ವಂಚನೆ ಪ್ರಕರಣ : ಇಬ್ಬರು ಬಿಜೆಪಿ ಶಾಸಕರಿಗೆ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಹಾಗೂ ಲಕ್ಷಾಂತರ ರೂಪಾಯಿ ಮೊತ್ತದ ಕಾಮಗಾರಿಯನ್ನು ತನ್ನ ಮಕ್ಕಳಿಗೆ ನೀಡಿದ ಪ್ರಕರಣದಲ್ಲಿ ಹಾವೇರಿ ಶಾಸಕ ನೆಹರು ಓಲೆಕಾರ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.

ಸಾಲ‌ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.

ಲಕ್ಷಾಂತರ ರೂಪಾಯಿ ಮೊತ್ತದ ಕಾಮಗಾರಿಯನ್ನು ತನ್ನ ಮಕ್ಕಳಿಗೆ ನೀಡದ ಪ್ರಕರಣದಲ್ಲಿ ಹಾವೇರಿ ಶಾಸಕ ನೆಹರು ಓಲೆಕಾರ್ ಜೈಲುಪಾಲಾಗಲಿದ್ದಾರೆ. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಹತ್ವ ತೀರ್ಪು ನೀಡಿದೆ.

ಒಟ್ಟು ಸುಮಾರು 50 ಲಕ್ಷ ಮೊತ್ತದ ಕಾಮಗಾರಿಯನ್ನು ಶಾಸಕ ನೆಹರು ಓಲೇಕಾರ್‌ ಅವರು ತಮ್ಮ ಪುತ್ರರಾದ ಮಂಜುನಾಥ್‌, ದೇವರಾಜ್‌ ಅವರಿಗೆ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು, ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕರು ಹಾಗೂ ಅವರ ಇಬ್ಬರು ಮಕ್ಕಳಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೋಮವಾರ ಆದೇಶ ಹೊರಡಿಸಿದೆ.

50 ಲಕ್ಷ ರೂ. ಮೊತ್ತದ ಕಾಮಗಾರಿ ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲವು ಕಾಮಗಾರಿಗಳಲ್ಲಿ ಶಾಸಕರಾದ ನೆಹರು ಓಲೆಕಾರ್ ಅವರ ವಿರುದ್ಧ ಸ್ವಜನ ಪಕ್ಷಪಾತದ ಆರೋಪ ಕೇಳಿ ಬಂದಿದ್ದು, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ಇದಾಗಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ‌ ಶಾಸಕರಿಗೆ ಜಾಮೀನು ಮಂಜೂರು ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

 

Donate Janashakthi Media

Leave a Reply

Your email address will not be published. Required fields are marked *