ಕ್ಷೌರ ಮಾಡಿಸಿಕೊಳ್ಳಲು ಬಂದ ದಲಿತ ಯುವಕರ ಮೇಲೆ ಹಲ್ಲೆ : ಮನನೊಂದ ವಿಷ ಸೇವಿಸಿದ ಸಹೋದರರು

ಕೊಪ್ಪಳ: ಕ್ಷೌರ ಮಾಡಿಸಿಕೊಳ್ಳಲು ಬಂದ ದಲಿತ ಯುವಕರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದ್ದು ನಿಂದನೆಗೆ ಒಳಗಾದ ಯುವಕರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಗ್ರಾಮದ ಸಣ್ಣ ಹನುಮಂತು ಹಾಗೂ ಬಸವರಾಜ ಎಂಬ ಸಹೋದರರ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ದಲಿತ ಸಮುದಾಯದ ಯುವಕರಿಗೆ ಕ್ಷೌರ ಮಾಡಲು ನಿರಾಕರಣೆ ಹಿನ್ನಲೆಯಲ್ಲಿ ದಲಿತರು ಸವರ್ಣಿಯರ ಮದ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಜಗಳದಿಂದ ಹಲ್ಲೆಗೆ ತಿರುಗಿದೆ.ಜೂನ್ 6 ರಂದು ಬೆಳಿಗ್ಗೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸಮುದಾಯದ ಜನ ಯುವಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ದಲಿತ ಸಮುದಾಯದ ದೇವಪ್ಪ ಎಂಬುವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ ಘಟನೆ ಸಂಬಂಧ ಹೊಸಳ್ಳಿ ಗ್ರಾಮದ ಖಾಲಿ ಜಾಗವೊಂದರಲ್ಲಿ ಕ್ಷೌರ ಮಾಡುತ್ತಿದ್ದ ಕ್ಷೌರಿಕರಾದ ಮಲ್ಲಪ್ಪ, ಕಳಕಪ್ಪ ಸೇರಿದಂತೆ ಒಟ್ಟು 16 ಜನರ ವಿರುದ್ಧ ಯಲಬುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *