ವಿದ್ಯಾರ್ಥಿಗಳ ಪ್ರತಿಭಟನೆ ಪ್ರಕರಣಗಳ ಎಫ್‌ಐಆರ್‌ ರದ್ದು: ಹೊಸ ಪ್ರಕರಣ ದಾಖಲಿಸದಂತೆ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ನೀಟ್‌ ಪರೀಕ್ಷೆ ವಿವಾದಕ್ಕೆ ಸಂಬಂಧಿಸಿ ಜುಲೈ 20ರಿಂದ 25ರವರೆಗೆ ದೇಶದ ವಿವಿಧೆಡೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಇದೇ ಪ್ರತಿಭಟನೆಗಳಿಗೆ ಸಂಬಂಧಿಸಿ ಮುಂದಿನ ದಿನಗಳಲ್ಲಿ ಯಾವುದೇ ಹೊಸ ಎಫ್‌ಐಆರ್‌ ದಾಖಲಿಸಬಾರದು ಎಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಸಂವಿಧಾನದ ಅನುಚ್ಛೇದ 142ರ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಬಳಸಿಕೊಂಡು ಈ ಆದೇಶ ನೀಡಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ವ್ಯಾಪಕ ಆದೇಶ ನೀಡಲಾಗುತ್ತಿದೆ ಎಂದು ನ್ಯಾಯಪೀಠ ತಿಳಿಸಿದೆ.

ಕೇಂದ್ರ ಸರ್ಕಾರ, ದೆಹಲಿ ಪೊಲೀಸರು ಹಾಗೂ ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಅಸ್ಸಾಂ ಸರ್ಕಾರಗಳು ಸಲ್ಲಿಸಿದ್ದ ಅರ್ಜಿಗಳಲ್ಲಿ ಉಲ್ಲೇಖಿಸಲಾಗಿದ್ದ ಎಫ್‌ಐಆರ್‌ಗಳನ್ನೂ ನ್ಯಾಯಾಲಯ ರದ್ದುಗೊಳಿಸಿದೆ. ಈ ರಾಜ್ಯಗಳ ಅರ್ಜಿಗಳಿಗೆ ಮಾತ್ರ ಸೀಮಿತವಾಗದೆ, ಜುಲೈ 20–25ರ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಎಲ್ಲ ಎಫ್‌ಐಆರ್‌ಗಳಿಗೂ ದೇಶವ್ಯಾಪಿ ಅನ್ವಯವಾಗುವಂತೆ ಆದೇಶ ನೀಡಲಾಗಿದೆ.

ಇದನ್ನೂ ಓದಿ : ನೇಪಾಳದಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 987ಕ್ಕೆ ಏರಿಕೆ, ಸಾವಿರಾರು ಮಂದಿ ನಾಪತ್ತೆ

ಆದರೆ, ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಸಂಪೂರ್ಣ ವಿನಾಯಿತಿ ನೀಡಲಾಗಿಲ್ಲ. ಗಂಭೀರ ಕ್ರಿಮಿನಲ್‌ ಹಿನ್ನೆಲೆ ಹೊಂದಿರುವ 2,873 ಮಂದಿಗೆ ಸಂಬಂಧಿಸಿದ ಒಂದು ಪ್ರಕರಣವನ್ನು ಮುಂದುವರಿಸಲು ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ಅವಕಾಶ ನೀಡಿದೆ.

ವಿದ್ಯಾರ್ಥಿಗಳ ಪ್ರತಿಭಟನೆ ಪ್ರಕರಣಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆಯ ಹಿನ್ನೆಲೆಯಲ್ಲಿ ಈ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರಕರಣಗಳು ಅಡ್ಡಿಯಾಗಬಾರದು ಎಂಬ ನಿಲುವನ್ನು ಕೇಂದ್ರ ಸರ್ಕಾರ ನ್ಯಾಯಾಲಯದ ಮುಂದೆ ವ್ಯಕ್ತಪಡಿಸಿತ್ತು.

ಇದೇ ವೇಳೆ, ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆಯುವ ಭರವಸೆ ಹಾಗೂ ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯುವುದಾಗಿ ಸಿಜೆಪಿ ಪರವಾಗಿ ಸೌರವ್‌ ದಾಸ್‌ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನೀಟ್‌ ಪರೀಕ್ಷೆ ವಿವಾದದ ಹಿನ್ನೆಲೆಯಲ್ಲಿ ನಡೆದ ವಿದ್ಯಾರ್ಥಿ ಹೋರಾಟಗಳ ನಂತರ ದಾಖಲಾದ ಪ್ರಕರಣಗಳ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ಈ ತೀರ್ಪು ವಿದ್ಯಾರ್ಥಿ ಪ್ರತಿಭಟನೆಗಳು, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಪ್ರತಿಭಟನಾಕಾರರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ಕುರಿತು ಮಹತ್ವದ ಬೆಳವಣಿಗೆಯಾಗಿದೆ.

ಇದನ್ನೂ ನೋಡಿ : ಸಾಮೂಹಿಕ ಮತ ಕಗ್ಗೊಲೆ ನಡೆಸುತ್ತಿರುವ SIR ವಿರುದ್ಧ ಚುನಾವಣಾ ಆಯೋಗ ಚಲೋ ನೇರಪ್ರಸಾರ

Donate Janashakthi Media

Leave a Reply

Your email address will not be published. Required fields are marked *