ಬೆಂಗಳೂರು : ಒಳ ಮಿಸಲಾತಿಯ ವಿಚಾರವಾಗಿ ಬಿಜೆಪಿ ನಾಯಕರು ಜನರನ್ನು ದಾರಿ ತಪ್ಪಿಸುವ ಮಾತುಗಳನ್ನಾಡುತ್ತಿದ್ದಾರೆ. ನಾಗಮೋಹನ್ ದಾಸ್ ಅವರ ಆಯೋಗದ ವರದಿ ಸಲ್ಲಿಕೆಯಾದ 20 ದಿನಗಳಲ್ಲೇ ರಾಜ್ಯಸರ್ಕಾರ ಒಳಮೀಸಲಾತಿ ಜಾರಿ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ಒಳ ಮಿಸಲಾತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1992ರಲ್ಲಿ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಗಾಗಿ ನ್ಯಾಯಾಮೂರ್ತಿ ಸದಾಶಿವ ಆಯೋಗವನ್ನು ರಚನೆ ಮಾಡಿತ್ತು. ಅದರ ವರದಿ ಕೂಡ ಸಲ್ಲಿಕೆಯಾಗಿತ್ತು. ಆದರೆ ಬಿಜೆಪಿ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿ ಮುಗಿದ ಅಧ್ಯಾಯ ಎಂದು ಹೇಳಿತ್ತು.
ಈಗ ಹೋರಾಟ ಮಾಡುವುದಾಗಿ ಹೇಳುತ್ತಿರುವ ಗೋವಿಂದ ಕಾರಜೋಳ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಎ. ನಾರಾಯಣ ಸ್ವಾಮಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು. ಈ ಇಬ್ಬರ ಅಧಿಕಾರಾವಧಿಯಲ್ಲೇ ಒಳಮೀಸಲಾತಿ ಜಾರಿಯಾಗದೆ ಸದಾಶಿವ ಅಯೋಗ ವರದಿ ತಿರಸ್ಕಾರವಾಗಿತ್ತು ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಒಳಮೀಸಲಾತಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆ ಬಳಿಕ ಸುಪ್ರೀಂ ಕೋರ್ಟ್ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ತೀರ್ಪು ನೀಡಿದೆ. ಆದನ್ನು ಆಧರಿಸಿ ಎಂಪ್ಯಾರಿಕಲ್ ಡಾಟಾ ಸಂಗ್ರಹಿಸಲು ನ್ಯಾಯಾಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದ್ದೇವೆ. ಆಯೋಗ ವರದಿ ಸಲ್ಲಿಸಿದ 15-20 ದಿನಗಳ ಒಳಗಾಗಿ ಒಳಮೀಸಲಾತಿಯಲ್ಲೂ ಜಾರಿ ಮಾಡುತ್ತೇವೆ ಎಂದರು.
ಇದನ್ನೂ ಓದಿ : ಕಮ್ಯೂನಿಸಂ ಕುರಿತು ಅಪ್ರಬುದ್ಧ; ಬಾಲಿಶ ಹೇಳಿಕೆ | ರಾಹುಲ್ ಗಾಂಧಿ ಒಳ ಮಿಸಲಾತಿ
ಒಳಮೀಸಲಾತಿಯ ಬದ್ಧತೆಯನ್ನು ಚಿತ್ರದುರ್ಗದ ಸಮಾವೇಶದಲ್ಲೇ ಕಾಂಗ್ರೆಸ್ ಘೋಷಣೆ ಮಾಡಿದೆ. ಪಕ್ಷ ತನ್ನ ಮಾತಿಗೆ ಕಟಿಬದ್ಧವಾಗಿದೆ. ನುಡಿದಂತೆ ನಡೆಯುತ್ತಿದೆ. ನಾವು ಒಳಮೀಸಲಾತಿ ಜಾರಿ ಮಾಡುವ ಹಂತದಲ್ಲಿರುವಾಗ ಬಿಜೆಪಿಯವರು ಪ್ರತಿಭಟನೆ ನಡೆಸಲು ಮುಂದಾಗಿರುವುದು ರಾಜಕೀಯ ಕಾರಣಕ್ಕೆ. ಇದು ಜನರನ್ನು ಎತ್ತಿ ಕಟ್ಟುವ ದುರುದ್ದೇಶವಾಗಿದೆ ಎಂದು ಆರೋಪಿಸಿದರು.
ಬಿಜೆಪಿಯವರಿಗೆ ಪ್ರತಿಭಟನೆ ನಡೆಸುವ ನೈತಿಕ ಹಕ್ಕಿಲ್ಲ. ಈ ಹಿಂದೆ ವರದಿಯನ್ನು ತಿರಸ್ಕರಿಸಿದವರು, ಮೀಸಲಾತಿ ವಿರುದ್ಧವಾಗಿರುವವರಿಂದ ನಾವು ನೈತಿಕತೆ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದರು.
ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆಡಳಿತಾತಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಅವರು ಯಾವುದೇ ಸಾಂವಿಧಾನಿಕ ಸ್ಥಾನಮಾನ ಹೊಂದಿಲ್ಲ. ಹೀಗಾಗಿ ಸಭೆ ನಡೆಸುವ ಅಧಿಕಾರವು ಅವರಿಗಿಲ್ಲ ಎಂದರು.
ಇದನ್ನೂ ನೋಡಿ : ಧರ್ಮಸ್ಥಳದಲ್ಲಿನ ಕೊಲೆ ಅತ್ಯಾಚಾರಗ ಹಿಂದೆ ಇರುವವರು ಯಾರು? ಸತ್ಯ ಹೊರ ಬರಲಿ… ಒಳ ಮಿಸಲಾತಿ
