ಬೆಂಗಳೂರು: ಶನಿವಾರ ಮಧ್ಯಾಹ್ನದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಪ್ರದಕ್ಷಿಣೆ ನಡೆಸುತ್ತಿದ್ದಾರೆ. ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ವೃತ್ತ ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ನೀರು ನಿಲ್ಲುತ್ತಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು. ಬೆಂಗಳೂರು
ಇದನ್ನೂ ಓದಿ : ಬೆಂಗಳೂರು | ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಗುಂಡಿ ಮುಕ್ತ ರಸ್ತೆಗಳನ್ನಾಗಿಸಲು – ಮುಖ್ಯಮಂತ್ರಿ ನಿರ್ದೇಶನ
ರಸ್ತೆಯಲ್ಲಿ ನೀರು ನಿಲ್ಲದಂತೆ ನೀರು ಸರಾಗವಾಗಿ ಹರಿದು ಚರಂಡಿ ಸೇರುವ ಹಾಗೆ ವ್ಯವಸ್ಥೆ ಮಾಡಿ ಎಂದು ಮುಖ್ಯಮಂತ್ರಿಯವರು ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಡ್ಸಂರ್ ಮ್ಯಾನರ್ ವೃತ್ತದಲ್ಲಿನ ರಸ್ತೆ ಕಾರ್ಯ, ಮತ್ತೊಂದು ಬದಿ ರಾತ್ರಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ?. ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.
ಹೆಣ್ಣೂರು ಫ್ಲೈಓವರ್ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿದ್ದು, ಅದರೊಳಗೆ ತಲೆ ಎತ್ತರಕ್ಕೆ ಗಿಡಗಳು ಬೆಳೆದು ನಿಂತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು. ಇದು ತುಂಬಾ ಹಳೆ ತ್ಯಾಜ್ಯ. ಇಷ್ಟು ವರ್ಷ ಎಷ್ಟು ಜನ ಅಧಿಕಾರಿಗಳು ಇಲ್ಲಿ ಓಡಾಡಿರ್ತೀರಿ. ಯಾರಿಗೂ ಕಣ್ಣಿಗೇ ಬಿದ್ದಿಲ್ವಾ ಎಂದು ಪ್ರಶ್ನಿಸಿ 24 ಗಂಟೆಗಳ ಒಳಗೆ ತ್ಯಾಜ್ಯ ತೆರವುಗೊಳಿಸುವಂತೆ ಖಡಕ್ ಸೂಚನೆ ನೀಡಿದರು.
ವಾರ್ಡ್ ನಂಬರ್ 23 ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಒಳಗೆ ಇರಬೇಕಾದ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಹೊರಗೆ ಬಂದು ರಾಶಿ ಬಿದ್ದಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟ್ಟಾದರು. ಸಂಗ್ರಹಣಾ ಕೇಂದ್ರದ ಒಳಗೆ ಸಾಕಷ್ಟು ಜಾಗ ಖಾಲಿ ಇರುವುದನ್ನು ಗಮನಿಸಿದ ಅವರು, ಬಿ ಸ್ಮೈಲ್ ನ ತಾಂತ್ರಿಕ ನಿರ್ದೇಶಕ ಪ್ರಹ್ಲಾದ್ ಅವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು.
ಬಳಿಕ ಅಲ್ಲಿಂದ ಕೆಲವೇ ದೂರದಲ್ಲಿ ರಸ್ತೆಯಲ್ಲಿ ಜೆಲ್ಲಿ ಕಲ್ಲುಗಳು ಬಿದ್ದಿರುವುದನ್ನು ಗಮನಿಸಿ ಇದಕ್ಕೆ ಕಾರಣರಾದ ಮುಖ್ಯ ಎಂಜಿನಿಯರ್ ರಾಘವೇಂದ್ರ ಪ್ರಸಾದ್ ಅವರಿಗೂ ನೋಟಿಸ್ ನೀಡಿ ಎಂದು ಸೂಚಿಸಿದರು.
ಇದನ್ನೂ ನೋಡಿ : ಧರ್ಮಸ್ಥಳ | ನ್ಯಾಯಕ್ಕಾಗಿ ಹೋರಾಡುವುದು ಷಡ್ಯಂತ್ರವೆ? ಗಿರೀಶ್ ಮಟ್ಟಣ್ಣನವರ್ Janashakthi Media
