ನವದೆಹಲಿ: ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು ಆಗಸ್ಟ್ 1 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅರೆಬೆತ್ತಲೆ ಪ್ರತಿಭಟನೆ ಮಾಡಿ ಒಳಮೀಸಲಾತಿಗೆ ಆಗ್ರಹಿಸುತ್ತೇವೆ. ಆಗಸ್ಟ್ 15 ರೊಳಗೆ ಜಾರಿಗೊಳಿಸದಿದ್ದರೆ ರಾಜ್ಯ ಬಂದ್ ಮಾಡಲಾಗುವುದು ಎಂದು ಕೇಂದ್ರ ಮಾಜಿ ಸಚಿವ ಎ. ನಾರಾಯಣಸ್ವಾಮಿ ಜುಲೈ 15ರಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೈಜ್ಞಾನಿಕ ದತ್ತಾಂಶವಿದ್ದರೆ ರಾಜ್ಯಗಳು ಒಳಮೀಸಲಾತಿ ಜಾರಿಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿ ಆ.1 ಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆ ಸರ್ಕಾರವನ್ನು ಎಚ್ಚರಿಸಲು ಪ್ರತಿಭಟನೆ ನಡೆಸಲಾಗುತ್ತದೆ.
ದಕ್ಷಿಣ ಭಾರತದಲ್ಲಿ ಮಾದಿಗರು ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ತೆಲಂಗಾಣದಲ್ಲಿ ಒಳ ಮೀಸಲಾತಿ ಜಾರಿಗೊಳಿಸಿ ಏಳು ತಿಂಗಳಾಗಿದೆ. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀಸಲು ಕುರಿತು ಯಾವುದೇ ಸ್ಪಷ್ಟತೆ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೋಲೀಸರು ದಾಳಿ; 24 ಮಂದಿ ಬಂಧನ
ಉತ್ತರ ಕರ್ನಾಟಕದಲ್ಲಿ ಸಂಸದ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಒಳ ಮೀಸಲಾತಿಗೆ ಒತ್ತಾಯಿಸಿ ಅಸಹಕಾರ ಚಳುವಳಿ ಮಾಡಲು ನಿರ್ಧರಿಸಿದ್ದಾರೆ. ಉಳಿದ ಭಾಗಗಳಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುವುದು. ಆದರೆ ಆಡಳಿತ ಪಕ್ಷದಲ್ಲಿರುವ ಮಾದಿಗ ಸಮುದಾಯದ ಸಚಿವರು, ಶಾಸಕರುಗಳು ಜನರಲ್ಲಿ ಗೊಂದಲ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾಟಾಚಾರದ ಸಮೀಕ್ಷೆ, ಸಾರ್ವಜನಿಕರ ಆರೋಪ
ಸರ್ಕಾರ ಹಲವಾರು ಬಾರಿ ಒಳ ಮೀಸಲಾತಿ ಸಮೀಕ್ಷೆಯನ್ನು ಮುಂದೂಡಿದರೂ ನಿರೀಕ್ಷಿತ ಪ್ರಮಾಣದಲ್ಲಿ ಸಮೀಕ್ಷೆ ನಡೆದಿರಲಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶೇ.95 ಕ್ಕಿಂತ ಹೆಚ್ಚು ಸಮೀಕ್ಷೆಯಾಗಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50 ರಷ್ಟು ಸಮೀಕ್ಷೆ ದಾಟಿರಲಿಲ್ಲ.
ಈ ಹಿನ್ನೆಲೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಪ್ರಮಾಣ ಹೆಚ್ಚಳವಾಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದರು.
ಆದರೆ, ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮೀಕ್ಷೆ ನಡೆಸಿದ್ದ ಮನೆಗಳ ಬಾಗಿಲ ಮೇಲೆ ಸ್ಟಿಕ್ಕರ್ ಅಂಟಿಸುವ ಬದಲು ಶಾಲೆ, ಕಾಂಪೌಂಡ್ ಗೋಡೆ, ಖಾಲಿ ಮನೆಗಳ ಮೇಲೆ ಸ್ಟಿಕ್ಕರ್ ಅಂಟಿಸಿದ್ದರು. ಸಿಬ್ಬಂದಿಗಳ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಇದನ್ನೂ ನೋಡಿ: ಬೆಂಗಳೂರು | ಜುಲೈ13ರಂದು ಸಾಮ್ರಾಟ್ ಅಶೋಕ ನಾಟಕ ಪ್ರದರ್ಶನJanashakthi Media
