ನವದೆಹಲಿ: ಅನಿರೀಕ್ಷಿತ ಮತ್ತು ಅಪಾಯಕಾರಿ ಬದಲಾವಣೆಗಳು ಭಾರತದ ಹವಾಮಾನದಲ್ಲಿ ಕಂಡುಬರುತ್ತಿವೆ ಎಂದು ವರದಿಯಾಗಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ದೇಶದ ಸುಮಾರು 17 ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿ ನೀಡಿದೆ.
ರಾಜಧಾನಿ ದೆಹಲಿ ಮತ್ತು ಎನ್ಸಿಆರ್ ವ್ಯಾಪ್ತಿಯಲ್ಲಿ ಹವಾಮಾನ ಸಂಪೂರ್ಣವಾಗಿ ಬದಲಾಗಿದೆ. ಮಾರ್ಚ್ 22 ರಂದು ದೆಹಲಿಯ ಲಕ್ಷ್ಮಿ ನಗರ, ಐಟಿಒ, ಇಂಡಿಯಾ ಗೇಟ್ ಮತ್ತು ಮಯೂರ್ ವಿಹಾರ್ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ತಾಪಮಾನ ಕುಸಿಯುವುದರಿಂದ ಜನರಿಗೆ ಬಿಸಿಲಿನಿಂದ ತಾತ್ಕಾಲಿಕ ಪರಿಹಾರ ಸಿಗಲಿದೆ.
ಇದನ್ನೂ ಓದಿ: ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಸರ್ಕಾರ ಬದ್ಧ: ಪ್ರಿಯಾಂಕ್ ಖರ್ಗೆ
ಉತ್ತರ ಪ್ರದೇಶದ ಪೂರ್ವ ಭಾಗಗಳಲ್ಲಿ ಪರಿಸ್ಥಿತಿ ತೀವ್ರವಾಗಿರಲಿದೆ. ಗೋರಖ್ಪುರ, ಅಜಮ್ಗಢ, ಬಲ್ಲಿಯಾ ಮತ್ತು ಸಿದ್ಧಾರ್ಥನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬಿಹಾರದ ಪಾಟ್ನಾ, ಮುಜಫರ್ಪುರ ಮತ್ತು ಭಾಗಲ್ಪುರ ಜಿಲ್ಲೆಗಳಲ್ಲಿ ಮಿಂಚಿನ ಸಹಿತ ಮಳೆಯಾಗುವ ಸಾಧ್ಯತೆ ಇದ್ದು ಜನರು ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಕಳೆದ 72 ಗಂಟೆಗಳಿಂದ ಹವಾಮಾನ ಏರುಪೇರಾಗಿದೆ. ಗೋಧಿ ಬೆಳೆ ಕಟಾವಿಗೆ ಸಿದ್ಧವಾಗಿರುವ ಈ ಸಮಯದಲ್ಲಿ ಆಲಿಕಲ್ಲು ಮಳೆ ಬೀಳುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಮಂಜು ಕವಿದ ವಾತಾವರಣದಿಂದಾಗಿ ರಸ್ತೆ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ರಾಜಸ್ಥಾನದ ಜೈಪುರ ಮತ್ತು ಜೈಸಲ್ಮೇರ್ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಲ್ಲಿಯೂ ಹವಾಮಾನ ಸ್ಥಿರವಾಗಿಲ್ಲ. ಕೆಲವು ಕಡೆಗಳಲ್ಲಿ ಬೇಸಿಗೆ ದಗೆ ಮುಂದುವರೆದಿದ್ದರೆ, ಇನ್ನು ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಮಿಶ್ರ ಹವಾಮಾನವು ಜನರಲ್ಲಿ ಅನಾರೋಗ್ಯ ಉಂಟುಮಾಡುವ ಸಾಧ್ಯತೆ ಇದ್ದು, ಸಾರ್ವಜನಿಕರು ಜಾಗರೂಕರಾಗಿರಬೇಂಕೆಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಇದನ್ನೂ ನೋಡಿ: ಸೈಬರ್ ಹರಾಶ್ಮೆಂಟ್ ಕೂಡಾ ಲೈಂಗಿಕ ದೌರ್ಜನ್ಯ – ಡಾ. ನಂದಿನಿ ಬಿ.ಎನ್ Janashakthi Media
