ಕಾರ್ಮಿಕರ ಐಕ್ಯತೆ – ಜನತೆಯ ಸೌಹಾರ್ದತೆಗಾಗಿ ಸಿಐಟಿಯು 15ನೇ ರಾಜ್ಯ ಸಮ್ಮೇಳನ

ಬೆಂಗಳೂರು :  ಕಾರ್ಮಿಕರ ಹಕ್ಕುಗಳಿಗಾಗಿ, ಸಮರಶೀಲ ಹೋರಾಟವನ್ನು ಸಂಘಟಿಸುತ್ತಾ, ಕಾರ್ಮಿಕರ ರಕ್ಷಣೆಗಾಗಿ ಪಣತೊಟ್ಟು ಸದಾ ಚಳುವಳಿಯ ಮೂಲಕ ಎದುರಾಗುವ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸುತ್ತಿರುವ ಕಾರ್ಮಿಕ ಸಂಘಟನೆ ಸಿಐಟಿಯು ಈ ಬಾರಿ ಕಾರ್ಮಿಕರ ಐಕ್ಯತೆ -ಜನತೆಯ ಸೌಹಾರ್ದತೆಗಾಗಿ 15ನೇ ರಾಜ್ಯ ಸಮ್ಮೇಳನವನ್ನು ಉಡುಪಿಯಲ್ಲಿ ಹಮ್ಮಿಕೊಂಡಿದೆ.

ಉಡುಪಿ ಜಿಲ್ಲೆಯ ಕುಂದಾಪುರದ ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನವೆಂಬರ್ 15 -17 ವರೆಗೆ ರಾಜ್ಯ ಸಮ್ಮೇಳನ ನಡೆಯಲಿದೆ. ನವೆಂಬರ್ 15ರಂದು ಬೆಳಿಗ್ಗೆ 10.30 ಗಂಟೆಗೆ ಸಿಐಟಿಯು ಅಖಿಲ ಭಾರತ ಅಧ್ಯಕ್ಷರಾದ ಡಾ.ಹೇಮಲತಾ ಅವರು ಸಿಐಟಿಯು  ಸಮ್ಮೇಳನ ಉದ್ಘಾಟಿಸಲಿದ್ದಾರೆ.

ಪ್ರಸಕ್ತ ಆಳುವ ಸರ್ಕಾರವು, ಸ್ವಾತಂತ್ರ್ಯ ಪೂರ್ವದಿಂದ ಇತ್ತೀಚಿನವರೆಗೆ ಕಾರ್ಮಿಕರು ಸಮರಧೀರ ಚಳವಳಿ ಮೂಲಕ ಗಳಿಸಿದ 44 ಕಾರ್ಮಿಕ ಕಾನೂನುಗಳಲ್ಲಿ 15 ಕಾನೂನುಗಳನ್ನು ರದ್ದುಗೊಳಿಸಿ ಉಳಿದ 29 ಕಾನೂನುಗಳನ್ನು ವಿಲೀನಗೊಳಿಸಿ 4 ಸಂಹಿತೆಗಳನ್ನಾಗಿ ರೂಪಿಸಿ ಶ್ರಮಿಕರನ್ನು ಬಂಡವಾಳದ ಗುಲಾಮರನ್ನಾಗಿಸುವ ಪ್ರಯತ್ನಗಳು ವ್ಯವಸ್ಥಿತವಾಗಿ ನಡೆಸುತ್ತಿದೆ. ಇದರಿಂದ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕೋಟ್ಯಂತರ ಕಾರ್ಮಿಕರಿಗೆ, ಕಟ್ಟಡ, ಹಂಚು, ಬೀಡಿ ಮತ್ತಿತ್ತರ ಕಾರ್ಮಿಕರ ಸೌಲಭ್ಯಗಳಿಗೆ ಕತ್ತರಿ ಬೀಳಲಿದೆ. ಸ್ಕೀಂ ನೌಕರರಾದ ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಗುತ್ತಿಗೆ ಕಾರ್ಮಿಕರು, ಹೊರಗುತ್ತಿಗೆ, ಟ್ರೈನಿ, ಅಪ್ರೆಂಟಿಸ್ ಮೊದಲಾದ ಹೆಸರಿನಲ್ಲಿ ಕಡಿಮೆ ಕೂಲಿಗೆ ದುಡಿಸಿಕೊಳ್ಳುತ್ತಿರುವುದು ಹೆಚ್ಚಳಗೊಂಡಿದೆ. ಅಂಗನವಾಡಿ ನೌಕರರಿಗೆ ಗ್ರಾಚ್ಯುವಿಟಿ ನೀಡಬೇಕೆಂದು ಸುಪ್ರಿಂಕೋರ್ಟ್ ತೀರ್ಪು ನೀಡಿ 6 ತಿಂಗಳು ಕಳೆದರೂ ಜಾರಿಯಾಗಿಲ್ಲ. ಇಂತಹ ಹಲವು ಜ್ವಲಂತ ಸಮಸ್ಯೆಗಳನ್ನು ಕಾರ್ಮಿಕರು ಎದುರಿಸುತ್ತಿದ್ದಾರೆ.

