಟೆ ಜಮೀನನ್ನು 1986ರಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಬಿಡಿಎ ಇದಕ್ಕೆ ಪರಿಹಾರದ ಹಣವನ್ನು ಸಿವಿಲ್ ನ್ಯಾಯಾಲಯದಲ್ಲಿ ಠೇವಣಿ ಇಟ್ಟಿತ್ತು.

ಆದರೆ, ಈರಣ್ಣ ಬಳಿ ನಾಗರಾಜ್ ಎಂಬ ವ್ಯಕ್ತಿ ಜಿಪಿಎ ಬರೆಯಿಸಿಕೊಂಡು ಜಮೀನು ತನ್ನದು ಎಂದು ಪ್ರತಿಪಾದಿಸಿ, ನಿವೇಶನಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಿದ್ದರು. ಈ ಮಧ್ಯೆ, ರೆವಿನ್ಯೂ ನಿವೇಶನದಾರರ ಮೂಲಕ ಬಿಡಿಎ ತಮ್ಮ ನಿವೇಶನಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಇದಕ್ಕೆ ಬದಲಿ ನಿವೇಶನಗಳನ್ನು ನೀಡುವಂತೆ ಸೂಚನೆ ನೀಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ಬಿಡಿಎ ನಿಯಮಾನುಸಾರ ನಿರ್ಧಾರ ಕೈಗೊಳ್ಳಬೇಕೆಂದು ಸೂಚಿಸಿ ಅರ್ಜಿ ವಿಲೇವಾರಿ ಮಾಡಿತ್ತು.

ನಾಗರಾಜ್ ಎಲ್ಲಾ ರೆವಿನ್ಯೂ ನಿವೇಶನದಾರರಿಂದ ಸದರಿ ನಿವೇಶನಗಳನ್ನು ತನ್ನ ಹೆಸರಿಗೆ ಬರೆಯಿಸಿಕೊಂಡು, ತನಗೆ ಬದಲಿ ನಿವೇಶನಗಳನ್ನು ಮಂಜೂರು ಮಾಡುವಂತೆ ಬಿಡಿಎಗೆ ಅರ್ಜಿ ಸಲ್ಲಿಸುತ್ತಾನೆ. ಈ ಬಗ್ಗೆ ಎರಡು ಬಾರಿ ಚರ್ಚಿಸಿದ್ದ ಬಿಡಿಎ ಪ್ರಾಧಿಕಾರ ಸಭೆಯು ನಿಯಮಾವಳಿಗಳ ಪ್ರಕಾರ ಬದಲಿ ನಿವೇಶನ ನೀಡಲು ಸಾಧ್ಯವಿಲ್ಲ ಎಂದು ನಾಗರಾಜ್ ಮನವಿಯನ್ನು ತಿರಸ್ಕರಿಸಿತ್ತು.

2012ರಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ನಾಗರಾಜ್ ಗೆ ಅರ್ಕಾವತಿ ಬಡಾವಣೆಯ ವಿವಿಧ ಸರ್ವೇ ನಂಬರ್ ಗಳಲ್ಲಿ ಒಟ್ಟು 4 ಎಕರೆ 13 ಗುಂಟೆ ಜಮೀನನ್ನು ಬದಲಿಯಾಗಿ ನೀಡಲು ನಿರ್ಧಾರವಾಗಿ ಅದರಂತೆ ಮಂಜೂರು ಮಾಡಲಾಗುತ್ತದೆ. ಹೀಗೆ ಮಂಜೂರು ಮಾಡಲಾದ ಕೆಲವು ಜಾಗಗಳು ಬಫರ್ ಝೋನ್ ಸೇರಿದಂತೆ ಇನ್ನಿತರೆ ಕಾರಣಗಳಿಂದ ಮನೆ ನಿರ್ಮಾಣಕ್ಕೆ ಅಸಾಧ್ಯ ಎಂಬ ನೆಪ ಹೇಳಿ ನಾಗರಾಜ್ ನನಗೆ ಬೇರೆ ಕಡೆ ಭೂಮಿ ನೀಡಬೇಕೆಂದು ಮತ್ತೊಮ್ಮೆ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿ ಮಾಡುತ್ತಾನೆ. ಈ ಮನವಿಯನ್ನು ಪುರಸ್ಕರಿಸಿದ್ದ ಬಿಡಿಎ ಅಧಿಕಾರಿಗಳು 2014 ರಲ್ಲಿ ಥಣಿಸಂದ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಜಿಪಿಎ ದಾರನಾಗಿದ್ದ ನಾಗರಾಜ್ ಹೆಸರಿಗೆ ಮಂಜೂರು ಮಾಡಿ, ನೋಂದಣಿಯನ್ನೂ ಮಾಡಿಸಿ ಸ್ವಾಧೀನಪತ್ರಗಳನ್ನೂ ನೀಡಿರುತ್ತಾರೆ.

ಇದೊಂದು ದೊಡ್ಡ ಮಟ್ಟದ ಅಕ್ರಮವಾಗಿದೆ ಎಂಬುದನ್ನು ಗಮನಿಸಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭೂಮಂಜೂರಾತಿ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಬಿಡಿಎ ಕಾರ್ಯಪಡೆಯ ಡಿವೈಎಸ್ ಪಿ ರವಿಕುಮಾರ್ ತಂಡಕ್ಕೆ ಆದೇಶ ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ರವಿಕುಮಾರ್, ಇನ್ಸ್ ಪೆಕ್ಟರ್ ಶ್ರೀನಿವಾಸ್ ಅವರು ಪ್ರಕರಣದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆಯುಕ್ತರು ಮತ್ತು ಅಧ್ಯಕ್ಷರಿಗೆ ವರದಿ ನೀಡಿದ್ದರು.

Donate Janashakthi Media

Leave a Reply

Your email address will not be published. Required fields are marked *