ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲ ಹೇಳಿಕೆ | ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!

ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಮಂಜೂರು ಮಾಡಿ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಭಟ್ ವಿರುದ್ಧ ಜಿಲ್ಲೆಯ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಕಳೆದ ಡಿಸೆಂಬರ್ 26ರಂದು ಎಫ್‌ಐಆರ್ ದಾಖಲಾಗಿತ್ತು. ಯುವ ಹೋರಾಟಗಾರ್ತಿ ನಜ್ಮಾ ನಜೀರ್ ಚಿಕ್ಕನೇರಳೆ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಲ್ಲಡ್ಕ ಭಟ್ ಮೇಲೆ ಎಫ್ಐಆರ್‌ ದಾಖಲು ಮಾಡಿದ್ದರು.

ನಜ್ಮಾ ನಜೀರ್ ಅವರು ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು, ಪೊಲೀಸರು ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ದ IPC 354, 294, 509, 506, 153A, 295, 295A, 298 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಸ್ಥಳೀಯರಿಬ್ಬರ ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನ್ಯಾಯಾಲಯವು ಭಟ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಅವಹೇಳನ | ಹೋರಾಟಗಾರ್ತಿ ನಜ್ಮಾ ನಜೀರ್ ದೂರು; ಕಲ್ಲಡ್ಕ ಭಟ್ ವಿರುದ್ಧ ಎಫ್‌ಐಆರ್

ಹೋರಾಟಗಾರ್ತಿ ನಜ್ಮಾ ನಜೀರ್ ಅವರು ದೂರಿನಲ್ಲಿ ಕಲ್ಲಡ್ಕ ಪ್ರಭಾಕರ ಭಟ್‌ ಅವರನ್ನು ‘ವೃತ್ತಿಪರ ಕ್ರಿಮಿನಲ್ ಆರೋಪಿ’ ಎಂದು ಉಲ್ಲೇಖಿಸಿದ್ದರು. ಆತ ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನು ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿ ಸಾವು ನೋವುಗಳನ್ನು ಪ್ರಚೋದಿಸಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.

ಭಾನುವಾರ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ನಡೆದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ಮುಸ್ಲಿಂ ಯುವಕರು ಮಾತ್ರ ಅಲ್ಲ. ಮುಸ್ಲಿಂ ಯುವತಿಯರು ಮೋಸ ಮಾಡುತ್ತಿದ್ದಾರೆ. ಹಿಂದೂ ಯುವಕ ಯುವತಿಯರನ್ನ ಲವ್ ಜಿಹಾದ್ ಮಾಡುತ್ತಿದ್ದಾರೆ. ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ?” ಎಂದು ಹೇಳಿಕೆ ನೀಡಿದ್ದರು.

ಪ್ರಭಾಕರ ಭಟ್‌ ವಿರುದ್ಧ ದಾಖಲಾದ ಪ್ರಕರಣದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜನವರಿ 10ರ ಬುಧವಾರ ಮುಗಿಸಿದ್ದ ನ್ಯಾಯಾಲಯ ಆದೇಶವನ್ನು ಜನವರಿ 17 ಕ್ಕೆ ಕಾಯ್ದಿರಿಸಿತ್ತು. ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಅವರ ಪರವಾಗಿ ಬೆಂಗಳೂರಿನ ಖ್ಯಾತ ವಕೀಲ ಎಸ್. ಬಾಲನ್ ವಿಸ್ತೃತವಾಗಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ಉಳ್ಳಾಲ | ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದವರ ಮೇಲೆ ಸ್ವಯಂ ಪ್ರೇರಿತ ಎಫ್‌ಐಆರ್‌ ದಾಖಲಿಸಿದ ಕಾಂಗ್ರೆಸ್ ಸರ್ಕಾರ!

