ನವದೆಹಲಿ: ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕದಲ್ಲಿ ನಡೆದ ಹನಿ ಟ್ರ್ಯಾಪಿಂಗ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ.
ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿದ್ದೂ, ಹಾಗೆಯೇ ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ವಿಚಾರಣೆ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದಲ್ಲಿ ನಡೆದ ಹನಿ-ಟ್ರ್ಯಾಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಸಿಲುಕಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದೆದುರು ತರಲಾಗಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.
ಇದನ್ನೂ ಓದಿ: ವಿದ್ಯುತ್ ಗ್ರಾಹಕರ ಸುಲಿಗೆ! ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು!! – ಸಿಪಿಐ(ಎಂ)
ಕರ್ನಾಟಕ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ ನಂತರ ವಿವಾದ ಭುಗಿಲೆದ್ದಿತ್ತು. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ 48 ನಾಯಕರು ಇದೇ ರೀತಿಯ ಟ್ರ್ಯಾಪ್ಗೆ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದರು.
ಈ ಬಲೆಯನ್ನು ರಾಜಕೀಯ ಪ್ರೇರಿತ ವ್ಯಕ್ತಿಗಳು ವೈಯಕ್ತಿಕ ಮತ್ತು ರಾಜಕೀಯ ಲಾಭಕ್ಕಾಗಿ ತಮ್ಮ ಗುರಿಗಳನ್ನು ಸಾಧಿಸಿಕೊಳ್ಳಲು ಹೆಣೆದಿದ್ದಾರೆ ಎಂಬುದು ತಮ್ಮ ಅಭಿಪ್ರಾಯ ಎಂದು ರಾಜಣ್ಣ ಹೇಳಿದ್ದರು.
ವಿರೋಧ ಪಕ್ಷದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ನಡೆಸಲಾಗುತ್ತಿದೆ ಎನ್ನಲಾದ ಹನಿ-ಟ್ರ್ಯಾಪ್ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು, ಸಿಬಿಐ ಅಥವಾ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ತನಿಖೆ ವಹಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಸದನದಲ್ಲಿಯೇ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ವೇಳೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿರುವುದು ದೃಢಪಟ್ಟರೆ ಅವರನ್ನು ಶಿಕ್ಷಿಸದೆ ಬಿಡುವುದಿಲ್ಲ. ಈ ವಿಷಯದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದರು.
ಇದನ್ನೂ ನೋಡಿ: ವರ್ತಮಾನದಲ್ಲಿ ಸುಳ್ಳಿನ ಇತಿಹಾಸ ಸೃಷ್ಟಿಸುತ್ತಿರುವ ಆರೆಸ್ಸೆಸ್…