ಅಸಂಘಟಿತ ಕ್ಷೇತ್ರದಲ್ಲಿ ದುಡಿಮೆ ಮಾಡುತ್ತಿರುವ ಆಟೋ, ಟ್ಯಾಕ್ಸಿ, ಖಾಸಗಿ ಬಸ್ಸು ಚಾಲಕರು, ನಿರ್ವಾಹಕರಿಗೆ ಕಲ್ಯಾಣ ಮಂಡಳಿ ಮುಖಾಂತರ ಸಾಮಾಜಿಕ  ಭದ್ರತೆ  ಇಲ್ಲದಂತಾಗಿದೆ. ಇನ್ನೊಂದೆಡೆ ನಮ್ಮ ದೇಶದ ಆರ್ಥಿಕ ಬೆನ್ನೆಲುಬಾಗಿದ್ದ ಸಾರ್ವಜನಿಕ ಉದ್ಯಮಗಳನ್ನು ಕೆಲವೇ ವ್ಯಕ್ತಿಗಳ ಹಿತಕೋಸ್ಕರ ಖಾಸಗೀಕರಿಸಿ ಅಭಿವೃದ್ಧಿ ಎಂದು ಬಿಂಬಿಸಲು ಹೊರಟಿದೆ. ಇಂತಹ ನೀತಿಗಳ ವಿರುದ್ಧ ದೇಶಾದಾದ್ಯಂತ ಸಿಐಟಿಯು ಮುತುವರ್ಜಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳು ಐಕ್ಯತೆಯಿಂದ ಹತ್ತಾರು ಹೋರಾಟ, ಮುಷ್ಕರಗಳನ್ನು ಸಂಘಟಿಸಿದೆ.

ಸ್ವಾತಂತ್ರ್ಯಗಳಿಸಿದ 75 ವರ್ಷಗಳ ನಂತರವೂ ದೇಶದ ರೈತನ ಬೆಳೆಗಳಿಗೆ ಬೆಲೆಗಳಿಲ್ಲದೇ ಆತ್ಮಹತ್ಯೆ ಮುಂದುವರಿದಿದೆ. ಈ ಹಿಂದೆ ಅತ್ಯಲ್ಪ ರಕ್ಷಣೆಗಿದ್ದ ಕಾನೂನುಗಳನ್ನು ಬಿಜೆಪಿ ನೇತೃತ್ವದ ಸರ್ಕಾರ ರದ್ದುಗೊಳಿಸಿ ನೂತನ ಕೃಷಿ ಕಾಯ್ದೆ ತಂದಿರುವುದು ರಾಜ್ಯದಲ್ಲಿ ಇಂದಿಗೂ ಜಾರಿಯಲ್ಲಿದೆ. ದೇಶದ ಐನೂರಕ್ಕೂ ಅಧಿಕ ರೈತ ಸಂಘಟನೆಗಳು ನಡೆಸಿದ ಐತಿಹಾಸಿಕ ಹೋರಾಟಗಳು ಸ್ಪೂರ್ತಿದಾಯಕ ಹೋರಾಟಗಳನ್ನು ಮುನ್ನಡೆಸಲು ಕಾರ್ಮಿಕ ವರ್ಗ ದೃಢವಾದ ಐಕ್ಯತೆ ರೈತರ ಜೊತೆ ಸಾಧಿಸಲು ಸಮ್ಮೇಳನ ಒತ್ತು ನೀಡಲಿದೆ.

2014ರ  ನಂತರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಾರ್ಮಿಕ ವರ್ಗವನ್ನು ಕೇಂದ್ರಿಕರಿಸಿ ವ್ಯಾಪಕ ದಾಳಿ ನಡೆಸುತ್ತಿದೆ. ಬೆಲೆ ಏರಿಕೆ ಮತ್ತು ನಿರುದ್ಯೋಗದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆಗಳನ್ನು ನಿಯಂತ್ರಿಸಬೇಕಾದ ಸರ್ಕಾರಗಳು ತೆರಿಗೆ ಹೆಚ್ಚಿಸುವ ಮೂಲಕ ತಾವು ಬೆಲೆ ಏರಿಕೆಗೆ ಕಾರಣವಾಗಿವೆ. ಮತ್ತೊಂದು ಕಡೆ ದೇಶದ ಜನರ ಐಕ್ಯತೆ ವಿಭಜಿಸುವ ಕೆಲಸಗಳನ್ನು ಕೋಮುವಾದಿ ಮತಾಂಧ ಶಕ್ತಿಗಳು ಇಂತಹ ನೀತಿಗಳನ್ನು ಮರೆಮಾಚಲು ಸೌಹಾರ್ದತೆಗಾಗಿ ಆಚರಿಸಲ್ಪಡುವ ಹಬ್ಬ, ಜಾತ್ರೆಗಳಿಗೂ ಮತಾಂಧತೆಯ ಬಣ್ಣ ಹಚ್ಚಲಾಗುತ್ತಿದೆ.

ಸರ್ಕಾರದ ಇಂತಹ ನೀತಿಗಳಿಂದ ಕಾರ್ಮಿಕ ವರ್ಗ ಎದುರಿಸುತ್ತಿರುವ ಸಮಸ್ಯೆಗಳು, ಜನಸಾಮಾನ್ಯರ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ರಾಜ್ಯ ಸಮ್ಮೇಳನದಲ್ಲಿ ಚರ್ಚಸಿ ಮುಂದಿನ ಮೂರು ವರ್ಷಗಳಲ್ಲಿ ಸಿಐಟಿಯು ಸಂಘಟನೆ ತನ್ನ ಹೋರಾಟಗಳನ್ನು ನಿರ್ಣಯಿಸಲಿದೆ. ಮುಂದಿನ ಮೂರು ವರ್ಷಗಳಿಗೆ ರಾಜ್ಯದ ಸಂಘಟನೆಯನ್ನು ಮುನ್ನೆಡೆಸಲು ಹೊಸ ನಾಯಕತ್ವವನ್ನು ಚುನಾಯಿಸಲಿದೆ.

ಸಮ್ಮೇಳನದಲ್ಲಿ ರಾಜ್ಯದ 31 ಜಿಲ್ಲೆಗಳಿಂದ ವಿವಿಧ ಕಾರ್ಮಿಕರ ನಡುವೆ ಅವರ ಕ್ಷೇತ್ರಗಳಲ್ಲಿ ದುಡಿಯುತ್ತಿರುವ 130 ಮಹಿಳಾ ಪ್ರತಿನಿಧಿಗಳು ಸೇರಿದಂತೆ 420 ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕೊನೆಯ ದಿನವಾದ ನವೆಂಬರ್ 17 ರಂದು ಮಧ್ಯಾಹ್ನ 2.30 ಗಂಟೆಗೆ ಕುಂದಾಪುರ ಶಾಸ್ತ್ರಿ ವೃತ್ತದಿಂದ ಬೃಹತ್ ಮೆರವಣಿಗೆ ಹಾಗೂ ನೆಹರು ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಪ್ರಧಾನ ಭಾಷಣ ಮಾಡಲಿದ್ದಾರೆ. ಈ ಮೆರವಣಿಗೆಯಲ್ಲಿ ಜಿಲ್ಲೆಯಲ್ಲಿ ಸಿಐಟಿಯುಗೆ ಸಂಯೋಜನೆಗೊಂಡಿರುವ ಎಲ್ಲಾ ಕಾರ್ಮಿಕ ಸಂಘಗಳ ಸದಸ್ಯರು ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಐಟಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಮತ್ತು ಉಪಾಧ್ಯಕ್ಷರಾದ ಎ.ಕೆ. ಪದ್ಮನಾಭನ್ ಮಾರ್ಗದರ್ಶನ ನೀಡಲಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಮೀನಾಕ್ಷಿ ಸುಂದರಂ ಹಾಗೂ ಸಿಐಟಿಯು ರಾಜ್ಯ ಮುಖಂಡರೂ ವೇದಿಕೆಯಲ್ಲಿರುತ್ತಾರೆ. ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್. ವರಲಕ್ಷ್ಮಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ನಡೆಸಿಕೊಡಲಿದ್ದಾರೆ.

ಸಿಐಟಿಯು 15ನೇ ರಾಜ್ಯ ಸಮ್ಮೇಳನ ಯಶಸ್ಸಿಗೆ ಕಾರ್ಮಿಕರ ಹಿತೈಷಿಗಳು, ಲೇಖಕರು, ಕವಿಗಳು, ಜನಪರ ಹೋರಾಟಗಾರರೂ ಸೇರಿದಂತೆ ವಿಶಾಲವಾದ ಸ್ವಾಗತ ಸಮಿತಿ ರಚನೆ ಮಾಡುವ ಮೂಲಕ ಹಲವು ತಿಂಗಳುಗಳಿಂದ ಗ್ರಾಮ ಮಟ್ಟದಲ್ಲಿ ಪ್ರಚಾರವನ್ನು ಕೈಗೊಳ್ಳುವ ಮೂಲಕ ಸಮ್ಮೇಳನದ ಯಶಸ್ಸಿಗೆ ಕಾರ್ಮಿಕರು ದುಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *