ಶಾಸಕರ ಹಕ್ಕುಗಳಿಗೆ ಚ್ಯುತಿ ತರುವ ಘಟನೆಗಳು ನಡೆಯುತ್ತಿವೆ ; ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕರ ಹಕ್ಕುಗಳಿಗೆ ಚ್ಯುತಿ ತರುವ ಘಟನೆಗಳು ನಡೆಯುತ್ತಿವೆ. ವಿರೋಧ ಪಕ್ಷದ ಶಾಸಕರನ್ನು ಅಧಿಕಾರಿಗಳ ಮೂಲಕ ದಮನಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಮುಂದಿನ ಮೂರು ದಿನಗಳ ಒಳಗಾಗಿ ಕ್ರಮಕೈಗೊಳ್ಳದಿದ್ದರೆ ಆಗಸ್ಟ್‌ 14ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತೇವೆ ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇದನ್ನೂ ಓದಿ:ಹೆರಿಗೆಗೆಂದು ಹೋದ ಯುವತಿ ಕೋಮಾಗೆ | ಮಂಗಳೂರು ಎ.ಜೆ. ಆಸ್ಪತ್ರೆ ನಿರ್ಲಕ್ಷ್ಯ ಆರೋಪ

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮ ಪಂಚಾಯಿತಿಯ ಕಚೇರಿ ಉದ್ಘಾಟನೆ ಕಾರ್ಯಕ್ರಮವನ್ನು ಜುಲೈ-31ರಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಿಗದಿಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿ ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಗ್ರೇಡ್‌-2 ಕಾರ್ಯದರ್ಶಿ,ಪಂಚಾಯಿತಿಯ ಪ್ರಭಾರಿ ಅಭಿವೃದ್ಧಿ ಅಧಿಕಾರಿ ಅವರನ್ನು ಅಮಾನತ್ತುಗೊಳಿಸಲಾಗಿದೆ. ಈ ವಿಷಯನ್ನು ಮುಖ್ಯಮಂತ್ರಿ ಜಿಲ್ಲೆಗೆ ಭೇಟಿ ನೀಡಿದಾಗಲೂ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿ ಇದನ್ನು ಹಿಂಪಡೆಯಲು ಸೂಚಿಸಿದರೂ ಈ ಆದೇಶಕ್ಕೆ ಬೆಲೆ ನೀಡಿಲ್ಲ ಎಂದು ಆರೋಪಿಸಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲೂ ಇಂತಹುದ್ದೇ ಘಟನೆ ನಡೆದಿದೆ. ಈ ಬಗ್ಗೆ ವಿವರ ಕೇಳಿದರೆ ಮೇಲಾಧಿಕಾರಿಗಳ ಸೂಚನೆ ಎಂಬ ಹಾರಿಕೆ ಉತ್ತರ ಬರುತ್ತದೆ. ಕ್ಷೇತ್ರದಲ್ಲಿ ಶಾಸಕರಿಗೆ ಕೆಲಸ ಮಾಡಲು ಆಗದ ಪರಿಸ್ಥಿತಿ ಇದೆ.ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರು ಈ ಬಗ್ಗೆ ಗಮನ ಹರಿಸಿ, ತಪ್ಪನ್ನು ಸರಿಪಡಿಸದಿದ್ದಲ್ಲಿ ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು,ವಿಧಾನ ಪರಿಷತ್‌ ಸದಸ್ಯರು ಧರಣಿ ನಡೆಸುತ್ತೇನೆ ಎಂದರು.

ಶಾಸಕರಾದ ಉಮಾನಾಥ್‌ ಕೋಟ್ಯಾನ್‌,ರಾಜೇಶ್‌ ನಾಯ್ಕ್‌,ಡಾ.ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌,ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಇದ್ದರು.

Donate Janashakthi Media

Leave a Reply

Your email address will not be published. Required fields are marked *