ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಅದರ ವ್ಯಾಪ್ತಿಯ ಐದು ಪಾಲಿಕೆ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ಈ ಸಂಬಂಧ ಪ್ರಾಧಿಕಾರದ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ್ ರಾವ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಾಹಿತಿ
ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ಅವರು, ಜೂನ್ 30ರಿಂದ ಆರಂಭಗೊಂಡಿರುವ ಪರಿಷ್ಕರಣೆ ಕಾರ್ಯವು ಜುಲೈ 29ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ಮನೆಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ನಾಗರಿಕರಿಂದ ಭರ್ತಿ ಮಾಡಿಸಿಕೊಂಡು ಸಂಗ್ರಹಿಸುತ್ತಿದ್ದಾರೆ.
ಹೆಚ್ಚಿನ ನಾಗರಿಕರನ್ನು ತಲುಪುವ ಉದ್ದೇಶದಿಂದ ಶನಿವಾರ ಹಾಗೂ ಭಾನುವಾರಗಳಲ್ಲಿಯೂ BLOಗಳು ಮನೆಮನೆಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ. ನಾಗರಿಕರು ಸರಿಯಾದ ಮಾಹಿತಿಯನ್ನು ನೀಡಿ, ನಮೂನೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಸ್ಪೇನ್ನಲ್ಲಿ ಭೀಕರ ಕಾಡ್ಗಿಚ್ಚು: 12 ಸಾವು, 23 ಮಂದಿ ಕಾಣೆ
ಗಣತಿ ನಮೂನೆಗಳನ್ನು ವಿತರಿಸುವ ಹಾಗೂ ಸಂಗ್ರಹಿಸುವ ಅಧಿಕಾರ BLOಗಳಿಗೆ ಮಾತ್ರವಿದ್ದು, ಬೇರೆ ಯಾರಿಗೂ ಈ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಖರ ಹಾಗೂ ಸಮಗ್ರ ಮತದಾರರ ಪಟ್ಟಿಗಾಗಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಖಾಯಂ ನಿವಾಸ ಪ್ರಮಾಣಪತ್ರ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಕೇಂದ್ರ ಸರ್ಕಾರದಿಂದ ಯಾವುದೇ ಪ್ರಮಾಣಪತ್ರ ನೀಡಲಾಗುವುದಿಲ್ಲ. ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ರಾಜ್ಯ ಸರ್ಕಾರವೇ ಈ ಪ್ರಮಾಣಪತ್ರ ನೀಡುತ್ತದೆ ಎಂದು ಹೇಳಿದರು.
ಜಾತಿ ಪ್ರಮಾಣಪತ್ರದ ಕೊರತೆಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೊಂದರೆ ಉಂಟಾಗುತ್ತಿದೆ. ಖಾಯಂ ನಿವಾಸ ಪ್ರಮಾಣಪತ್ರದಲ್ಲಿ ಜಾತಿ ವಿವರ ಸೇರಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಬಾಂಗ್ಲಾದೇಶದವರಿಗೆ ಖಾಯಂ ನಿವಾಸ ಪ್ರಮಾಣಪತ್ರ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಅವರು, ಪೌರತ್ವ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಇದು ಸಂಪೂರ್ಣ ರಾಷ್ಟ್ರೀಯ ವಿಷಯ ಎಂದು ಸ್ಪಷ್ಟಪಡಿಸಿದರು.
ಇದನ್ನೂ ನೋಡಿ: “ವೋಟ್ ಬೇಕಾದಾಗ ನಾವು ಬೇಕು, ವ್ಯಾಪಾರಕ್ಕೆ ಜಾಗ ಕೇಳಿದರೆ ಬೇಡವೇ?” Janashakthi Media
