ಮಧ್ಯಾಹ್ನದ ಬಿಸಿಯೂಟ ಯೋಜನೆ: ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಣೆ – ಮಧು ಬಂಗಾರಪ್ಪ

ಶಿವಮೊಗ್ಗ: ‘ಅಪೌಷ್ಟಿಕತೆ ಹೋಗಲಾಡಿಸಿ ಮಕ್ಕಳ ಕಲಿಕೆಗೆ ನೆರವಾಗಲು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಹಾಗೂ ಪದವಿಪೂರ್ವ (ಪಿಯುಸಿ) ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು’ ಎಂದು ನಗರದಲ್ಲಿ ಡಿಸೆಂಬರ್‌ 21ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

‘ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ಓದುವ ಹಾಗೂ ಪಿಯುಸಿ ಓದುವ ಎಲ್ಲಾ ಮಕ್ಕಳಿಗೂ ನೆರವಾಗಲಿದೆ. ಇದರಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಹೆಚ್ಚುವರಿಯಾಗಿ ,₹200 ಕೋಟಿ ವೆಚ್ಚವಾಗಲಿದೆ’ ಎಂದರು.

ಹೊಸದಾಗಿ ಆರಂಭವಾಗುವ ಶಾಲೆಗಳು ಸೇರಿದಂತೆ ರಾಜ್ಯದ ಎಲ್ಲ ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಸಂಗೀತ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಸ್ಕೂಲ್ ಬ್ಯಾಂಡ್ ಕಡ್ಡಾಯವಾಗಿ ಆರಂಭಿಸಲಾಗುವುದು ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರಕ್ಕೆ ಕೋಮುವಾದ, ದ್ವೇಷಭಾಷಣದ ವಿರುದ್ದ ನೈಜ ಕಾಳಜಿ ಇಲ್ಲ : ಮುನೀರ್ ಕಾಟಿಪಳ್ಳ

‘ದ್ವೇಷ ಭಾಷಣ ವಿರೋಧಿ ಕಾಯ್ದೆ ಜಾರಿಗೊಳಿಸುವ‌ ಮೂಲಕ ದೇಶದಲ್ಲಿಯೇ ಮಾದರಿ ನಡೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದೆ. ಆ ಮಸೂದೆಗೆ ಸದನದಲ್ಲಿ ಕರಾವಳಿ ಭಾಗದ ಬಿಜೆಪಿ ಶಾಸಕರು ವಿರೋಧಿಸಿದ್ದಾರೆ. ದ್ವೇಷ ಭಾಷಣಕ್ಕೆ ನಿಯಂತ್ರಣ ಹೇರಿಧ್ದರಿಂದ ತಮ್ಮ ಬಂಡವಾಳ ಬರಿದಾಗುವ ಆತಂಕ ಅವರದ್ದು’ ಎಂದು ಛೇಡಿಸಿದ ಮಧು ಬಂಗಾರಪ್ಪ, ‘ಇದೇ ಕಾನೂನನ್ನು ರಾಷ್ಟ್ರಮಟ್ಟದಲ್ಲಿ ಜಾರಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಕೂಡ ಮನಸ್ಸು ಮಾಡಲಿ’ ಎಂದು ಸಲಹೆ ನೀಡಿದರು.

ಹಾಲಿ ಸೇವೆಯಲ್ಲಿರುವ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿಧಾನಮಂಡಲದ ಅಧಿವೇಶನದಲ್ಲಿ ನಿರ್ಧರಿಸಿ ಆ ಬಗ್ಗೆ ಸರ್ಕಾರಿ ಆದೇಶ ಕೂಡ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಹೊಸದಾಗಿ ಆರಂಭಿಸಲಾಗುತ್ತಿರುವ 900 ಕೆಪಿಎಸ್ ಶಾಲೆಗಳಿಗೆ ಜನವರಿ ಅಂತ್ಯದ ವೇಳೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಪುನರುಚ್ಚರಿಸಿದ ಸಚಿವರು, ಹೊಸದಾಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಹಾಗೂ ಶಿಕ್ಷಕರ ನೇಮಕಾತಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಹಣದ ಸಮಸ್ಯೆ ಇಲ್ಲ ಎಂದರು.

ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆಗೆ ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *