–ಹಲವು ಸಂಘಟನೆಗಳು ಭಾಗಿ, ವ್ಯಾಪಕ ಬೆಂಬಲ
ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು, ಹೆದ್ದಾರಿ ಅಗಲೀಕರಣ ಕಾಮಗಾರಿಗಳು ಶರವೇಗದಲ್ಲಿ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ, ಕೂಳೂರು ಸೇತುವೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ತಿಗೊಳಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್ ಗೇಟ್ ಗಳನ್ನು ಸ್ಥಾಪಿಸುವಾಗ ಅಂತರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ನೇತೃತ್ವದಲ್ಲಿ ನಂತೂರು ಜಂಕ್ಷನ್ ನಲ್ಲಿ ಸಾಮೂಹಿಕ ಧರಣಿ ನಡೆಯಿತು.
ಜಿಲ್ಲೆಯ ಹಲವು ಜನಪರ ಸಂಘಟನೆಗಳು ಧರಣಿಯಲ್ಲಿ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು, ಹೆದ್ದಾರಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳ ಮೇಲೆ ನಡೆದ ಧರಣಿಗೆ ನಾಗರಿಕರಿಂದ ಬೆಂಬಲ ವ್ಯಕ್ತವಾಯಿತು. ಧರಣಿಯ ತರುವಾಯ, ದ.ಕ. ಜಿಲ್ಲೆಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಮಂಗಳೂರಿನಲ್ಲಿ ಹೆದ್ದಾರಿ ಪ್ರಾಧಿಕಾರದ ವಿಶೇಷ ಸಭೆ ಕರೆಯುವಂತೆ ಆಗ್ರಹಿಸಿ ಲೋಕೋಪ ಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಪತ್ರವನ್ನು ಕಳುಹಿಸಿ ಕೊಡಲಾಯಿತು.
ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಸಾಮೂಹಿಕ ಧರಣಿ ಉದ್ಘಾಟಿಸಿದರು, ಮಾಜಿ ಸಚಿವ ಬಿ ರಮಾನಾಥ ರೈ ಸಮಾರೋಪ ಭಾಷಣ ಮಾಡಿದರು.
ಕೆಪಿಸಿಸಿ ವಕ್ತಾರ ಎಮ್ ಜಿ ಹೆಗ್ಡೆ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್, ದಲಿತ ಮುಖಂಡ ಎಂ ದೇವದಾಸ್, ಸಾಮರಸ್ಯ ಮಂಗಳೂರು ಇದರ ಮಂಜುಳಾ ನಾಯಕ್, ಆಮ್ ಆದ್ಮಿಯ ಎಸ್ ಎಲ್ ಪಿಂಟೊ, ಬಂಟ್ವಾಳ ತಾಲೂಕು ಹೋರಾಟ ಸಮಿತಿಯ ಸುರೇಶ್ ಕುಮಾರ್ ಬಂಟ್ವಾಳ, ಮಾಜಿ ಕಾರ್ಪೊರೇಟರ್ ಮರಿಯಮ್ಮ ಥಾಮಸ್, ರೈತ ಸಂಘದ ಕೆ ಯಾದವ ಶೆಟ್ಟಿ, ಆಲ್ವಿನ್ ಮಿನೇಜಸ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿವಿಧ ಸಂಘಟನೆಗಳ ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ವಸಂತ ಆಚಾರಿ, ಬಿ ಕೆ ಇಮ್ತಿಯಾಜ್, ಸದಾಶಿವ ದಾಸ್ ಕುಪ್ಪೆಪದವು, ರಾಧಾ ಮೂಡಬಿದ್ರೆ, ವಿ ಕುಕ್ಯಾನ್, ಎಚ್ ವಿ ರಾವ್, ಯೋಗೀಶ್ ಜಪ್ಪಿನಮೊಗರು, ಸದಾಶಿವ ಪಡುಬಿದ್ರೆ, ಅನುರಾಧ ಬಾಳಿಗಾ, ಕರಿಯ ವಾಮಂಜೂರು, ಕೃಷ್ಣಾ ಇನ್ನಾ, ಕೃಷ್ಣಪ್ಪ ಸಾಲ್ಯಾನ್, ಜೆ ಬಾಲಕೃಷ್ಣ ಶೆಟ್ಟಿ, ಸುಂದರ ಶೆಟ್ಟಿ, ವಸಂತಿ ಕುಪ್ಪೆಪದವು, ಲೋಲಾಕ್ಷಿ ಬಂಟ್ವಾಳ, ಪ್ರಮೀಳಾ, ಕೃಷ್ಣ ತಣ್ಣೀರುಬಾವಿ, ಬಾವಾ ಪದರಂಗಿ, ಟಿ ಎನ್ ರಮೇಶ್, ಮೂಡಾ ಸದಸ್ಯರಾದ ಅಬ್ದುಲ್ ಜಲೀಲ್, ನಿತಿನ್ ಕುತ್ತಾರ್, ಇಕ್ಬಾಲ್ ಮುಲ್ಕಿ, ಮೋಹನ್ ಶೆಟ್ಟಿ ಪಂಜಿಕಲ್ಲು, ಸಂಜೀವ ಬಲ್ಕೂರು, ಅಶ್ರಫ್ ಬದ್ರಿಯಾ, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮಾಜಿ ಕಾರ್ಪೊರೇಟರ್ ಗಳಾದ ಜಯಂತಿ ಶೆಟ್ಟಿ, ದಯಾನಂದ ಶೆಟ್ಟಿ, ಅಯಾಜ್ ಕೃಷ್ಣಾಪುರ ಮತ್ತಿತರರು ಧರಣಿಯ ನೇತೃತ್ವ ವಹಿಸಿದ್ದರು. ಹೋರಾಟ ಸಮಿತಿ ಸಹ ಸಂಚಾಲಕ ಶ್ರೀನಾಥ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.