ನ್ಯಾಯಾಲಯದಲ್ಲಿ ಬಾಲನ್ ಅವರು, ಸುಪ್ರಿಂ ಕೋರ್ಟ್ ಮತ್ತು ಹಲವು ಹೈಕೋರ್ಟ್ ಗಳ ತೀರ್ಪುಗಳ ಪ್ರಕಾರ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾರೆ ಎಂದು ವಾದಿಸಿದ್ದು, “ದೇಶದ ಭದ್ರತೆ, ಸೌಹಾರ್ದತೆಗೆ ಈ ಆರೋಪಿ ಕಂಟಕವಾಗಿದ್ದಾರೆ. ಈ ಹಿಂದಿನ ಐಪಿಸಿ ಮಾತ್ರವಲ್ಲ, ಈಗಿನ ನ್ಯಾಯ ಸಂಹಿತಾ ಮತ್ತು ಸಾಕ್ಷ್ಯ ಅಧಿನಿಯಮದ ಪ್ರಕಾರವೂ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾರೆ” ಎಂದು ಕಾನೂನು, ಕಾಯ್ದೆಗಳನ್ನು ಉಲ್ಲೇಖಿಸಿ ಅವರು ವಾದ ಮಂಡಿಸಿದ್ದರು.

ಆರೋಪಿ ಕಲ್ಲಡ್ಕ ಭಟ್ ದೇಶ ಒಡೆಯುವ ಸಂಘಟಿತ ಕೃತ್ಯ ಮಾಡಿದ್ದಾರೆ. ಆ ಕಾರಣಕ್ಕಾಗಿ ಅವರ ವಿರುದ್ದ ಹೆಚ್ಚುವರಿಯಾಗಿ ಕೋಕಾ ಅ್ಯಕ್ಟ್ ಮತ್ತು ಯುಎಪಿಎ ಅ್ಯಕ್ಟ್, ಟೆರರಿಸ್ಟ್ ಅ್ಯಕ್ಟ್ ಗಳನ್ನು ಸೇರಿಸಬೇಕಿದೆ ಎಂದು ಬಾಲನ್ ಅವರು ನ್ಯಾಯಾಲಯಕ್ಕೆ ಹೇಳಿದ್ದರು.

ಈ ಎಲ್ಲಾ ಕಾರಣಕ್ಕೆ ಆರೋಪಿ ಪೊಲೀಸ್ ಕಸ್ಟಡಿಗೆ ಬೇಕಾಗಿದ್ದಾರೆ. ಆರೋಪಿ ಕಲ್ಲಡ್ಕ ಭಟ್ಟ ಹೇಳಿರುವ ಹೇಳಿಕೆಯನ್ನು ಅವರಿಂದ ದೃಢಪಡಿಸಿಕೊಂಡು, ಹೇಳಿಕೆಯ ಮಾದರಿ ಪಡೆದುಕೊಂಡು ಫಾರೆನ್ಸಿಕ್ ಲ್ಯಾಬ್ ಗೆ ಕಳಿಸಬೇಕಿದೆ. ಆರೋಪಿ ಮೇಲೆ ರೌಡಿ ಶೀಟ್‌ ತೆರೆಯಲು ಎಲ್ಲ ಆಧಾರಗಳಿದ್ದು, ಇವುಗಳ ಹಿನ್ನಲೆಯಲ್ಲಿ ಆರೋಪಿಯನ್ನು ತನಿಖೆಗೆ ಒಳಪಡಿಸಬೇಕಿದೆ. ಹಾಗಾಗಿ ಜಾಮೀನು ನಿರಾಕರಿಸಬೇಕು ಎಂದು ಬಾಲನ್ ನ್ಯಾಯಾಯವನ್ನು ಕೇಳಿಕೊಂಡಿದ್ದರು. ಈ ವೇಳೆ ಕಲ್ಲಡ್ಕ ಪ್ರಭಾಕರ ಭಟ್ ಪರ ವಕೀಲರು ಮತ್ತು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು ಎಂದು ವರದಿಯಾಗಿದೆ.

ವಿಡಿಯೊ ನೋಡಿ: ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಆಧಾರ್ ಆಧಾರಿತ ವೇತನ : ಮೋದಿ ಸರ್ಕಾರದ ಕ್ರೂರ ಉಡುಗೊರೆ Janashakthi Media

Donate Janashakthi Media

Leave a Reply

Your email address will not be published. Required fields are marked *