ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ (2019-2023) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾಮಗಾರಿಗಳಲ್ಲಿ ಅಕ್ರಮಗಳು ನಡೆದಿದೆ ಎನ್ನಲಾಗಿದ್ದೂ, ಅದರ ಕುರಿತು ತನಿಖೆಗಾಗಿ ರಚಿಸಲಾಗಿದ್ದ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ ದಾಸ್ ನೇತೃತ್ವದ ವಿಚಾರಣಾ ಆಯೋಗದ ಕಾರ್ಯವನ್ನು ದಿಢೀರ್ ಅಂತ್ಯಗೊಳಿಸಲಾಗಿದೆ. ಬಿಬಿಎಂಪಿ
ಆಯೋಗಕ್ಕೆ ನೀಡಲಾಗಿದ್ದ ವಾಹನ ಮತ್ತು ಸಿಬ್ಬಂದಿಯನ್ನು ಸರ್ಕಾರವು ಏಕಾಏಕಿ ವಾಪಸ್ ಪಡೆದ ಹಿನ್ನೆಲೆಯಲ್ಲಿ, ಆಯೋಗದ ಅಧ್ಯಕ್ಷರ ಸೂಚನೆ ಮೇರೆಗೆ ಅದರ ಕಾರ್ಯಚಟುವಟಿಕೆಗಳನ್ನು ಅಧಿಕೃತವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಪ್ರಕಟಿಸಲಾಗಿದೆ. ಬಿಬಿಎಂಪಿ
ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗವು ಆಗಸ್ಟ್ 30ರಂದು ಸರ್ಕಾರಕ್ಕೆ ತನ್ನ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. ಈ ವರದಿಯಲ್ಲಿ, 761 ಕಾಮಗಾರಿಗಳನ್ನು ಪರಿಶೀಲಿಸಿ, ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು.
ಇದನ್ನೂ ಓದಿ: ಸೌಜನ್ಯ ಪ್ರಕರಣ: ದೂರು ನೀಡಲು ಬಂದ ಮಹಿಳೆಗೆ ಎಸ್.ಐ.ಟಿ ಅಧಿಕಾರಿಗಳು ಬೆದರಿಕೆ
ವರದಿ ಸಲ್ಲಿಸಿದ ನಂತರವೂ, ಆಯೋಗಕ್ಕೆ ಸಂಬಂಧಿಸಿದ ಕೆಲವು ಆಡಳಿತಾತ್ಮಕ ಕಾರ್ಯಗಳು ಮತ್ತು ದಾಖಲೆಗಳ ನಿರ್ವಹಣೆಗಾಗಿ ಸೆಪ್ಟೆಂಬರ್ 30ರವರೆಗೆ ತಮ್ಮ ಅಧಿಕಾರಾವಧಿಯನ್ನು ವಿಸ್ತರಿಸುವಂತೆ ಆಯೋಗವು ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಮನವಿಯು ಸರ್ಕಾರದ ಪರಿಶೀಲನೆಯಲ್ಲಿತ್ತು.
ಏಕಾಏಕಿ ಕ್ರಮ
ಅಧಿಕಾರಾವಧಿ ವಿಸ್ತರಣೆಯ ಮನವಿಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರುವ ಮುನ್ನವೇ, ಆಯೋಗದ ಗಮನಕ್ಕೆ ತಾರದೆ, ಆಯೋಗದ ಅಧ್ಯಕ್ಷರಿಗೆ ಒದಗಿಸಲಾಗಿದ್ದ ವಾಹನ ಮತ್ತು ಇತರ ಸಿಬ್ಬಂದಿಯನ್ನು ವಾಪಸ್ ಪಡೆಯಲಾಗಿದೆ. ಈ ಅನಿರೀಕ್ಷಿತ ಬೆಳವಣಿಗೆಯಿಂದಾಗಿ ಆಯೋಗದ ಉಳಿದ ಕಾರ್ಯಗಳನ್ನು ಮುಂದುವರಿಸಲು ಅಸಾಧ್ಯವಾದ ಕಾರಣ, ಅಧ್ಯಕ್ಷರಾದ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ಸೂಚನೆಯಂತೆ ಆಯೋಗದ ಕಾರ್ಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಈ ಘಟನೆಯು ಆಯೋಗ ಮತ್ತು ಸರ್ಕಾರದ ನಡುವೆ ಸಮನ್ವಯದ ಕೊರತೆಯನ್ನು ತೋರಿಸುತ್ತಿದ್ದು, ವರದಿ ಸಲ್ಲಿಕೆಯ ನಂತರವೂ ಮುಂದುವರಿಯಬೇಕಿದ್ದ ಆಡಳಿತಾತ್ಮಕ ಪ್ರಕ್ರಿಯೆಗಳಿಗೆ ಹಿನ್ನಡೆಯಾಗಿದೆ. ಸರ್ಕಾರದ ಈ ನಡೆ ಹಲವು ಚರ್ಚೆಗಳಿಗೆ ಕಾರಣವಾಗಿದೆ.
ನಾಗಮೋಹನ ದಾಸ್ ಅವರಿಗೆ ಅಸಮಾಧಾನ?
ಈ ಬೆಳವಣಿಗೆಯು ಆಯೋಗದ ಅಧ್ಯಕ್ಷರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಆಯೋಗವು ಈಗಾಗಲೇ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದ್ದರೂ, ಕೆಲವು ಪ್ರಮುಖ ದಾಖಲೆಗಳ ನಿರ್ವಹಣೆ ಮತ್ತು ಆಡಳಿತಾತ್ಮಕ ಕಾರ್ಯಗಳನ್ನು ಪೂರ್ಣಗೊಳಿಸಲು ಸೆಪ್ಟೆಂಬರ್ 30ರವರೆಗೆ ಅಂದರೆ 15 ದಿನಗಳ ಕಾಲಾವಕಾಶ ವಿಸ್ತರಣೆಗೆ ಮನವಿ ಮಾಡಿತ್ತು. ಆದರೆ, ಈ ಮನವಿಗೆ ಸರ್ಕಾರದಿಂದ ಯಾವುದೇ ಅಧಿಕೃತ ಉತ್ತರ ಬರುವ ಮುನ್ನವೇ ಈ ಬೆಳವಣಿಗೆ ನಡೆದಿದೆ.
ಯಾವುದೇ ಪೂರ್ವ ಮಾಹಿತಿ ನೀಡದೆ, ಆಯೋಗದ ಅಧ್ಯಕ್ಷರಿಗೆ ಒದಗಿಸಲಾಗಿದ್ದ ವಾಹನ ಮತ್ತು ಇತರ ಸೌಲಭ್ಯಗಳನ್ನು ಸರ್ಕಾರವು ಏಕಾಏಕಿ ಹಿಂಪಡೆದಿದೆ. ಈ ಅನಿರೀಕ್ಷಿತ ಮತ್ತು ಅಸೌಜನ್ಯದ ಕ್ರಮದಿಂದಾಗಿ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಏತನ್ಮಧ್ಯೆ, ತನ್ನ ಕ್ರಮದ ಬಗ್ಗೆ ಉಂಟಾಗಿರುವ ಗೊಂದಲವನ್ನು ನಿವಾರಿಸಲು ಸರ್ಕಾರವು ಸ್ಪಷ್ಟನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ನೋಡಿ: ಬ್ಯಾಂಕ್ ನೌಕರರಿಗೆ ಜೀವನವನ್ನು ಮುಡಿಪಾಗಿಟ್ಟದ್ದ ರತ್ನಾಕರ್ ಶೆಣೈ Janashakthi Media
