ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಯನ್ನು ತಡೆಯಲು ಬಿಜೆಪಿ ಚುನಾವಣಾ ಆಯೋಗದ ಮೂಲಕ ಷಡ್ಯಂತ್ರ ರೂಪಿಸುತ್ತಿದೆ ಎಂದು ಏಪ್ರಿಲ್ 7ರಂದು ಇಲ್ಲಿನ ಬಾಪೂಜಿ ಅತಿಥಿಗೃಹದಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
“ಬಡವರು ಮತ್ತು ನಿರುದ್ಯೋಗಿ ಯುವಕರಿಗೆ ಆಸರೆಯಾಗಿರುವ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ ಪತ್ರ ಬರೆದಿದೆ. ಇದು ಬಡವರ ಮೇಲಿನ ದಾಳಿಯಾಗಿದ್ದು, ರಾಜ್ಯದ ಮತದಾರರು ಚುನಾವಣೆಯಲ್ಲಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
ಜನರಿಗೆ ಆತಂಕ ಬೇಡ:
ಯೋಜನೆಗಳ ಸ್ಥಗಿತದ ಬಗ್ಗೆ ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ ಡಿಸಿಎಂ, “ಕಳೆದ ತಿಂಗಳವರೆಗಿನ ಕಂತುಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮ ಸಡಿಲಿಕೆ ಬೇಡ: ಸುಪ್ರೀಂ ಕೋರ್ಟ್
ಪ್ರಸ್ತುತ ತಿಂಗಳ ಹಣವನ್ನು ಚುನಾವಣೆ ಪ್ರಕ್ರಿಯೆ ಮುಗಿದ ತಕ್ಷಣವೇ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. ನಾವು ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ” ಎಂದರು.
1.25 ಲಕ್ಷ ಕೋಟಿ ವಿನಿಯೋಗ:
“ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕಳೆದ ಎರಡೂವರೆ ವರ್ಷಗಳಲ್ಲಿ ಜನರಿಗಾಗಿ 1.25 ಲಕ್ಷ ಕೋಟಿ ರೂಪಾಯಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ವಿನಿಯೋಗಿಸಲಾಗಿದೆ. ನಮ್ಮದು ಕೇವಲ ಚುನಾವಣಾ ಘೋಷಣೆಗಳಲ್ಲ, ಇವು ಬಡವರ ರಕ್ಷಣೆಗಾಗಿ ಜಾರಿಗೆ ತಂದಿರುವ ಕಾನೂನುಬದ್ಧ ಕಾರ್ಯಕ್ರಮಗಳು. ಆದರೆ ಬಿಜೆಪಿ ಈ ಯೋಜನೆಗಳನ್ನು ನಕಲು ಮಾಡುತ್ತಲೇ, ಇಲ್ಲಿ ಅವುಗಳನ್ನು ನಿಲ್ಲಿಸಲು ಸಂಚು ಹೂಡುತ್ತಿದೆ” ಎಂದು ಟೀಕಿಸಿದರು.
ಪ್ರಧಾನ ಮಂತ್ರಿಗಳ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯಾಗಿಲ್ಲ ಎನ್ನುವ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಮಾಹಿತಿ ಇಲ್ಲದ ಹೇಳಿಕೆ ನೀಡಬಾರದು ಎಂದು ಶಿವಕುಮಾರ್ ಹೇಳಿದರು.
ಇದನ್ನೂ ನೋಡಿ: ʼಮಿಥಿಲೆಯ ಮಾವಿನ ಮರʼದಿಂದ ಎರಡು ಕವಿತೆಗಳು Janashakthi Media
