ಬೆಂಗಳೂರು: ಬಗರ್ ಹುಕುಂ ಬಡವರ ಕೆಲಸ. ಸಾವಿರಾರು ಬಡವರು ಅರ್ಜಿ ಹಾಕಿ ಕಾದು ಕುಳಿತಿದ್ದಾರೆ. ಈ ವಿಚಾರದಲ್ಲಿ ಹಲವು ತಹಶೀಲ್ದಾರರ ಶ್ರಮ ಶ್ಲಾಘನೀಯ. ಆದರೂ, ನಿರೀಕ್ಷೆಯ ಮಟ್ಟ ತಲುಪಿಲ್ಲ ಎಂದು ನೆನ್ನೆ ಶುಕ್ರವಾರದಂದು ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದರು.
ಕೆಲ ತಹಸೀಲ್ದಾರರು ಬಗರ್ ಹುಕುಂ ಅರ್ಜಿಗಳ ವಿಲೇವಾರಿಯಲ್ಲಿ ಅಸಡ್ಡೆ ತೋರುತ್ತಿದ್ದು, ಶೀಘ್ರ ಎಚ್ಚೆತ್ತುಕೊಂಡು ಮುಂದಿನ 6 ತಿಂಗಳ ಒಳಗಾಗಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಾಕೀತು ಮಾಡಿದ್ದಾರೆ.
ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಕೃಷ್ಣಬೈರೇಗೌಡ ಅವರು, ಬಗರ್ ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂಬ ಕಾರಣದಿಂದಲೇ ನಾನು ಕಳೆದ ಎರಡು ವರ್ಷಗಳಿಂದ ವ್ಯಯಕ್ತಿಕವಾಗಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ.
ಇದನ್ನೂ ಓದಿ: ಪೌರ ಕಾರ್ಮಿಕರೊಂದಿಗೆ ಸಾಮೂಹಿಕ ಇಫ್ತಾರ್, ಸೌಹಾರ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಖುಷಿ ಪಟ್ಟ ಸ್ವಚ್ಛತಾ ಕೆಲಸಗಾರರು
ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಪ್ರತಿ ತಿಂಗಳೂ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಭೆ ನಡೆಸಿ ಪ್ರಗತಿ ಪರಿಶೀಲಿಸುತ್ತಿದ್ದೇನೆ. ಪರಿಣಾಮ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳು ನಿರೀಕ್ಷೆಗೂ ಮೀರಿ ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಕೆಲವು ಅಧಿಕಾರಿಗಳು ಬಡವರ ಕೆಲಸದ ಬಗ್ಗೆ ಅಸಡ್ಡೆ ಧೋರಣೆ ತೋರುತ್ತಿದ್ದು, ಅವರೂ ಸಹ ಶೀಘ್ರ ಎಚ್ಚೆತ್ತುಕೊಳ್ಳಬೇಕಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದರು.
ರಾಜ್ಯದ ಬಹುತೇಕ ಎಲ್ಲಾ ತಾಲೂಕುಗಳಲ್ಲೂ ಬಗರ್ ಹುಕುಂ ಕಮಿಟಿ ರಚಿಸಲಾಗಿದೆ. ಈ ಹಂತದಲ್ಲಿ ಅರ್ಜಿಯೊಂದು ಗ್ರಾಮ ಆಡಳಿತ ಅಧಿಕಾರಿಯಿಂದ ತಹಶೀಲ್ದಾರರ ಎದುರು ಬಂದಿದೆ ಎಂದರೆ ಆ ಅರ್ಜಿ ಬಹುತೇಕ ಅರ್ಹ ಅರ್ಜಿಯೇ ಆಗಿರುತ್ತದೆ. ಹೀಗಾಗಿ ಅಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರು ಮಾಡಿ, ಬಡವರು ನಿಮ್ಮನ್ನು ನೆನೆಸಿಕೊಳ್ಳುತ್ತಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ಬಗರ್ ಹುಕುಂ ವಿಚಾರದಲ್ಲಿ ಕೆಲವು ಅಧಿಕಾರಿಗಳು ನಿಜಕ್ಕೂ ಆಮೆ ಗತಿಯಲ್ಲಿ ಕೆಲಸ ಮಾಡುತ್ತಿದ್ದೀರಿ. ಇದು ಸರಿಯಲ್ಲ. ಅಧಿಕಾರಿಗಳು ಮಾಡುವ ತಪ್ಪಿನಿಂದಾಗಿ ಸದನದಲ್ಲಿ ನಾವು ಉತ್ತರ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ, ಅಧಿವೇಶನ ನಡೆಯುವ ಸಂದರ್ಭದಲ್ಲೇ ರೈತರು ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟಕ್ಕೆ ಮುಂದಾಗುತ್ತಾರೆ. ನಿಮ್ಮಿಂದಾಗಿ ನಾವು ರೈತರ ಎದುರು ತಲೆ ತಗ್ಗಿಸಿ ನಿಲ್ಲಬೇಕಾದಂತಹ ಸ್ಥಿತಿ ಎದುರಾಗಿದೆ. ಹೀಗಾಗಿ ಈಗಲಾದರೂ ಬಗರ್ ಹುಕುಂ ಕೆಲಸಗಳನ್ನು ಚುರುಕಾಗಿಸಿ ಮುಂದಿನ ಆರು ತಿಂಗಳಲ್ಲಿ ಎಲ್ಲಾ ಅರ್ಹರಿಗೂ ಜಮೀನು ಮಂಜೂರು ಮಾಡಿ ಎಂದು ಸಮಯದ ಗಡುವು ನೀಡಿದರು.
ರಾಜ್ಯಾದ್ಯಂತ ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದ್ದರೂ ಈ ಕೆಲಸ ನಿರೀಕ್ಷಿತ ವೇಗ ಪಡೆದಿಲ್ಲ ಎಂದು ತಹಶೀಲ್ದಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ದಶಕಗಳ ಹಿಂದೆಯೇ ಸರ್ಕಾರ ಬಡ ರೈತರಿಗೆ ಜಮೀನು ಮಂಜೂರು ಮಾಡಿದೆ. ಆದರೆ, ನಾನಾ ಕಾರಣಗಳಿಂದ ಜಮೀನು ದುರಸ್ಥಿಯಾಗದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಅದರ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿಯೇ ಪೋಡಿ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿತ್ತು.
ನಿಯಮದಂತೆ ತಹಶೀಲ್ದಾರರು ನಿಗದಿತ ಜಮೀನಿಗೆ ಸಂಬಂಧಿಸಿದ ನಮೂನೆ 1-5 ದಾಖಲೆಯನ್ನು ಸಿದ್ದಪಡಿಸಿ ಮುಂದಿನ ಹಂತಕ್ಕೆ ನಮೂನೆ 6-10 ಕೆಲಸಕ್ಕಾಗಿ ಭೂ ಮಾಪನ ಇಲಾಖೆಗೆ ಕಡತ ಕಳುಹಿಸಬೇಕು. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈ ಸಂಖ್ಯೆ ಸಮಾಧಾನಕರವಾಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು.
ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಡಿ ದುರಸ್ಥಿ ಕೆಲಸ ಚುರುಕುಗೊಂಡಿರುವ ಬಗ್ಗೆ ಅಧಿಕಾರಿಗಳ ಶ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಮುಂದಿನ ತಿಂಗಳು ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸುತ್ತಿದ್ದು, ಅಷ್ಟರಲ್ಲಿ ಕನಿಷ್ಟ 10,000 ಪ್ರಕರಣಗಳು ದುರಸ್ಥಿಗೊಂಡು ರೈತರಿಗೆ ದಾಖಲೆ ನೀಡಬೇಕು” ಎಂದು ತಹಶೀಲ್ದಾರರಿಗೆ ಗುರಿ ನಿಗದಿಪಡಿಸಿದರು.
ರಾಜ್ಯದ ಎಲ್ಲಾ ತಹಶೀಲ್ದಾರ್ ಕಚೇರಿಗಳಲ್ಲಿರುವ ಭೂ ದಾಖಲೆಗಳನ್ನು ಈಗಾಗಲೇ ಅಭಿಯಾನ ಮಾದರಿಯಲ್ಲಿ ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಆದರೆ, ಈ ಕೆಲಸದಲ್ಲೂ ಅಸಡ್ಡೆ ತೋರಿರುವ ಕೆಲ ತಹಶೀಲ್ದಾರರಿಗೆ ನೊಟೀಸ್ ನೀಡುವ ಬಗ್ಗೆ ಸಚಿವ ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಯಲ್ಲಿ ಎಚ್ಚರಿಕೆ ನೀಡಿದರು.
ಭೂ ದಾಖಲೆಗಳ ಕಳವು ಮತ್ತು ತಿದ್ದುವಂತಹ ಕೃತ್ಯಗಳಿಂದ ಬಡ ರೈತರು ಶೋಷಣೆಗೆ ಒಳಗಾಗುತ್ತಿದ್ದಾರೆ. ಇಂತಹ ಪ್ರಸಂಗಗಳಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಸರ್ಕಾರ ಮುಂದಾಯಿತು. ಮೊದಲು 31 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೊಳಿಸಿ ಇದೀಗ ಎಲ್ಲಾ ತಾಲೂಕುಗಳಲ್ಲೂ ದಾಖಲೆಗಳ ಸ್ಕ್ಯಾನ್ಗೆ ಒತ್ತು ನೀಡಲಾಗಿದೆ.
ದಾಖಲೆಗಳ ಡಿಜಿಟಲೀಕರಣಕ್ಕೆ ಸಹಾಯವಾಗಲಿ ಎಂಬ ಕಾರಣಕ್ಕೆ ರಾಜ್ಯದ ಎಲ್ಲಾ ತಹಶೀಲ್ದಾರ್ ಕಚೇರಿಗಳಿಗೆ ಅಗತ್ಯ ಸ್ಕ್ಯಾನರ್ಗಳ ಜೊತೆಗೆ ತಲಾ ಆರು ಕಂಪ್ಯೂಟರ್ ಗಳನ್ನೂ ನೀಡಲಾಗಿದೆ. ಇದರ ಜೊತೆಗೆ ಆರು ಜನ ಡಾಟಾ ಎಂಟ್ರಿ ಆಪರೇಟರ್ಗಳಿಗೂ ಸರ್ಕಾರವೇ ವೇತನ ನೀಡುತ್ತಿದೆ. ಆದರೆ, ಇಷ್ಟೆಲ್ಲಾ ಸೌಲಭ್ಯ ಒದಗಿಸಿಯೂ ಕೆಲ ತಹಶೀಲ್ದಾರರು ಗುರಿ ಮುಟ್ಟುವಲ್ಲಿ ವಿಫಲವಾಗಿರುವುದು ಬೇಸರದ ಸಂಗತಿ ಎಂದರು.
ಈ ಹಿಂದೆ ಪ್ರತಿಯೊಂದು ತಹಶೀಲ್ದಾರ್ ಕಚೇರಿಗೂ ದಿನಕ್ಕೆ 6,000 ಪುಟಗಳನ್ನು ಸ್ಕ್ಯಾನ್ ಮಾಡುವ ಗುರಿ ನೀಡಲಾಗಿತ್ತು. ಆದರೆ, ಹಲವು ಕಚೇರಿಗಳಲ್ಲಿ ಸರಾಸರಿ 2,000 ಪುಟಗಳನ್ನೂ ಸಹ ಸ್ಕ್ಯಾನ್ ಮಾಡಲಾಗುತ್ತಿಲ್ಲ. ಇದೇ ಸಂದರ್ಭದಲ್ಲಿ ಚಳ್ಳಕೆರೆ, ಮೊಳಕಾಲ್ಮೂರು, ಕೊಪ್ಪ, ಕೊಪ್ಪಳ, ಹೊನ್ನಾವರ ಕಚೇರಿಗಳಲ್ಲಿ 9,000 ಸ್ಕ್ಯಾನ್ ಮಾಡಲಾಗುತ್ತಿದೆ. ಕೆಲವರಿಂದ ನಮ್ಮ ಗುರಿಯನ್ನೂ ಮೀರಿ ಕೆಲಸ ಮಾಡಲಾಗುತ್ತೆ, ಕೆಲವರಿಗೆ ಆಗಲ್ಲ ಎಂದರೆ ಏನರ್ಥ? ಎಂದು ಸಚಿವರು ಆಕ್ರೋಶ ಹೊರಹಾಕಿದರು.
ರಾಜ್ಯಾದ್ಯಂತ ತಹಶೀಲ್ದಾರ್ ಕಚೇರಿಗಳ ರೆಕಾರ್ಡ್ ರೂಮ್ಗಳಲ್ಲಿ 3.6 ಕೋಟಿ ಕಡತಗಳು ಇವೆ. ಈ ಪೈಕಿ ಈಗಾಗಲೇ 26.42 ಲಕ್ಷ ಕಡತಗಳನ್ನು ಸ್ಕ್ಯಾನ್ ಮಾಡಿ ದಾಖಲೆಗಳ ಅಸಲಿಯತ್ತನ್ನು ಪರಿಶೀಲಿಸಿ ಸಾರ್ವಜನಿಕ ಡೊಮೈನ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಉಳಿದ ಕಡತಗಳನ್ನೂ ಈ ವರ್ಷಾಂತ್ಯದೊಳಗೆ ಅಭಿಯಾನ ಮಾದರಿ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಬೇಕು ಎಂದು ಎಚ್ಚರಿಸಿದರು.
ಇದನ್ನೂ ನೋಡಿ: ಒಳಮೀಸಲಾತಿ: ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ Janashakthi Media