ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ | ರಾಷ್ಟ್ರಪತಿಗೆ ವರದಿ ಸಲ್ಲಿಸಿದ ದೆಹಲಿ ಮಹಿಳಾ ಆಯೋಗ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರು ತುರ್ತಾಗಿ ರಾಜ್ಯಕ್ಕೆ ಭೇಟಿ ನೀಡಬೇಕು ಎಂದ ವರದಿ ಮಣಿಪುರ

ನವದೆಹಲಿ: ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತುರ್ತಾಗಿ ಹೇರಬೇಕು ಮತ್ತು ರಾಜ್ಯದಲ್ಲಿನ ಘರ್ಷಣೆಗಳ ತನಿಖೆಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಎಸ್‌ಐಟಿಯನ್ನು ಸ್ಥಾಪಿಸಬೇಕು ಎಂದು ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲ್ಯು)ವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಲಾದ ಮಧ್ಯಂತರ ವರದಿಯ ಶಿಫಾರಸುಗಳಲ್ಲಿ ಆಗ್ರಹಿಸಿದೆ. ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಕಳೆದ ವಾರ ಮಣಿಪುರದಲ್ಲಿ ಮೇ ತಿಂಗಳಿನಿಂದ ರಾಜ್ಯದಾದ್ಯಂತ ಭುಗಿಲೆದ್ದ ಜನಾಂಗೀಯ ಹಿಂಸಾಚಾರದ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದರು.

ವರದಿಯಲ್ಲಿ, “ಎರಡೂ ಸಮುದಾಯಗಳ ನಡುವಿನ ಹಿಂಸಾಚಾರ ಮತ್ತು ಧ್ರುವೀಕರಣದ ಪ್ರಮಾಣವನ್ನು ಗಮನಿಸಿದರೆ, ಭಾರತೀಯ ಸಂವಿಧಾನದ 356 ನೇ ವಿಧಿಯ ಪ್ರಕಾರ ರಾಷ್ಟ್ರಪತಿ ಆಳ್ವಿಕೆಯನ್ನು ರಾಜ್ಯದಲ್ಲಿ ತುರ್ತಾಗಿ ಹೇರಬೇಕು. ಎರಡೂ ಸಮುದಾಯಗಳು ನಂಬಬಹುದಾದ ತಟಸ್ಥ ವ್ಯಕ್ತಿಗಳಿಂದ ಆಡಳಿತವನ್ನು ನಡೆಸಬೇಕು” ಎಂದು ಹೇಳಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ | ಯುವತಿಯರ ಬೆತ್ತಲೆ ಮೆರವಣಿಗೆ; ಸಾಮೂಹಿಕ ಅತ್ಯಾಚಾರ

“ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಜನಾಂಗೀಯ ಘರ್ಷಣೆಗಳು ಮತ್ತು ಸರ್ಕಾರದ ಪ್ರತಿಕ್ರಿಯೆಯನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್ ಮಾನಿಟರ್ಡ್ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಬೇಕು” ಎಂದು ಮಧ್ಯಂತರ ಶಿಫಾರಸುಗಳ ಭಾಗವಾಗಿ ಡಿಸಿಡಬ್ಲ್ಯು ಹೇಳಿದೆ. ಅಷ್ಟೆ ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರು ತುರ್ತಾಗಿ ರಾಜ್ಯಕ್ಕೆ ಭೇಟಿ ನೀಡಬೇಕು ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಿ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3 ರಂದು ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದಾಗ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರ ಪ್ರಾರಂಭವಾದಾಗಿನಿಂದ ಕನಿಷ್ಠ 150 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.

ವಿಡಿಯೊ ನೋಡಿ: ಬೇಟಿ ಬಚಾವೋ ಅಂದ್ರೆ ಬೆತ್ತಲೆ ಮಾಡೋದಾ ಪ್ರಧಾನಿಗಳೆ? ಕೇಂದ್ರದ ವಿರುದ್ದ ಕೆರಳಿದ ಪ್ರತಿಭಟನೆಕಾರರು Janashakthi Media

Donate Janashakthi Media

Leave a Reply

Your email address will not be published. Required fields are marked *