₹40 ಲಕ್ಷ ಲಂಚ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ

ಬೆಂಗಳೂರು : ಟೆಂಡರ್ ಕೊಡಿಸೋದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು, 40 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಗೆ ಗುತ್ತಿಗೆದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಈ ಗುತ್ತಿಗೆಯನ್ನು ಕೊಡಿಸೋದಕ್ಕಾಗಿ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವಂತ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಹಾಗೂ ಬಿಡಬ್ಲ್ಯೂ ಎಸ್‌ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿರುವಂತ ಪ್ರಶಾಂತ್ 80 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಗುತ್ತಿಗೆದಾರರು ದೂರು ನೀಡಿದ್ದರು. ಇಂದು ಮುಂಗಡವಾಗಿ 40 ಲಕ್ಷ ಲಂಚದ ಹಣವನ್ನು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿಯಲ್ಲಿ ಪುತ್ರ ಪ್ರಶಾಂತ್ ಗೆ ನೀಡೋದಕ್ಕೆ ತೆರಳಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ, 40 ಲಕ್ಷ ಹಣದೊಂದಿಗೆ ಶಾಸಕರ ಪುತ್ರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ₹81 ಲಕ್ಷ‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಮಗನಿಗೆ ತಲುಪಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದರು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.

Donate Janashakthi Media

Leave a Reply

Your email address will not be published. Required fields are marked *