ಹಾವೇರಿ: ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಸ್ಥಾಪಿಸುವ ಮೂಲಕ ಕನ್ನಡ ಶಾಲೆಗಳನ್ನು ಮುಚ್ಚುವ ಹುನ್ನಾರ ‘ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ’ ಎಂದು ಆರೋಪಿಸಿ ನಗರದಲ್ಲಿ ಗುರುವಾರ ದುಂಡು ಮೇಜಿನ ಸಭೆ ನಡೆಸಿದ ಎಸ್ಎಫ್ಐ ಮುಖಂಡರು, ‘ಕನ್ನಡ ಶಾಲೆ ಉಳಿಸಲು ನಿರಂತರವಾಗಿ ಹೋರಾಟ ನಡೆಸಲಾಗುವುದು’ ಎಂದು ಘೋಷಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಘಟಕದ ವತಿಯಿಂದ ದುಂಡು ಮೇಜಿನ ಸಭೆ ಏರ್ಪಡಿಸಲಾಗಿತ್ತು. ಘಟಕದ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಸಾಹಿತ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ : ಸರಕಾರಿ ಕನ್ನಡ ಶಾಲೆಗಳನ್ನು ಮುಚ್ಚುವುದೆಂದರೆ… ನಾಡದ್ರೋಹದ ಕೆಲಸವಲ್ಲವೇ?
28ರಂದು ಸಂಜೆ ಗಾಂಧಿ ವೃತ್ತದಲ್ಲಿ ಸರ್ಕಾರಿ ಶಾಲೆಗಳ ಉಳಿವಿಗಾಗಿ ನಾಟಕ ಪ್ರದರ್ಶನ ಮಾಡುವುದು, 29ರಂದು ಪ್ರತಿಭಟನೆ ನಡೆಸುವುದು ಹಾಗೂ ಸರ್ಕಾರಿ ಶಾಲೆಗಳ ಉಳಿವಿಗಾಗಿ ಸಮಾವೇಶ ಏರ್ಪಡಿಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.
‘ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಸ್ಥಾಪನೆ ಹೆಸರಿನಲ್ಲಿ, ಹಲವು ವರ್ಷಗಳ ಕನ್ನಡ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚುತ್ತಿದೆ. ಇದರಿಂದ ಕನ್ನಡ ಶಾಲೆಗಳು ಸಂಪೂರ್ಣವಾಗಿ ಬಾಗಿಲು ಮುಚ್ಚಲಿವೆ. ಸರ್ಕಾರದ ಈ ನಿರ್ಧಾರ ಖಂಡನೀಯ. ಇದರ ವಿರುದ್ಧ ಹೋರಾಟ ನಡೆಸೋಣ’ ಎಂದು ಸಭೆಯಲ್ಲಿದ್ದವರು ತೀರ್ಮಾನಿಸಿದರು.
ಸಭೆಯಲ್ಲಿದ್ದ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ‘ಕರ್ನಾಟಕ ಪಬ್ಲಿಕ್ ಸ್ಕೂಲ್ ಮಂಜೂರಾಗಿರುವುದು ಸ್ವಾಗತಾರ್ಹ. ಆದರೆ, ಅದರ ಹೆಸರಿನಲ್ಲಿ ಎಲ್ಲ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು. ಖಾಸಗಿ ಶಾಲೆಗಳು ಇಂದು ಹೆಚ್ಚಾಗಿವೆ. ಇವುಗಳಿಗೆ ಸರ್ಕಾರ ನಿಯಂತ್ರಣ ಮಾಡುವ ಬದಲಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಬೇಸರದ ಸಂಗತಿ’ ಎಂದರು.
ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, ‘ದೇಶದಲ್ಲಿ ಸಮಾನ ಶಿಕ್ಷಣ ಜಾರಿಗೆ ತರಬೇಕು. ಅದನ್ನು ಬಿಟ್ಟು ಸರ್ಕಾರ ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸಿರುವುದು ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ, ಹೋರಾಟದ ಮೂಲಕ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದರು.
ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಎಸ್., ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಪರಿಮಳಾ ಜೈನ್, ರೇಣುಕಾ ಗುಡಿಮನಿ, ತಿಪ್ಪೇಸ್ವಾಮಿ ಹೊಸಮನಿ, ಎಂ.ಕೆ. ಮಖ್ಬುಲ್, ರುದ್ರಪ್ಪ ಜಾಬೀನ್, ರೇಣುಕಾ ಕಹಾರ, ನಾರಾಯಣ ಕಾಳೆ, ಜುಬೇದ ನಾಯ್ಕ, ನಾಗರಾಜ ದಶಮನಿ, ಅರುಣ್ ನಾಗವತ್ ಹಾಗೂ ಇತರರು ಸಭೆಯಲ್ಲಿದ್ದರು.
ಇದನ್ನೂ ನೋಡಿ : ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರಕಾರ | ತಳ ಸಮುದಾಯಕ್ಕೆ ಎಸಗುತ್ತಿರುವ ದ್ರೋಹ Janashakthi Media
