10 ದಿನಗಳ ದಸರಾ ಮಹೋತ್ಸವ ಭದ್ರತೆಗೆ 5485 ಪೊಲೀಸರ ನಿಯೋಜನೆ: ಡಾ.ಚಂದ್ರಗುಪ್ತ

ಮೈಸೂರು: ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್‌ 26 ರಿಂದ ಅಕ್ಟೋಬರ್‌ 5ರವರೆಗೆ ಆಯೋಜಿಸಲಾಗಿದ್ದು, ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸುರಕ್ಷಿತೆ, ಸುಗಮ ಮತ್ತು ಸಂಭ್ರಮದ ಆಚರಣೆಯ ಹಿನ್ನೆಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲೆಲಾ ಭದ್ರತೆ ಒದಗಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.

ದಸರಾ ಮಹೋತ್ಸವ ಆಚರಣೆ ವೇಳೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ನಿಗಾ ವಹಿಸಲಾಗಿದೆ’ ಎಂದು ಹೇಳಿದರು.

‘ಮೈಸೂರು ನಗರದ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಭದ್ರತೆಗಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿದೆ. ನಗರದ 1,255, ಹೊರ ಜಿಲ್ಲೆಗಳಿಂದ 3,580 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, 650 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಒಟ್ಟು 5,485 ಪೊಲೀಸರನ್ನು ಕರ್ತವ್ಯದಲ್ಲಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೊಬೈಲ್ ಕಮಾಂಡ್ ಸೆಂಟರ್ ಬಸ್

‘ಮೊಬೈಲ್ ಕಮಾಂಡ್ ಸೆಂಟರ್ ಬಸ್ಸನ್ನು ಬಳಸಲಾಗುತ್ತಿದೆ. ಇದರಲ್ಲಿ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ ಇದೆ. ಇದು ಅತ್ಯಾಧುನೀಕ ತಂತ್ರಜ್ಞಾನದಿಂದ ಕೂಡಿದ್ದು, ನಿಖರವಾದ ಹಾಗೂ ಬಹು ದೂರದ ಪ್ರವೀಕ್ಷಣೆ ಮತ್ತು ಛಾಯಾಗ್ರಹಣವನ್ನು ಚಿತ್ರೀಕರಿಸಿಕೊಳ್ಳಲಿದೆ ಎಂದು ಹೇಳಿದರು.

‘ಅರಮನೆ ಮತ್ತು ಬನ್ನಿಮಂಟಪದ ಎಲ್ಲಾ ಪ್ರವೇಶ ದ್ವಾರಗಳಲ್ಲಿ ಅಧಿಕಾರಿಗಳು ಕರ್ತವ್ಯದಲ್ಲಿ ನಿಯೋಜಿತಗೊಳ್ಳಲಿದ್ದಾರೆ. ಅಲ್ಲಿನ ಸಂಪೂರ್ಣ ದೃಶ್ಯಾವಳಿಗಳನ್ನು ಸೆರೆಹಿಡಿಯುವಂತಹ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ. ಮೊಬೈಲ್ ಕಮಾಂಡ್ ಸೆಂಟರ್‌ನಲ್ಲಿ ದಾಖಲಾಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮೆರಾಗಳಿಂದ ಕಣ್ಗಾವಲು ಮಾಡಲಾಗುವುದು’ ಎಂದು ವಿವರಿಸಿದರು.

‘ದಸರೆಯ ಪ್ರಮುಖ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಅಂಕಣಗಳನ್ನು ನಿರ್ಮಿಸಲಾಗುವುದು. ಅದರ ಮೇಲೆ ಪೊಲೀಸರನ್ನು ಮೆಗಾಫೋನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಅಪರಾಧಗಳನ್ನು ತಡೆಗಟ್ಟಲು ಅಕ್ಕಪಕ್ಕದ ಜಿಲ್ಲೆ ಮತ್ತು ರಾಜ್ಯಗಳಿಂದ ನುರಿತ ಅಪರಾಧ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ’ ಎಂದು ತಿಳಿಸಿದರು.

‘ನಗರದ ಬಾಡಿಗೆ ನೀಡುವ ವಸತಿ ಗೃಹಗಳಲ್ಲಿಯೂ ಅನಿರೀಕ್ಷಿತ ತಪಾಸಣೆ ನಡೆಸಿ ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ದಿನದ 24 ಗಂಟೆಯೂ ನುರಿತ ಅಪರಾಧ ವಿಭಾಗದ ಸಿಬ್ಬಂದಿಗಳು ಗಸ್ತಿನಲ್ಲಿರಲಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗುತ್ತದೆ’ ಎಂದು ಹೇಳಿದರು.

‘ದಸರಾ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ತಕ್ಷಣ ಪೊಲೀಸ್ ವ್ಯವಸ್ಥೆ ಸ್ಥಳಕ್ಕೆ ತೆರಳಲು ಉತ್ತಮವಾದ ಗಸ್ತು ವಾಹನದ ವ್ಯವಸ್ಥೆ ಕಲ್ಪಿಸಲಾಗಿದೆ. ವಿವಿದೆಡೆ ಕಾರ್ಯಕ್ರಮಗಳು ನಡೆಯುವ ಸ್ಥಳಗಳಿಗೆ ಮುಂಚಿತವಾಗಿಯೇ 12 ಅಗ್ನಿಶಾಮಕ ದಳ ಮತ್ತು 8 ಆಂಬುಲೆನ್ಸ್‌ಗಳು ಕಾರ್ಯಕ್ರಮ ಆರಂಭಗೊಳ್ಳುವುದಕ್ಕಿಂತ ಮುಂಚಿತವಾಗಿಯೇ ನಿಯೋಜಿಸಲಾಗುವುದು’ ಎಂದರು.

‘ಈಗಾಗಲೇ ವಿವಿಧೆಡೆ ಸಾರ್ವಜನಿಕರು ಅಳವಡಿಸಿಕೊಂಡಿರುವ 13,140 ಸಿಸಿ ಟಿವಿ ಕ್ಯಾಮೆರಾಗಳಿವೆ. ಹೆಚ್ಚುವರಿಯಾಗಿ ಮೈಸೂರು ಅರಮನೆ, ಬನ್ನಿಮಂಟಪದ ಮೈದಾನ ಮೆರವಣಿಗೆ ಮಾರ್ಗ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ 110 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇವುಗಳಲ್ಲಿ ದಿನದ 24 ಗಂಟೆಯೂ ಎಲ್ಲಾ ವಿವರಗಳು ಶೇಖರಿಸಲ್ಪಡುವಂತೆ ವ್ಯವಸ್ಥೆ ಮಾಡಲಾಗಿದೆ’ ಎಂದರು.

‘ನಗರದಲ್ಲಿ ಈಗಾಗಲೇ ರೌಡಿಗಳ ಪರೇಡ್ ನಡೆಸಿ ಅಹಿತಕರ ಘಟನೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ಗರುಡಾ ಫೋರ್ಸ್ ಮತ್ತು ಎಎನ್ಎಫ್ ತಂಡಗಳನ್ನೂ ಬಳಸಿಕೊಳ್ಳಲಾಗುವುದು’ ಎಂದು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *