ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದು ಕಾರ್ಮಿಕರಿಬ್ಬರ ಸಾವು

ಬೆಂಗಳೂರು : ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್​ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಪಾದಚಾರಿಗಳು ಮೃತಪಟ್ಟಿದ್ದಾರೆ. ರಿಂಗ್ ರಸ್ತೆಯ ಲಗ್ಗೆರೆ ಬಳಿಯ ಕೆಂಪೇಗೌಡ ಆರ್ಚ್ ಬಳಿ ಘಟನೆ ನಡೆದಿದೆ. ಕೊಪ್ಪಳ ಮೂಲದ ಕುಂಟ್ಯಪ್ಪ ಪೂಜಾರ್ (35) ಮತ್ತು ತುರುವೆಕೆರೆ ಬಳಿಯ ವಿಟ್ಲಪುರ ಮೂಲದ ತಿಮ್ಮೆಗೌಡ (25) ಮೃತರು. ಲಗ್ಗೆರೆ ರಿಂಗ್ ರಸ್ತೆಯ ಕೆಂಪೇಗೌಡ ಆರ್ಚ್ ಬಳಿಯ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ರಾತ್ರಿ 7.30ರಲ್ಲಿ ಅಪಘಾತ ಸಂಭವಿಸಿದೆ.

ಗಾರೆ ಕೆಲಸ ಮಾಡುತ್ತಿದ್ದ ಪೂಜಾರ್, ಲಗ್ಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಕೆಲಸ ಮುಗಿಸಿಕೊಂಡು ಮನೆಗೆ ಹೋಗಬೇಕಾದರೆ ಅಪಘಾತ ಸಂಭವಿಸಿದೆ. ಮತ್ತೊಮ್ಮೆ ತಿಮ್ಮೇಗೌಡ, ತಮ್ಮ ಊರಿನಲ್ಲಿ ವಾಟರ್‌ಮ್ಯಾನ್ ಆಗಿದ್ದ. ಲಗ್ಗೆರೆಯಲ್ಲಿ ನೆಲೆಸಿದ್ದ ಅಕ್ಕನ ಮನೆಗೆ ಬಂದಾಗ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಂಪೇಗೌಡ ಆರ್ಚ್ ಬಳಿಯ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಚಾಲಕ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದ. ಬಸ್ ಹಿಂದೆ ಇಬ್ಬರು ಪಾದಚಾರಿಗಳು ರಸ್ತೆ ದಾಟುತ್ತಿದ್ದರು. ಇದೇ ವೇಳೆ ಹಿಂದೆ ಅತೀ ವೇಗವಾಗಿ ಬಂದ ಮತ್ತೊಂದು ಬಿಎಂಟಿಸಿ ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ನಿಲ್ದಾಣದಲ್ಲಿ ನಿಂತಿದ್ದ ಬಸ್‌ಗೆ ಗುದ್ದಿದೆ. ಈ ಎರಡು ಬಸ್‌ಗಳ ನಡುವೆ ಸಿಲುಕಿ ಇಬ್ಬರು ಪಾದಚಾರಿಗಳು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿ ರಾಜಾಜಿನಗರ ಸಂಚಾರ ಠಾಣೆ ಪೊಲೀಸರು, ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಸಂಬಂಧ ರಾಜಾಜಿನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಿಎಂಟಿಸಿ ಬಸ್‌ನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *